ತನ್ನ ಪತಿ ಮೂರು ಬಾರಿ ತಲಾಖ್ ಹೇಳಿ, ತಕ್ಷಣ ವಿಚ್ಛೇದನ ನೀಡಿದ್ದಾನೆ ಎಂದು ಆರೋಪಿಸಿ 35 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಪತಿ ಮತ್ತು ಆತನ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ.
“ಮದುವೆಯಾದ ಎಂಟೇ ದಿನಗಳಲ್ಲಿ ತನ್ನ ಪತಿ ಮೊಹಮ್ಮದ್ ಹುಸೇನ್, ತನ್ನ ಬಳಿಯಿದ್ದ ಚಿನ್ನಾಭರಣಗಳನ್ನು ಕಿತ್ತುಕೊಂಡಿದ್ದಾರೆ. ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ. ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾರೆ. ದಿನನಿತ್ಯ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು” ಎಂದು ಮಹಿಳೆ ಆರೋಪಿಸಿದ್ದಾರೆ.
ಮೊದಲ ಗಂಡನಿಂದ ವಿಚ್ಛೇದನ ಪಡೆದುಕೊಂಡಿದ್ದೆ. 2022ರ ನವೆಂಬರ್ 10ರಂದು ಆರೋಪಿ ಮೊಹಮ್ಮದ್ ಹುಸೇನ್ ಮತ್ತು ನಾನು ವಿವಾಹವಾಗಿದ್ದೆವು. ಬಳಿಕ ಮಾರ್ನಮಿಕಟ್ಟೆಯ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದೆವು” ಎಂದು ಮಹಿಳೆ ತನ್ನ ದೂರಿನಲ್ಲಿ ವಿವರಿಸಿದ್ದಾರೆ.
“ಕಳೆದ ತಿಂಗಳ (ಮೇ) 26ರಂದು ತನ್ನ ಮೇಲೆ ಹಲ್ಲೆ ನಡೆಸಿ, ಬೆದರಿಕೆ ಹಾಕಿದ್ದಾರೆ. ತ್ರಿವಳಿ ತಲಾಖ್ ನೀಡಿದ್ದಾರೆ” ಎಂದು ಅವರು ವಿವರಿಸಿದ್ದಾರೆ.
ಮಹಿಳೆಯ ದೂರಿನ ಆಧಾರದ ಮೇಲೆ, ವರದಕ್ಷಿಣೆ ನಿಷೇಧ ಕಾಯ್ದೆ ಮತ್ತು ಮುಸ್ಲಿಂ ಮಹಿಳೆಯರ (ವಿವಾಹದ ಮೇಲಿನ ಹಕ್ಕುಗಳ ರಕ್ಷಣೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.