ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 16ರಂದು ಅಧಿವೇಶನದಲ್ಲಿ ಮಂಡಿಸಿದ ಬಜೆಟ್, ರಾಜ್ಯದಲ್ಲಿ ಉದ್ಯೋಗದ ಅವಕಾಶಕ್ಕಾಗಿ ಕಾತುರರಾಗಿರುವ ಯುವಜನರಿಗೆ ಉದ್ಯೋಗ ಸೃಷ್ಠಿಸುವ ಹಾಗೂ ಅಭದ್ರತೆಯಲ್ಲಿ ದುಡಿಯುತ್ತಿರುವವರಿಗೆ ಭದ್ರತೆ ಒದಗಿಸುವಲ್ಲಿ ವಿಫಲವಾಗಿದೆ ಎಂದು ಡಿವೈಎಫ್ಐ ರಾಜ್ಯ ಸಮಿತಿ ಅಭಿಪ್ರಾಯಪಟ್ಟಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಡಿವೈಎಫ್ಐ ಕಾರ್ಯಕರ್ತರು ಪತ್ರಿಕಾ ಹೇಳಿಕೆ ನೀಡಿದ್ದು, “ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಹಾಗೂ ಮೈಸೂರು ವಿಭಾಗಗಳಲ್ಲಿ ಜವಳಿ ಪಾರ್ಕ್ ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹವಾದರೂ, ಖಾಸಗಿ ಸಹಭಾಗಿತ್ವದಲ್ಲಿ ಆರಂಭ ಮಾಡುತ್ತಿರುವುದರಿಂದ ಭದ್ರತೆಯ ಕೆಲಸ ಯುವಜನರಿಗೆ ಮತ್ತೂ ಮರಿಚೀಕೆಯಾಗುತ್ತದೆ. ಆದ್ದರಿಂದ ಸರ್ಕಾರವೇ ಸ್ವತಃ ಈ ಉದ್ದಿಮೆಗಳನ್ನು ಸಾರ್ವಜನಿಕವಾಗಿ ಆರಂಭಿಸಬೇಕು” ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹಾಗೂ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಒತ್ತಾಯಿಸಿದ್ದಾರೆ.
“ಖಾಲಿ ಇರುವ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಲ್ಲಿ ಶಿಕ್ಷಕರು, ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಆರಂಭಿಸುವುದಾಗಿ ಬಜೆಟ್ನಲ್ಲಿ ಹೇಳಿರುವುದು ಸ್ವಾಗತಾರ್ಹ. ಇದು ಕೂಡಲೇ ಕಾರ್ಯರೂಪಕ್ಕೆ ಬರಬೇಕಿದೆ. ಜೊತೆಗೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.70 ಲಕ್ಷ ಹುದ್ದೆಗಳ ಭರ್ತಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ಅಲ್ಲದೆ ನೇಮಕಾತಿಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದ್ದು ಇದನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಬೇಕು. ಕೌಶಲ್ಯ ಹೆಚ್ಚಿಸುವ ತರಬೇತಿ ನೀಡುವ ಕುರಿತು ಬಜೆಟ್ನಲ್ಲಿ ಪ್ರಸ್ತಾಪಿಸಿದೆ. ಈ ತರಬೇತಿ ಪಡೆದ ನಂತರ ಅವರಿಗೆ ಉದ್ಯೋಗ ಖಾತ್ರಿಪಡಿಸಬೇಕು” ಎಂದು ಡಿವೈಎಫ್ಐ ಆಗ್ರಹಿಸಿದೆ.
“ಯುವನಿಧಿ ಗ್ಯಾರಂಟಿ ಕುರಿತು ಬಜೆಟ್ನಲ್ಲಿ ಪ್ರಸ್ತಾಪಿಸಿದ್ದು, ಈ ಯೋಜನೆ ಸ್ವಾಗತಾರ್ಹವಾದುದು. ಆದರೆ ಕೇವಲ ಹಿಂದಿನ ವರ್ಷ ಪಾಸಾದ ಪದವೀಧರರಿಗೆ ಯೋಜನೆಯನ್ನು ಅನ್ವಯಿಸಿರುವುದು ಹಾಗೂ ಅತ್ಯಂತ ಕಡಿಮೆ ಹಣವನ್ನು ನೀಡುತ್ತಿರುವುದು ಅವೈಜ್ಞಾನಿಕವಾಗಿದೆ. ಆದ್ದರಿಂದ ಈ ಯೋಜನೆಗೆ ಐಟಿಐ ಸೇರಿದಂತೆ ಇತರೆ ವಿಭಾಗಗಳನ್ನು ಸೇರಿಸಿ ಕಳೆದ ಐದು, ಹತ್ತು ವರ್ಷಗಳಿಂದ ಪದವಿ ಪಡೆದು ಕೆಲಸ ಸಿಗದಿರುವ ನಿರುದ್ಯೋಗಿ ಯುವಜನರಿಗೆ ಅನ್ವಯಿಸಬೇಕು ಹಾಗೂ ಕನಿಷ್ಠ ₹12,000 ನಿರುದ್ಯೋಗ ಭತ್ಯೆ ಒದಗಿಸಬೇಕು” ಎಂದು ಡಿವೈಎಫ್ಐ ಒತ್ತಾಯಿಸಿದೆ.
“ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಡಿ ಇರುವ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮಾಸಿಕ ಬೋಜನ ವೆಚ್ಚವನ್ನು ₹100 ಹೆಚ್ಚಳ ಮಾಡಿರುವುದು ಸ್ವಾಗತಾರ್ಹ. ಆದರೆ ಈ ಬೆಲೆ ಏರಿಕೆಯ ದಿನಗಳಲ್ಲಿ ಸಾಲದಾಗಿದೆ. ಪ್ರಸ್ತುತ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ₹1600, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ₹1,700 ಹಣವನ್ನು ಮಾಸಿಕ ತಲಾ ಭೋಜನ ವೆಚ್ಚವಾಗಿ ನೀಡಲಾಗುತ್ತಿದೆ. ಇದಕ್ಕೆ ಕೇವಲ ₹100 ಹೆಚ್ಚಳದಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಹಾಗೂ ಪೌಷ್ಠಿಕ ಆಹಾರ ಒದಗಿಸಲು ಅಸಾಧ್ಯ. ಹಾಗಾಗಿ ಕನಿಷ್ಠ ವಿದ್ಯಾರ್ಥಿಗಳ ಅಹಾರ ಭತ್ಯೆಯನ್ನು ಮಾಸಿಕ ₹3,500 ನಿಗದಿ ಮಾಡಲು ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಡಿವೈಎಫ್ಐ ಒತ್ತಾಯಿಸಿದೆ.
ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಕೇಂದ್ರದ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ
“ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆಯುವುದು, ಶಿಕ್ಷಣ ಸಂಸ್ಥೆಗಳಲ್ಲಿ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾ ಕೆಂದ್ರಗಳನ್ನಾಗಿ ರೂಪಿಸಲು ʼನಾವು ಮನುಜರುʼ ಯೋಜನೆ ತರುತ್ತಿರುವುದು. ಮಾಜಿ ದೇವದಾಸಿಯರು, ಲಿಂಗತ್ವ ಅಲ್ಪ ಸಂಖ್ಯಾತರಿಗೆ ಮಾಸಾಶನ ಹೆಚ್ಚಳ ಮಾಡಿರುವುದು. ಸಂಚಾರಿ ಕುರಿಗಾಹಿ ಮಕ್ಕಳಿಗೆ ಸರ್ಕಾರಿ ವಸತಿ ಶಾಲೆಗಳಲ್ಲಿ ಆದ್ಯತೆ ನೀಡಿ, ವಿದ್ಯಾರ್ಥಿ ವೇತನ ನೀಡುವುದು. ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಮಕ್ಕಳಿಗೆ ವಸತಿ ಶಾಲೆಯಲ್ಲಿ ಆದ್ಯತೆ ನೀಡುವುದು ಹಾಗೂ ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಸ್ಥಿತಿಗತಿಗಳ ಅಧ್ಯಯನ, ಅಭಿವೃದ್ಧಿಗಾಗಿ ಕರ್ನಾಟಕ ಅಲೆಮಾರಿ ಆಯೋಗ ರಚನೆ ಮಾಡುತ್ತಿರುವುದು ಸಕಾರಾತ್ಮಕ ಅಂಶಗಳಾಗಿದ್ದು, ಇವುಗಳನ್ನು ಡಿವೈಎಫ್ಐ ಸ್ವಾಗತಿಸುತ್ತದೆ. ಆದ್ದರಿಂದ ಸರ್ಕಾರ ಈ ಕೊರತೆಗಳನ್ನು ಸರಿಪಡಿಸಿ ರಾಜ್ಯದ ಜನತೆಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕೆಂದು ಡಿವೈಎಫ್ಐ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತದೆ. ಅಲ್ಲದೇ ರಾಜ್ಯದ ಯುವಜನತೆ ಈ ಕುರಿತು ಧ್ವನಿ ಎತ್ತಬೇಕು” ಎಂದು ಕರೆ ನೀಡಿದೆ.