ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೊಂಡಾಣ ಕ್ಷೇತ್ರದ ಪಿಲಿಚಾಮುಂಡಿ, ಬಂಟ, ವೈದ್ಯನಾಥ ದೇವಸ್ಥಾನಕ್ಕೆ ಸೇರಿದ ನಿರ್ಮಾಣ ಹಂತದ ಭಂಡಾರಮನೆಯನ್ನು ಭಾನುವಾರ ರಾತ್ರಿ ಕಿಡಿಗೇಡಿಗಳು ಸಂಪೂರ್ಣವಾಗಿ ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಉಳ್ಳಾಲ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಮುತ್ತಣ್ಣ ಶೆಟ್ಟಿ, ಧೀರಜ್ ಹಾಗೂ ಶಿವರಾಜ್ ಎಂಬುವವರು ಬಂಧಿತ ಆರೋಪಿಗಳಾಗಿದ್ದಾರೆ.
ತುಳುನಾಡಿನ ಪುರಾಣ ಪ್ರಸಿದ್ಧ ಪಿಲಿಚಾಮುಂಡಿ ದೇವಸ್ಥಾನಕ್ಕೆ ಸೇರಿದ ನಿರ್ಮಾಣ ಹಂತದ ಭಂಡಾರ ಮನೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದನ್ನು ಖಂಡಿಸಿದ ಭಕ್ತರು ಕೋಟೆಕಾರು ಪಟ್ಟಣ ಪಂಚಾಯತ್ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ದೇವಸ್ಥಾನದ ಭಂಡಾರ ಮನೆ ಕಟ್ಟಡವನ್ನು ಮರು ನಿರ್ಮಾಣ ಮಾಡಬೇಕೆಂದು ಆಗ್ರಹಿಸಿದ್ದರು.
ದೇವಸ್ಥಾನದ ಕಟ್ಟಡ ಧ್ವಂಸಗೊಳಿಸಲು ಕಾರಣ
ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ ಸೇರುವ ಕೊಂಡಾಣ ದೇವಸ್ಥಾನದ ಭಂಡಾರ ಮನೆಯನ್ನು ಮುಜರಾಯಿ ಇಲಾಖೆಗೆ ಸೇರಿಸಲು ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಕೃಷ್ಣಶೆಟ್ಟಿ ತಾಮಾರ್ ಸೇರಿದಂತೆ ಹಲವರು ಪ್ರಯತ್ನಿಸಿದ್ದರು. ಆದರೆ ಇದಕ್ಕೆ ಖಾಸಗಿ ಭಂಡಾರ ಮನೆಯವರು ಸಮ್ಮತಿ ನೀಡಿರಲಿಲ್ಲ. ಅಲ್ಲದೆ, ಸಮಿತಿಯು ದೈವಗಳಿಗೆ ಬೇರೆ ಭಂಡಾರ ಮನೆ ನಿರ್ಮಾಣಕ್ಕೆ ಮುಂದಾಗಿತ್ತು.
ದೇಗುಲದ ಪಕ್ಕದ ಜಾಗದಲ್ಲಿ ಜನವರಿ 8 ರಂದು ಕೃಷ್ಣಶೆಟ್ಟಿ ನೇತ್ವತ್ವದಲ್ಲಿ ಭಂಡಾರ ಮನೆಯ ಶಿಲಾನ್ಯಾಸ ಮಾಡಲಾಗಿತ್ತು. ದಾನಿಗಳ ದೇಣಿಗೆಯಿಂದ ಭಂಡಾರ ಮನೆಯ ಕಾಮಗಾರಿ ಪೂರ್ಣಗೊಂಡಿತ್ತು. ಈ ಮಧ್ಯೆ ಸಮಿತಿಯ ಅವಧಿ ಮುಗಿದ ಹಿನ್ನೆಲೆಯಲ್ಲಿ ಸಮಿತಿ ಅಧ್ಯಕ್ಷ ಕೃಷ್ಣಶೆಟ್ಟಿ ಅವರು ಎರಡು ದಿನದ ಹಿಂದಷ್ಟೇ ಅಧಿಕಾರ ಹಸ್ತಾಂತರಿಸಿದ್ದರು. ಕೃಷ್ಣ ಶೆಟ್ಟಿ ಅಧ್ಯಕ್ಷ ಸ್ಥಾನದಿಂದ ಇಳಿಯುತ್ತಿದ್ದಂತೆ ಭಂಡಾರ ಮನೆ ಧ್ವಂಸಗೊಂಡಿದೆ.
ಜೆಸಿಬಿಯಿಂದ ಏಕಾಏಕಿ ನಿರ್ಮಾಣ ಹಂತದ ಭಂಡಾರ ಮನೆ ನೆಲಸಮಗೊಳಿಸಲಾಗಿದ್ದು, ಕಾರ್ಣಿಕ ದೈವದ ಕೋಟ್ಯಂತರ ರೂಪಾಯಿ ಒಡವೆಗಳ ಅಧಿಪತ್ಯಕ್ಕಾಗಿ ನಡೆದ ಸಂಘರ್ಷ ಇದಾಗಿದೆ ಎಂದು ಆರೋಪಿಸಲಾಗಿದೆ. ಸದ್ಯ ಮುತ್ತಣ್ಣ ಶೆಟ್ಟಿ ಕುಟುಂಬಸ್ಥರ ಸುಪರ್ದಿಯಲ್ಲೇ ಒಡವೆಗಳಿದ್ದು, ಘಟನೆ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಆನಂದ್ ದೂರಿನ ಅನ್ವಯ ಐಪಿಸಿ 143, 147, 148, 295, 427, 149 ಮತ್ತು ಕರ್ನಾಟಕ ಆಸ್ತಿ ನಾಶ ಮತ್ತು ನಷ್ಟ ತಡೆ ಕಾಯ್ದೆ ಅಡಿ ಎಫ್ಐಆರ್ ದಾಖಲಾಗಿತ್ತು. ಪ್ರಕರಣ ಸಂಬಂಧ ಉಳ್ಳಾಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಂಡಾಣ ಪಿಲಿಚಾಮುಂಡಿ ದೇವಸ್ಥಾನಕ್ಕೆ ಒಟ್ಟು 16 ಗುರಿಕಾರರು ಇದ್ದಾರೆ. ಇವರೆಲ್ಲರೂ ನೂತನ ಭಂಡಾರ ಮನೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ಬಗ್ಗೆ ಧಾರ್ಮಿಕ ದತ್ತಿ ಕಮಿಷನರ್ ಹಾಗೂ ತಹಶೀಲ್ದಾರ್ಗೆ ದೂರು ನೀಡಲಾಗಿತ್ತು. ಹೀಗಿದ್ದರೂ ಕಾಮಗಾರಿ ನಡೆಯುತ್ತಿದ್ದ ಕಾರಣ ಧ್ವಂಸಗೈದಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು.