ಲಾರಿಯ ತಾಂತ್ರಿಕ ದೋಷ ಸರಿಪಡಿಸುವ ವೇಳೆ ಲಾರಿಯ ಚಕ್ರಗಳ ಅಡಿಗೆ ಸಿಲುಕಿ ಚಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಕನ್ಯಾನ ಗ್ರಾಮದ ಪಾದೆಕಲ್ಲು–ಪೆರೋಡಿ ಸರವುಗುಡ್ಡೆ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಮೃತರನ್ನು ಧರ್ಮಸ್ಥಳ ಪರಿಸರದ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಲಾರಿಯಲ್ಲಿ ಕಾಣಿಸಿಕೊಂಡ ತಾಂತ್ರಿಕ ವೈಫಲ್ಯವನ್ನು ಸರಿಪಡಿಸಲು ಮಹೇಶ್ ಅವರು ವಾಹನದ ಕೆಳಭಾಗಕ್ಕೆ ಇಳಿದು ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದರು. ಈ ವೇಳೆ ಏಕಾಏಕಿ ಲಾರಿ ಮುಂದಕ್ಕೆ ಚಲಿಸಿದ ಪರಿಣಾಮ ಅವರು ಚಕ್ರಗಳ ಅಡಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ಬಳಿಕ ಸ್ಥಳೀಯ ಕಾರ್ಮಿಕರು ಹಾಗೂ ಕನ್ಯಾನದ ಸದ್ಗುರು ಅಂಬ್ಯುಲೆನ್ಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಲಾರಿಯ ಅಡಿಯಿಂದ ಮೃತದೇಹವನ್ನು ಹೊರತೆಗೆದರು. ಬಳಿಕ ಮೃತದೇಹವನ್ನು ವಿಟ್ಲ ಸರಕಾರಿ ಆಸ್ಪತ್ರೆಗೆ ರವಾನಿಸಲಾಯಿತು.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಾನೂನು ಪ್ರಕ್ರಿಯೆಗಳು ಮುಂದುವರಿದಿವೆ ಎಂದು ತಿಳಿದು ಬಂದಿದೆ.





