ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧಗಳಲ್ಲಿನ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಪಕ್ಕದ ಬಂಗ್ಲೆಗುಡ್ಡೆಯ ಕಾಡಿನಲ್ಲಿ ಶೋಧ ಕಾರ್ಯ ನಡೆಸಿದ್ದು, ಈ ವೇಳೆ ಒಟ್ಟು 7 ತಲೆಬುರುಡೆಗಳು ಹಾಗೂ ಬಹಳಷ್ಟು ಮೂಳೆಗಳು ನೆಲದ ಮೇಲೆ ಸಿಕ್ಕಿವೆ ಎಂದು ಮೂಲಗಳು ತಿಳಿಸಿವೆ.
ಎಸ್ಐಟಿಯವರು ಬುಧವಾರ ಹಾಗೂ ಗುರುವಾರ ಕಾಡಿನಲ್ಲಿ ಶೋಧ ಕಾರ್ಯ ನಡೆಸಿದ್ದರು. ಈ ವೇಳೆ ಒಟ್ಟು 9 ಕಡೆ ಮೃತದೇಹಗಳ ಅವಶೇಷಗಳು ಕಂಡುಬಂದಿದ್ದವು. ಅವುಗಳ ಪೈಕಿ ಐದು ಸ್ಥಳಗಳಲ್ಲಿ ಸಿಕ್ಕಿದ್ದ ಐದು ತಲೆ ಬುರುಡೆಗಳು ಹಾಗೂ ನೂರಾರು ಮೂಳೆಗಳನ್ನು ಬುಧವಾರವೇ ಎಸ್ಐಟಿ ವಶಕ್ಕೆ ಪಡೆದಿತ್ತು. ಗುರುವಾರ ಇನ್ನುಳಿದ ಕಡೆಗಳಲ್ಲಿದ್ದ ಎರಡು ತಲೆಬುರುಡೆಗಳು ಹಾಗೂ ಮೂಳೆಗಳನ್ನು ವಶಕ್ಕೆ ಪಡೆದಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರಸ್ತೆ ಗುಂಡಿ ಮುಚ್ಚುವುದು ಸಚಿವ ಡಿ.ಕೆ. ಶಿವಕುಮಾರ್ ಕೆಲಸವೇ?
ಗುರುವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಎಸ್ಐಟಿಯವರು ಕಾಡಿನೊಳಕ್ಕೆ ತೆರಳಿದ್ದು, ಮಧ್ಯಾಹ್ನ 3.30ರ ಸುಮಾರಿಗೆ ಹೊರ ಬಂದರು. ಎಸ್ಐಟಿಯ ಎಸ್ಪಿಗಳಾದ ಜಿತೇಂದ್ರ ಕುಮಾರ್ ದಯಾಮ, ಸಿ.ಎ.ಸೈಮನ್, ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು, ಬೆಳ್ತಂಗಡಿ ವಲಯದ ಅರಣ್ಯ ಇಲಾಖೆ ಅಧಿಕಾರಿಗಳು, ಧರ್ಮಸ್ಥಳ ಗ್ರಾಮ ಪಂಚಾಯಿತಿ ಸಿಬ್ಬಂದಿ, ಕಂದಾಯ ಇಲಾಖೆ ಸಿಬ್ಬಂದಿ ಶೋಧ ಕಾರ್ಯದಲ್ಲಿ ಭಾಗವಹಿಸಿದ್ದರು.
ಈ ದಿನದ ಶೋಧ ಕಾರ್ಯ ಪೂರ್ಣಗೊಂಡಿದೆ. ಬೇರೆ ಕಡೆ ನಾಳೆಯೂ ಶೋಧ ಕಾರ್ಯ ಮುಂದುವರಿಸಲಾಗುತ್ತದೆಯೋ ಇಲ್ಲವೋ ಎಂಬ ಬಗ್ಗೆ ಎಸ್ಐಟಿ ಸುಳಿವು ಬಿಟ್ಟುಕೊಟ್ಟಿಲ್ಲ.
