ಕೊಡಗು ಜಿಲ್ಲೆ, ಪೊನ್ನಂಪೇಟೆ ತಹಶೀಲ್ದಾರ್ ಕಚೇರಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಶುಕ್ರವಾರ ಭೇಟಿ ನೀಡಿ ಭೂ ಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದು ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದರು.
ಸರ್ಕಾರ ಭೂ ಸುರಕ್ಷತಾ ಯೋಜನೆಯಡಿ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಕಲ್ಪಿಸುತ್ತಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ಯಾವ ರೀತಿಯಾಗಿ ದಾಖಲೆಗಳು ಅಪ್ಡೇಟ್ ಮಾಡುತ್ತಿದ್ದಾರೆ ಎಂಬ ಮಾಹಿತಿ ಪಡೆದರು. ಸರ್ಕಾರ ಕಂದಾಯ ಇಲಾಖೆಯಲ್ಲಿ ಭೂ ದಾಖಲೆಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಸುಧಾರಣೆ ತಂದಿದ್ದು, ಅವುಗಳನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಅನುಸರಿಸಬಾರದು ಎಂದರು.
ಭೂ ದಾಖಲೆ ಸಂರಕ್ಷಣೆ ಸಂಬಂಧ ಹೊಸ ಹೊಸ ವಿಧಾನಕ್ಕೆ ಹೊಂದಿಕೊಂಡು, ಸಾರ್ವಜನಿಕರಿಗೆ ಸಕಾಲದಲ್ಲಿ ನಾಗರಿಕ ಸೇವೆ ಒದಗಿಸಬೇಕು. ಹೊಸ ಹೊಸ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವುದರಿಂದ ಸಾರ್ವಜನಿಕರಿಗೆ ಕಂದಾಯ ಇಲಾಖೆಯ ಸೇವೆಗಳನ್ನು ತ್ವರಿತವಾಗಿ ಕಲ್ಪಿಸಲು ಸಹಕಾರಿಯಾಗಲಿದೆ. ಆ ನಿಟ್ಟಿನಲ್ಲಿ ಎಲ್ಲಾ ಹಂತದ ಸಿಬ್ಬಂದಿಗಳು ತಂಡವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ತಾಕೀತು ಮಾಡಿದರು.
ತಾಲ್ಲೂಕು ಕಚೇರಿಯಲ್ಲಿ ಭೂ ಮಾಲೀಕರ ಮೂಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಸಂರಕ್ಷಣೆ ಮಾಡುವಲ್ಲಿ ಸರ್ಕಾರ ಮುಂದಾಗಿದೆ. ಭೂಮಿಗೆ ಸಂಬಂಧಿಸಿದಂತೆ ಭೂ ದಾಖಲೆಗಳು ಕಳೆದು ಹೋಗದಂತೆ ತಡೆಯುವುದು ಪ್ರಮುಖ ಉದ್ದೇಶವಾಗಿದೆ. ಭೂ ದಾಖಲೆಗಳು ಕಾಣದಿರುವುದು ಅಥವಾ ತಿದ್ದುಪಡಿ ಮಾಡುವುದು ಮತ್ತಿತರ ಗೊಂದಲಗಳಿಗೆ ಆಸ್ಪದ ಆಗದಂತೆ ಭೂ ಮಾಲೀಕರಿಗೆ ದಾಖಲೆಯ ‘ಗ್ಯಾರಂಟಿ’ ನೀಡುವುದು ಭೂ ಸುರಕ್ಷತಾ ಯೋಜನೆಯ ಉದ್ದೇಶವಾಗಿದೆ ಎಂದು ವಿವರಿಸಿದರು.

ಭೂ ಮಾಲೀಕರ ಭೂ ದಾಖಲೆಗಳು ಸಿಗುವಂತಾಗಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಇದರಿಂದ, ಕಳೆದು ಹೋಗುವ, ತಿದ್ದುವ ಅಥವಾ ಸೃಷ್ಟಿ ಮಾಡುವ ದಂಧೆಗೆ ಕಡಿವಾಣ ಬೀಳಲಿದೆ. ಭೂ ದಾಖಲೆಗಳಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ 100 ಕೋಟಿಗೂ ಹೆಚ್ಚು ಪುಟಗಳನ್ನು ಸ್ಕ್ಯಾನ್ ಮಾಡಲು ಉದ್ದೇಶಿಸಲಾಗಿದೆ. ಆ ನಿಟ್ಟಿನಲ್ಲಿ ಈಗಾಗಲೇ ಮೂವತ್ತ ಮೂರುವರೆ ಕೋಟಿ ಪುಟಗಳನ್ನು ಸ್ಕ್ಯಾನ್ ಮಾಡಲಾಗಿದೆ ಎಂದು ಹೇಳಿದರು.
