ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕು ಕಚೇರಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಹಾಗೂ ಬೂತ್ ಮಟ್ಟದ ಏಜೆಂಟರಿಗೆ (ಬಿಎಲ್ಎ) ತರಬೇತಿ ಕಾರ್ಯಾಗಾರವು ಮಂಗಳೂರು ವಿಶ್ವವಿದ್ಯಾನಿಲಯದ ಕೊಣಾಜೆ ಕ್ಯಾಂಪಸ್ನಲ್ಲಿ ಬುಧವಾರ ಆರಂಭಗೊಂಡಿತು. ಆದರೆ ಕಾರ್ಯಾಗಾರದಲ್ಲಿ ಸಂಬಂಧಪಟ್ಟ ತಾಲೂಕು ಮಟ್ಟದ ಅಧಿಕಾರಿಗಳ ಗೈರುಹಾಜರಿಯಿಂದ ಭಾಗವಹಿಸಿದ ಬಿಎಲ್ಎಗಳು ಅಸಮಾಧಾನ ವ್ಯಕ್ತಪಡಿಸಿದರು.
ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣ, ವೀರೇಂದ್ರ ಹೆಗ್ಡೆ ಸಭಾಂಗಣ ಹಾಗೂ ಮಲ್ಯ ಸಭಾಂಗಣಗಳಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ವಾಣಿಜ್ಯ ಅಧ್ಯಯನ ವಿಭಾಗದ ಪ್ರೊ. ಪರಮೇಶ್ವರ, ಗಣಿತಶಾಸ್ತ್ರ ವಿಭಾಗದ ಡಾ. ಚಂದ್ರು ಹೆಗ್ಡೆ ಹಾಗೂ ಡಾ. ಮೋಹನ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಎಸ್ಐಆರ್ ಪ್ರಕ್ರಿಯೆ, ಮತದಾರರ ನೋಂದಣಿ ಮತ್ತು ಪರಿಷ್ಕರಣೆ ಕುರಿತ ಮಾಹಿತಿ ನೀಡಿದರು.

ಕಾರ್ಯಾಗಾರದ ವೇಳೆ ಬಿಎಲ್ಒಗಳು ಹಾಗೂ ಬಿಎಲ್ಎಗಳ ಪ್ರಶ್ನೆಗಳಿಗೆ ಉತ್ತರ ನೀಡಲು ಉಪತಹಶೀಲ್ದಾರರು ಕೆಲಕಾಲ ಹಾಜರಾಗಿ ತೆರಳಿದ್ದು, ನಂತರ ತಾಲೂಕಿನ ಯಾವುದೇ ಅಧಿಕಾರಿಗಳು ಸ್ಥಳದಲ್ಲಿರಲಿಲ್ಲ ಎಂದು ಆರೋಪಿಸಲಾಗಿದೆ. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹಲವು ತಾಂತ್ರಿಕ ಹಾಗೂ ಆಡಳಿತಾತ್ಮಕ ಪ್ರಶ್ನೆಗಳು ಉದ್ಭವಿಸಿದ್ದರೂ, ಅವುಗಳಿಗೆ ಸಮರ್ಪಕ ಉತ್ತರ ದೊರೆಯದ ಹಿನ್ನೆಲೆಯಲ್ಲಿ ಭಾಗವಹಿಸಿದ್ದವರು ಅಸಮಾಧಾನ ವ್ಯಕ್ತಪಡಿಸಿದರು.
ಈ ಕುರಿತು ಕೆಲ ಬಿಎಲ್ಎಗಳು ದೂರವಾಣಿ ಮೂಲಕ ತಾಲೂಕು ತಹಶೀಲ್ದಾರರನ್ನು ಸಂಪರ್ಕಿಸಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿರುವುದಾಗಿ ತಿಳಿದುಬಂದಿದೆ. ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ಪ್ರಜಾಪ್ರಭುತ್ವದ ದೃಷ್ಟಿಯಿಂದ ಮಹತ್ವದ್ದಾಗಿರುವುದರಿಂದ, ಇಂತಹ ತರಬೇತಿ ಕಾರ್ಯಕ್ರಮಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಪೂರ್ಣಾವಧಿ ಹಾಜರಿದ್ದು ಮಾರ್ಗದರ್ಶನ ನೀಡಬೇಕೆಂದು ಭಾಗವಹಿಸಿದವರು ಒತ್ತಾಯಿಸಿದ್ದಾರೆ.





