ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಅಮಾನವೀಯ ಪ್ರಕರಣ ಮತ್ತು ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಖಂಡಿಸಿ ಭಾರತೀಯ ಜನತಾ ಪಕ್ಷ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿತು.
ನಗರದ ಕೆಬಿ ಬಡಾವಣೆಯಲ್ಲಿರುವ ಬಿಜೆಪಿ ಕಚೇರಿಯಿಂದ ಪ್ರಾರಂಭವಾದ ಮೆರವಣಿಗೆ ಅಶೋಕ ರಸ್ತೆ ಮೂಲಕವಾಗಿ ಸಾಗಿದ್ದು, ಜಿಲ್ಲಾ ಬಿಜೆಪಿ ಮುಖಂಡರು, ಕಾರ್ಯಕರ್ತರು, ಶಾಸಕ ಬಿ.ಪಿ ಹರೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿರು.
ಶಾಸಕ ಬಿ ಪಿ ಹರೀಶ್ ಮಾತನಾಡಿ, “ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸಚಿವರು, ಶಾಸಕರು ಭ್ರಷ್ಟಾಚಾರದಲ್ಲಿ ನಿರತರಾಗಿದ್ದಾರೆ. ಇದನ್ನು ಮರೆಮಾಚಲು ಜನರಿಗೆ ಗ್ಯಾರಂಟಿ ಯೋಜನೆಗಳನ್ನು ತೋರಿಸಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಉಪಮುಖ್ಯಮಂತ್ರಿ ಶಿವಕುಮಾರ್ ಪ್ರಕರಣಗಳನ್ನು ಹಿಂಪಡೆದು ಭ್ರಷ್ಟಾಚಾರ ಸಮರ್ಥಿಸುವುದು ಖಂಡನೀಯ” ಎಂದರು.
ಈ ಸುದ್ದಿ ಓದಿದ್ದೀರಾ? ಕೋಲಾರ | ಮಕ್ಕಳಿಂದ ಮಲದ ಗುಂಡಿ ಸ್ವಚ್ಛಗೊಳಿಸಿದ ಪ್ರಕರಣ; ಪ್ರಾಂಶುಪಾಲೆ ಸಹಿತ ಮೂವರು ಅಮಾನತು
ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿರೇಶ್ ಹನಗವಾಡಿ, ಪ್ರಧಾನ ಕಾರ್ಯದರ್ಶಿ ಬಿ.ಎಸ್ ಜಗದೀಶ್, ಉಪಾಧ್ಯಕ್ಷ ಶ್ರೀನಿವಾಸ್ ದಾಸಕರಿಯಪ್ಪ, ಪಾಲಿಕೆ ವಿಪಕ್ಷ ನಾಯಕ ಪ್ರಸನ್ನಕುಮಾರ್, ಮೇಯರ್ ವಿರೇಶ್, ಮಹಿಳಾ ಮಾಜಿ ಜಿಲ್ಲಾಧ್ಯಕ್ಷೆ ಮಂಜುಳಾ, ಹೆಚ್ ಪಿ ವಿಶ್ವಾಸ್ ಹಾಗೂ ಬಿಜೆಪಿ ಕಾರ್ಯಕರ್ತರು, ಮುಖಂಡರುಗಳು, ಪಾಲಿಕೆ ಸದಸ್ಯರು ಇದ್ದರು.