ಭೂ ಮಾಲೀಕರು ಭೂಸುರಕ್ಷಾ ಯೋಜನೆಯಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹತ್ತಿರದ ನಾಡಕಚೇರಿಗೆ ಹೋಗಿ ಅಲ್ಲಿಯೂ ಸಹ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದೊಂದು ಗ್ಯಾರಂಟಿ ನೀಡುವ ಯೋಜನೆಯಾಗಿದೆ ಎಂದು ಹೇಳಿದರು.
ಪೊನ್ನಂಪೇಟೆ ಮತ್ತು ಕುಶಾಲನಗರ ತಾಲ್ಲೂಕು ಘೋಷಣೆಯಾಗಿ 7 ವರ್ಷ ಕಳೆದಿದೆ. ಆ ದಿಸೆಯಲ್ಲಿ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ತಲಾ ₹8.65 ಕೋಟಿ ರೂಪಾಯಿಯನ್ನು ಮಂಜೂರು ಮಾಡಿದ್ದು, ಟೆಂಡರ್ ಪ್ರಕ್ರಿಯೆಯೂ ಸಹ ಆಗಿದ್ದು, ಶೀಘ್ರ ಕಾಮಗಾರಿಗೆ ಚಾಲನೆ ದೊರೆಯಲಿದೆ ಎಂದು ಮಾಹಿತಿ ನೀಡಿದರು.

ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ಮಣ್ಣು, ಗುಡ್ಡ ಕುಸಿಯುವುದನ್ನು ತಡೆಯುವ ನಿಟ್ಟಿನಲ್ಲಿ ತಡೆಗೋಡೆ ನಿರ್ಮಾಣಕ್ಕೆ ₹50 ಕೋಟಿ ರೂಪಾಯಿಯನ್ನು ಮಂಜೂರು ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಯವರು ಸೂಚಿಸಿದ್ದಾರೆ. ಪ್ರಾಕೃತಿಕ ವಿಕೋಪದಡಿ ಜಿಲ್ಲಾಧಿಕಾರಿಯವರ ಪಿಡಿ ಖಾತೆಗೆ ಹಣ ಮಂಜೂರು ಮಾಡಲಿದ್ದಾರೆ. ಈ ಸಂಬಂಧ ಮಳೆಹಾನಿ ಪ್ರದೇಶ ವೀಕ್ಷಣೆ ಹಾಗೂ ಕಂದಾಯ ಇಲಾಖೆಗೆ ಸಂಬಂಧಿಸಿದ ಮಾಹಿತಿ ಪಡೆಯಲು ಕೊಡಗು ಜಿಲ್ಲಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಎಸ್. ಪೊನ್ನಣ್ಣ ಅವರು ಮಳೆ ಹಾನಿ ಪ್ರದೇಶ, ತಾಲ್ಲೂಕು ಆಡಳಿತ ಭವನ ನಿರ್ಮಾಣದ ಜಾಗ, ಬಲ್ಯ ಮಂಡೂರು ಬಳಿ ಸೇತುವೆ ಮತ್ತಿತ್ತರ ಬಗ್ಗೆ ಹಲವು ಮಾಹಿತಿ ನೀಡಿದರು. ಬಳಿಕ ಬಲ್ಯಮಂಡೂರು ಗ್ರಾ.ಪಂ.ಯಲ್ಲಿನ ಸಕಾಲ ಯೋಜನಾ ಕೇಂದ್ರಕ್ಕೆ ಸಚಿವರು ಭೇಟಿ ನೀಡಿ ಸಾರ್ವಜನಿಕರ ಸೇವೆ ಒದಗಿಸುತ್ತಿರುವ ಸಂಬಂಧ ಮಾಹಿತಿ ಪಡೆದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಭೂ ದಾಖಲೆಗಳ ಸಂರಕ್ಷಣೆ, ಸಕಾಲ ಯೋಜನೆ ಸೇರಿದಂತೆ ಹಲವು ಕಂದಾಯ ವಿಚಾರಗಳ ಕುರಿತು ಸಚಿವರಿಗೆ ಮಾಹಿತಿ ಒದಗಿಸಿದರು.
ಈ ಸುದ್ದಿ ಓದಿದ್ದೀರಾ?ಮೈಸೂರು | ಅರಣ್ಯ ಇಲಾಖೆಯಿಂದ ಭಿಕ್ಷಾ ಪರಿಹಾರ : ಬಡಗಲಪುರ ನಾಗೇಂದ್ರ
ಜಿ.ಪಂ. ಸಿಇಓ ಆನಂದ್ ಪ್ರಕಾಶ್ ಮೀನಾ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮಜ ಉತ್ತಪ್ಪ, ತಹಶೀಲ್ದಾರ್ ಮೋಹನ್ ಕುಮಾರ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಜಿ.ಪಂ. ಕಾರ್ಯಪಾಲಕ ಎಂಜಿನಿಯರ್ ಜಿ. ಕೆ. ನಾಯಕ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸತೀಶ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.