ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಮಂಗಳೂರು ನಗರಕ್ಕೆ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡಿ, ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿದ ಮಂಗಳೂರು ಸಿಸಿಬಿ ಪೊಲೀಸರು 6.325 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿ ನಿಶಾಂತ್ ಶೆಟ್ಟಿ (36) ಎಂಬಾತ ಗಾಂಜಾವನ್ನು ಸಣ್ಣ ಸಣ್ಣ ಪ್ಯಾಕೆಟ್ನಲ್ಲಿ ರೈಲಿನಲ್ಲಿ ಸಾಗಾಟ ಮಾಡಿಕೊಂಡು ಬಂದು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ತೊಕ್ಕೊಟ್ಟು ಒಳಪೇಟೆಯ ಕೃಷ್ಣನಗರ ಪರಿಸರದಲ್ಲಿ ಗೂಡ್ಸ್ ಟೆಂಪೋವೊಂದರಲ್ಲಿ ಗಾಂಜಾ ಸಾಗಿಸಿ ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಬಂಧಿಸಿದ್ದಾರೆ.
ಆರೋಪಿಯಿಂದ ಗೂಡ್ಸ್ ಟೆಂಪೋ, ₹1.50 ಲಕ್ಷ ಮೌಲ್ಯದ 6 ಕೆಜಿ 325 ಗ್ರಾಂ ಗಾಂಜಾ, 2 ಮೊಬೈಲ್ ಫೋನ್ಗಳು, ಡಿಜಿಟಲ್ ತೂಕ ಮಾಪಕ ಮತ್ತಿತರ ವಸ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಮೌಲ್ಯ ₹9,11,500 ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದೆದಿ ಓದಿದ್ದೀರಾ? ರಾಯಚೂರು | 2 ದಿನದಲ್ಲಿ ತೀರ್ಮಾನ ಕೈಗೊಳ್ಳದಿದ್ದರೆ ಜನರ ತೀರ್ಮಾನಕ್ಕೆ ಬದ್ಧ; ಬಿಜೆಪಿ ಟಿಕೆಟ್ ಆಕಾಂಕ್ಷಿ ಬಿ ವಿ ನಾಯಕ
ಆರೋಪಿಯ ವಿರುದ್ಧ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಹಲ್ಲೆ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ಅಕ್ರಮ ಪಿಸ್ತೂಲ್ ಹೊಂದಿದ ಮತ್ತು ಕಳವು ಪ್ರಕರಣ, ಬರ್ಕೆ ಠಾಣೆಯಲ್ಲಿ ಸರಕಳ್ಳತನ ಪ್ರಕರಣ, ಉಳ್ಳಾಲ ಠಾಣೆಯಲ್ಲಿ ಹಲ್ಲೆ ಪ್ರಕರಣ, ವಿಟ್ಲ ಠಾಣೆಯಲ್ಲಿ ಹಲ್ಲೆ ಮತ್ತು ಕಳ್ಳತನ ಪ್ರಕರಣ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಗಾಂಜಾ ಮಾರಾಟ ಸಹಿತ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.