ಮಂಡ್ಯ ಜಿಲ್ಲೆಯಲ್ಲಿ ಹಲವು ಸಮಸ್ಯೆಗಳಿದ್ದು, ಅವುಗಳನ್ನು ಹಂತ ಹಂತವಾಗಿ ಪರಿಹರಿಸಿ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಹೇಳಿದರು.
ನಗರದ ಸಿಲ್ವರ್ ಜ್ಯೂಬ್ಲಿ ಪಾರ್ಕ್ನಲ್ಲಿ ಶನಿವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
“ಮಂಡ್ಯ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ 50 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದಾರೆ. ಈ ವರ್ಷ ಮೈಷುಗರ್ ಸುಮಾರು 5 ಲಕ್ಷ ಟನ್ ಕಬ್ಬು ಅರೆಯಲಿದ್ದು, ಇದಕ್ಕಾಗಿ ಸುಮಾರು 35 ಸಾವಿರ ಮಂದಿ ರೈತರು ಒಪ್ಪಂದ ಮಾಡಿಕೊಂಡಿದ್ದಾರೆ. ಮೈಷುಗರ್ ಇನ್ನೂ 2 ಲಕ್ಷ ಟನ್ ಕಬ್ಬು ಅರೆಯುವ ಸಾಧ್ಯತೆಯೂ ಇದೆ” ಎಂದು ತಿಳಿಸಿದರು.
“2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎಲ್ಲ ಏಳು ಸ್ಥಾನಗಳನ್ನು ಕಳೆದುಕೊಂಡಾಗ ವಿಧಾನಸಭೆ ಅಥವಾ ಸ್ಥಳೀಯ ಸಂಸ್ಥೆಗಳು ಮತ್ತು ಸಹಕಾರ ಸಂಸ್ಥೆಗಳಲ್ಲಿ ಪ್ರಾತಿನಿಧ್ಯವಿರಲಿಲ್ಲ. ಆದರೆ, ಜೆಡಿಎಸ್ ಎಲ್ಲ ಏಳು ಸ್ಥಾನಗಳನ್ನು ಗೆದ್ದ ನಂತರವೂ ಮಂಡ್ಯದ ಅಭಿವೃದ್ಧಿಗೆ ಏನನ್ನೂ ಮಾಡಲಿಲ್ಲ. ಜನತೆಯ ಸೇವೆ ನಿರೀಕ್ಷೆಯಲ್ಲಿ ಮಂಡ್ಯದ ಜನರು ಕಾಂಗ್ರೆಸ್ಗೆ ಮತ್ತೊಂದು ಅವಕಾಶ ನೀಡಿದ್ದಾರೆ” ಎಂದು ಚೆಲುವರಾಯಸ್ವಾಮಿ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಸುದ್ದಿ ಓದಿದ್ದೀರಾ? ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ 1500 ಪ್ರಯಾಣಿಕರಿಗೆ ಅಗತ್ಯ ನೆರವು
“ಕಾಂಗ್ರೆಸ್ ಕರ್ನಾಟಕದ ಜನರಿಗೆ ನೀಡಿದ ಐದು ಭರವಸೆಗಳನ್ನೂ ಜಾರಿಗೊಳಿಸಿದೆ. ಭಾರತೀಯ ರಾಜಕೀಯದ ಇತಿಹಾಸದಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟವು ಅಂದಾಜು 59 ಸಾವಿರ ಕೋಟಿ ರೂ.ಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಅನುಮೋದನೆ ನೀಡಿದೆ” ಎಂದು ಹೇಳಿದರು.
ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರು ನಿಡಘಟ್ಟದಲ್ಲಿ ಚೆಲುವರಾಯಸ್ವಾಮಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಶಾಸಕ ಪಿ ಎಂ ನರೇಂದ್ರಸ್ವಾಮಿ, ಪಿ ರವಿಕುಮಾರ್, ರಮೇಶ್ ಬಾಬು ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿ ಡಿ ಗಂಗಾಧರ್ ಇದ್ದರು.