ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದ ದಲಿತ ಕಾಲೋನಿಗಳಲ್ಲಿ ಶೀಘ್ರವೇ ಕುಂದುಕೊರತೆ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶುಕುಮಾರ್ ತಿಳಿಸಿದ್ದಾರೆ.
ಭಾನುವಾರ ನಡೆದ ಎಸ್ಸಿ/ಎಸ್ಟಿ ಕುಂದುಕೊರತೆ ಸಭೆಯಲ್ಲಿ ಮಾತನಾಡಿ, ಈಗಾಗಲೇ ನಗರ ಪೊಲೀಸ್ ಆಯುಕ್ತರ ಕಚೇರಿ ಮತ್ತು ಪೊಲೀಸ್ ಠಾಣೆಗಳಲ್ಲಿ ಸಭೆಗಳು ನಡೆಯುತ್ತಿವೆ. ಅಂತೆಯೇ, ಬೀಟ್ ಸಭೆಗಳನ್ನು ನಡೆಸಲಾಗುತ್ತಿದೆ. ಹಾಗಾಗಿ ಆ ಸಭೆಗಳಲ್ಲಿ ಕೆಲವೇ ಜನರು ಭಾಗವಹಿಸುತ್ತಾರೆ. ಆದ್ದರಿಂದ, ದಲಿತ ಕಾಲೋನಿಗಳಲ್ಲಿ ಕುಂದುಕೊರತೆ ಸಭೆಗಳನ್ನು ನಡೆಸಲು ನಿರ್ಧರಿಸಲಾಗಿದೆ. ಇದರಿಂದ ಸಮುದಾಯದ ಸಮಸ್ಯೆಗಳನ್ನು ಹಿರಿಯ ಅಧಿಕಾರಿಗಳು ತಕ್ಷಣ ಪರಿಹರಿಸಬಹುದು” ಎಂದು ತಿಳಿಸಿದರು.
“ಇನ್ಸ್ಪೆಕ್ಟರ್ಗಳು ಮತ್ತು ಸಬ್ ಇನ್ಸ್ಪೆಕ್ಟರ್ಗಳು ಸಭೆಗಳನ್ನು ನಡೆಸಲು ಕಾಲೋನಿಗಳಿಗೆ ಭೇಟಿ ನೀಡುತ್ತಾರೆ. ಒಂದು ಕಾಲೋನಿಯಲ್ಲಿ ಬಹುತೇಕ ಪ್ರಮುಖ ಸಮಸ್ಯೆಗಳಿದ್ದರೆ, ಡಿಸಿಪಿಗಳು ಮತ್ತು ಎಸಿಪಿಗಳೂ ಕೂಡ ಸಭೆಗಳಲ್ಲಿ ಭಾಗವಹಿಸುತ್ತಾರೆ. ಆಯ್ದ ಕಾಲೋನಿಯಲ್ಲಿ ವಾರಕ್ಕೊಮ್ಮೆ ಸಭೆ ನಡೆಸಲಾಗುವುದು. ಈ ಬಗ್ಗೆ ಶೀಘ್ರದಲ್ಲೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು” ಎಂದರು.
ಈ ಸುದ್ದಿ ಓದಿದ್ದೀರಾ? ಸಚಿವರಿಗೆ ಖಾತೆ ಹಂಚಿದ ಸಿದ್ದರಾಮಯ್ಯ; ಯಾರಿಗೆ ಯಾವ ಖಾತೆ? ಇಲ್ಲಿದೆ ಮಾಹಿತಿ
ಕಳೆದ ಒಂದು ವರ್ಷದಿಂದ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ಎಸ್ಸಿ/ಎಸ್ಟಿ ಸಭೆಗಳ ಬಗ್ಗೆ ಸದಸ್ಯೆ ಅಮಲಾ ಜ್ಯೋತಿ ಅವರ ಪ್ರಶ್ನೆಗೆ ಉತ್ತರಿಸಿದ ಡಿಸಿಪಿ, ಈ ವಿಷಯವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದರು.
ಕಂಕನಾಡಿಯ ಪ್ರೀತಿ ನಗರದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸುವಂತೆ ದಲಿತ ಸದಸ್ಯರು ಮಾಡಿದ ಮನವಿಗೆ ಪ್ರತಿಕ್ರಿಯಿಸಿದ ಡಿಸಿಪಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.