- ಜೂನ್ ಎರಡನೇ ವಾರದಲ್ಲಿ ಬೃಹತ್ ಕಾರ್ಯಕ್ರಮ ಆಯೋಜನೆ
- ಬಿಜೆಪಿಯ ದಲಿತ ವಿರೋಧಿ ಧೋರಣೆ ಖಂಡಿಸಿ ಕಾಂಗ್ರೆಸ್ಗೆ ಬೆಂಬಲ
ಜೂನ್ ಎರಡನೇ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ‘ದಲಿತ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ದಸಂಸ) ಕೊಡಗು ಜಿಲ್ಲಾ ಸಂಚಾಲಕ ಎಚ್ ಎಲ್ ದಿವಾಕರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಹಿಂದೆಯೇ ಪ್ರಶಸ್ತಿ ನೀಡಿಬೇಕು ಎಂದುಕೊಂಡಿದ್ದರೂ ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಜೂನ್ ಎರಡನೇ ವಾರದಲ್ಲಿ ಕಾರ್ಯಕ್ರಮ ನಿಗದಿ ಮಾಡಲಾಗುವುದು. ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲು ಯತ್ನಿಸಲಾಗುವುದು” ಎಂದು ತಿಳಿಸಿದ್ದಾರೆ.
“ಕಾರ್ಯಕ್ರಮದ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಈ ಕಾರ್ಯಕ್ರಮಕ್ಕೆ ಅಂದಾಜು ಎಂಟು ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ. ನಗರದಲ್ಲಿ ಅಂದು ಬೃಹತ್ ಮೆರವಣಿಗೆ ಮಾಡಲಾಗುವುದು” ಎಂದಿದ್ದಾರೆ.
“ರಾಜಕೀಯ ರಹಿತವಾದ ದಲಿತ ಸಂಘರ್ಷ ಸಮಿತಿಯು ಬಿಜೆಪಿ ಸರ್ಕಾರದ ದಲಿತ ವಿರೋಧಿ ಧೋರಣೆ ಖಂಡಿಸಿ ಕಾಂಗ್ರೆಸ್ಗೆ ಸಂಪೂರ್ಣ ಬೆಂಬಲ ನೀಡಿತು. ಇದರಿಂದಾಗಿಯೇ ಕಾಂಗ್ರೆಸ್ ಅಭೂತಪೂರ್ವ ಬಹುಮತ ಪಡೆಯಿತು. ಇದು ದಲಿತರನ್ನು ನಿರ್ಲಕ್ಷಿಸುವವರಿಗೆ ಸ್ಪಷ್ಟ ಸಂದೇಶ ನೀಡಿದಂತಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಸುದ್ದಿ ಓದಿದ್ದೀರಾ? ನಾಲ್ಕೈದು ತಿಂಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣ ಬದಲಾವಣೆ : ಬೊಮ್ಮಾಯಿ
“ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಸಮಿತಿಯ ಕಾರ್ಯಕರ್ತರು ಬಹುವಾಗಿ ಶ್ರಮಿಸಿದ್ದಾರೆ. ಇವರಿಂದ ಅಭಿವೃದ್ಧಿ ಕಾರ್ಯಗಳು ಆಗುತ್ತವೆ ಎಂಬ ವಿಶ್ವಾಸ ಇದೆ” ಎಂದು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿಯ ಮಡಿಕೇರಿ ತಾಲೂಕು ಘಟಕದ ಸಂಚಾಲಕ ದೀಪಕ್ ಪೊನ್ನಪ್ಪ, ನಗರ ಸಂಘಟನಾ ಸಂಚಾಲಕ ಪಿ ಎಂ ಲೋಕನಾಥ್, ನಗರ ಸಂಚಾಲಕ ಸಿದ್ದೇಶ್ವರ್ ಇದ್ದರು.