ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಆತನನ್ನು ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿದೆ.
ದಾವಣಗೆರೆ ಜಿಲ್ಲಾಡಳಿತ ಭವನದ ಆವರಣದಲ್ಲಿ ರೈತ ಸಂಘದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ಜಿಲ್ಲಾ ಸಮಿತಿಯ ಅಧ್ಯಕ್ಷ ಪಿ ಪಿ ಮರುಳಸಿದ್ದಯ್ಯ, “ಒಲಂಪಿಕ್ ಪದಕ ವಿಜೇತರರು, ವಿಶ್ವ ಚಾಂಪಿಯನ್ ಕುಸ್ತಿ ಪಟುಗಳು ಸೇರಿದಂತೆ ದೇಶದ ಹೆಮ್ಮೆಯ ಕುಸ್ತಿ ಕ್ರೀಡಾಪಟುಗಳು ಕಳೆದ ಏಪ್ರಿಲ್ನಿಂದ ನವದೆಹಲಿಯ ಜಂತರ್-ಮಂತರ್ನಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದರೂ ಸಹ ಈವರೆಗೂ ಸಂಸದ ಬ್ರಿಜ್ ಭೂಷಣ್ ಸಿಂಗ್ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಕುಸ್ತಿಪಟುಗಳು ತಮ್ಮ ಮೇಲಾಗಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ದೂರು ನೀಡಿದ್ದರೂ ಸಹ ಎಫ್ಐಆರ್ ದಾಖಲಾಗಿರಲಿಲ್ಲ. ಸುಪ್ರೀಂ ಕೋರ್ಟ್ ಮಧ್ಯಪ್ರವೇಶದ ನಂತರವಷ್ಟೇ ಪ್ರಕರಣ ದಾಖಲಾಗಿದೆ. ಅಪ್ರಾಪ್ತೆಯರು ಸೇರಿದಂತೆ ಪ್ರಖ್ಯಾತ ಮಹಿಳಾ ಕುಸ್ತಿ ಪಟುಗಳಿಗೆ ಲೈಂಗಿಕ ಕಿರುಕುಳ ಹಾಗೂ ಹಿಂಸೆಗೆ ಒಳಪಡಿಸಿರುವುದು ಅತ್ಯಂತ ಆಘಾತಕಾರಿ ಮತ್ತು ದೇಶವೇ ತಲೆತಗ್ಗಿಸುವಂತಹ ಘಟನೆಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದು ನಮ್ಮ ದೇಶಕ್ಕೆ ಕೀರ್ತಿ ತಂದವರ ಮೇಲೆಯೇ ಲೈಂಗಿಕ ಕಿರುಕುಳವಾದರೆ, ಇನ್ನು ಸಾಮಾನ್ಯ ಮಹಿಳೆಯರ ಸುರಕ್ಷತೆ ಕೇಳುವುದು ಹೇಗೆ? ದೇಶದ ಕೀರ್ತಿ ಪತಾಕೆಯನ್ನು ಹಾರಿಸಿ ಹೆಮ್ಮೆಯ ಪದಕಗಳನ್ನು ದೇಶಕ್ಕಾಗಿ ಗೆದ್ದವರು ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವುದು ಅತ್ಯಂತ ನಾಚಿಕೇಗೇಡಿನ ಸಂಗತಿಯಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಗದಗ | ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕ್ರಮಕ್ಕೆ ದಸಂಸ ಆಗ್ರಹ
“ನ್ಯಾಯ ಕೇಳಲು ಹೋದವರನ್ನು ನಿಕೃಷ್ಠವಾಗಿ ನಡೆಸಿಕೊಳ್ಳಲಾಗಿದೆ. ದೇಶಕ್ಕೆ ಕೀರ್ತಿ ತರುವ ಸಾಮರ್ಥ್ಯದ ಕ್ರೀಡಾಪಟುಗಳ ಆತ್ಮಸ್ಥೈರ್ಯ ಕುಂದಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಕೂಡಲೇ ನಿಲ್ಲಿಸಬೇಕು. ಪೋಕ್ಸೋ ಪ್ರಕರಣ ಸೇರಿದಂತೆ ಮಹಿಳಾ ಕ್ರೀಡಾಪಟುಗಳ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಿಂಸೆ ನಡೆಸಿರುವ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ರನ್ನು ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿ ಬಂಧಿಸಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು” ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ಕುರುವ ಗಣೇಶ್, ಹೊನ್ನೂರು ಮುನಿಯಪ್ಪ, ಡಿ.ಕೆ ಭರಮಪ್ಪ, ಮರುಳಸಿದ್ದಯ್ಯ, ಹೊನ್ನೂರು ರಾಜು, ಗೋಶಾಲೆ ಬಸವರಾಜ್, ಕಣಿವೆ ಬಿಳಚಿ ಅಣ್ಣಪ್ಪ, ಕೆ. ವಿ ರುದ್ರಮುನಿ, ಕೆ.ಜಿ ಶೇಖರಪ್ಪ, ಬೀರಗೊಂಡನಹಳ್ಳಿ ಉಮೇಶ್, ಸಿ.ಪಿ ಕುಮದ್ವತಿ ಸೇರಿದಂತೆ ಮತ್ತಿತರರಿದ್ದರು