ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಸರನ್ನು ಬಳಸದೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಕನಿಷ್ಠ 10% ಮತಗಳನ್ನು ನಳಿನ್ ಕುಮಾರ್ ಕಟೀಲ್ ಗಳಿಸಲಿ ಎಂದು ಹಿಂದು ಮಹಾಸಭಾ ಮತ್ತು ಅಭಿನವ ಭಾರತ ಸಂಘಟನೆಯ ಮುಖಂಡರು ಸವಾಲು ಹಾಕಿದ್ದಾರೆ.
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಿಗದೆ, ಬಂಡಾಯವೆದ್ದ ಅರುಣ್ ಕುಮಾರ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಚುನಾವಣೆ ಬಳಿಕ ಅವರ ಬೆಂಬಲಿಗರು ಕಟೀಲ್ ಮತ್ತು ಸದಾನಂದಗೌಡರ ಭಾವಚಿತ್ರವಿದ್ದ ಬ್ಯಾನರ್ಗೆ ಚಪ್ಪಲಿ ಹಾರ ಹಾಕಿದ್ದರು. ಪ್ರಕರಣ ಸಂಬಂಧ ಪುತ್ತಿಲ ಬೆಂಬಲಿಗರಾದ ಹಿಂದುತ್ವವಾಗಿ ಕಾರ್ಯಕರ್ತರನ್ನು ಬಂಧಿಸಿದ್ದ ಪೊಲೀಸರು, ಅಮಾನುಷವಾಗಿ ಹಲ್ಲೆ ನಡೆಸಿದ್ದರು. ಆ ಕಾರ್ಯಕರ್ತರು ಹಿಂದು ಮಹಾಸಭಾದಲ್ಲಿಯೂ ತೊಡಗಿಸಿಕೊಂಡಿದ್ದರು.
ಅವರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಹಿಂದು ಮಹಾಸಭಾದ ಜಿಲ್ಲಾಧ್ಯಕ್ಷ ಧರ್ಮೇಂದ್ರ ಮತ್ತು ಅಭಿನವ ಭಾರತ ಬೆಳ್ತಂಗಡಿ ಘಟಕದ ಅಧ್ಯಕ್ಷ ಪುನೀತ್ ಸುವರ್ಣ ಸುದ್ದಿಗಾರರೊಂದಿಗೆ ಮಾತನಾಡಿ, “ಬಿಜೆಪಿಯ ನಕಲಿ ಹಿಂದುತ್ವದ ವಿರುದ್ಧ ಹೋರಾಟ ನಡೆಸುತ್ತಿದ್ದೇವೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ಮಹೇಶ್ ತಿಮರೋಡಿ, ಪ್ರವೀಣ್ ವಾಳ್ಕೆ ಮತ್ತು ಸತ್ಯಜಿತ್ ಸುರತ್ಕಲ್ ಕುರಿತು ಮಾತನಾಡಿದ್ದಾರೆ. ಆ ಮೂವರ ಬಗ್ಗೆ ಮಾತನಾಡಲು ಅವರಿಗೆ ಯಾವ ನೈತಿಕ ಹಕ್ಕಿದೆ” ಎಂದು ಪ್ರಶ್ನಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ?: ದ. ಕನ್ನಡ | ಕಟೀಲ್ ಬ್ಯಾನರ್ಗೆ ಚಪ್ಪಲಿ ಹಾರ ಪ್ರಕರಣ; ಆರೋಪಿಗಳಿಗೆ ಥಳಿಸಿದ್ದ ಪಿಎಸ್ಐ, ಪೇದೆ ಅಮಾನತು
“ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ನಡೆದ ಪೊಲೀಸ್ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಸಂಸದ ಕಟೀಲ್ ರಾಜೀನಾಮೆ ನೀಡಬೇಕು. ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ ಎದುರಿಸುತ್ತಿರುವ ಪುತ್ತೂರು ಡಿಎಸ್ಪಿ ಅವರನ್ನು ಕೂಡಲೇ ಅಮಾನತು ಮಾಡಬೇಕು” ಎಂದು ಆಗ್ರಹಿಸಿದ್ದಾರೆ.