ಪ್ರಸ್ತುತ ವರ್ಷದ ಮಳೆಯ ಅಭಾವದಿಂದ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗುವ ಸಾಧ್ಯತೆಯಿದ್ದು, ರೈತರು ಮೇವಿನ ಸಂಗ್ರಹಣೆ ಕುರಿತಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಎಂ ವಿ ತಿಳಿಸಿದರು.
ದಾವಣಗೆರೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮೇವು ಅಭಿವೃದ್ಧಿ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ಜಿಲ್ಲೆಯಲ್ಲಿ ಈಗಾಗಲೇ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಬರುವ ಬೇಸಿಗೆ ಕಾಲದಲ್ಲಿ ಜಾನುವಾರುಗಳಿಗೆ ಅವಶ್ಯಕವಾಗಿ ಬೇಕಾಗುವ ಮೇವಿನ ಉತ್ಪಾದನೆಯನ್ನು ಹೆಚ್ಚಿಸಬೇಕು. ಮೇವು ಸೇರಿದಂತೆ ನೀರು, ಆಶ್ರಯ ಮತ್ತು ಆರೋಗ್ಯ ಪಾಲನೆ ಸೇವೆಗಳನ್ನು ಒದಗಿಸುವ ಮೂಲಕ ಜಾನುವಾರುಗಳನ್ನು ರಕ್ಷಿಸಿಕೊಳ್ಳಬೇಕು. ಹುಲ್ಲನ್ನು ಚೆನ್ನಾಗಿ ಒಣಗಿಸಿ ಮೇವು ಹಾಳಾಗದಂತೆ ಶೇಖರಣೆ ಮಾಡಬೇಕು” ಎಂದು ರೈತರಿಗೆ ಸಲಹೆ ನೀಡಿದರು.
“ನೀರಾವರಿ ಸೌಲಭ್ಯವಿರುವ ರೈತರು ಜಾನುವಾರುಗಳಿಗೆ ನೀಡಬೇಕಾಗುವ ಮೇವಿನ ಅನುಸಾರ ಹಸಿರು ಮೇವು ಉತ್ಪಾದನೆ ಮಾಡಿ ರಸ ಮೇವಿನ ರೂಪದಲ್ಲಿ ಮೇವನ್ನು ಸಂಗ್ರಹಿಸಿಟ್ಟುಕೊಳ್ಳುವಂತೆ ರೈತರಿಗೆ ತಿಳಿಸಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.
“ಜಗಳೂರು ತಾಲೂಕಿನಲ್ಲಿ ಹೆಚ್ಚು ಮೇವಿನ ಕೊರತೆ ಕಂಡುಬರುವ ಸಾಧ್ಯತೆಯಿದೆ. ಅಂತಹ ಸಂದರ್ಭದಲ್ಲಿ ಟೆಂಡರ್ ಮೂಲಕ ಮೇವು ಪೂರೈಕೆ ಮಾಡಬೇಕು. ಕೆಎಂಎಫ್ ಮತ್ತು ಪಶುಸಂಗೋಪನೆ ಇಲಾಖೆ ವತಿಯಿಂದ ಕ್ಯಾಂಪ್ಗಳ ಮೂಲಕ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಕನಿಷ್ಠ ನೂರು ಜನ ರೈತರು ಮೇವಿನ ಬೆಳೆ ಬೆಳೆಯಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ರೈತರಿಗೆ ಪ್ರೋತ್ಸಾಹ ನೀಡಬೇಕು” ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ್ ಬಿ ಇಟ್ನಾಳ್ ಮಾತನಾಡಿ,
“ಮಹಾತ್ಮ ಗಾಂಧಿ ಮನರೇಗಾ ಯೋಜನೆಯಡಿ ರೈತರು ಮೇವಿನ ಬೆಳೆ ಬೆಳೆಯಲು ಸರ್ಕಾರದಿಂದ ಎಕರೆಗೆ ₹16,000 ಸಹಾಯಧನ ಸೌಲಭ್ಯ ಒದಗಿಸುತ್ತಿದ್ದು, ರೈತರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು. ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಉಂಟಾದಲ್ಲಿ ಅಂತಹ ಪ್ರದೇಶಗಳಲ್ಲಿ ನೀರಿನ ತೊಟ್ಟಿಗಳನ್ನು ನಿರ್ಮಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು” ಎಂದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಪೌಷ್ಠಿಕ ಆಹಾರ, ಮೂಲಸೌಕರ್ಯ ಒದಗಿಸುವಂತೆ ಎಐಜೆಎಎಸ್ಸಿ ಆಗ್ರಹ
ಪಶುಸಂಗೋಪನ ಇಲಾಖೆ ಉಪ ನಿರ್ದೇಶಕ ಚಂದ್ರಶೇಖರ್ ಸುಂಕದ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಘವೇಂದ್ರ ಪ್ರಸಾದ್, ಶಿವಮೊಗ್ಗ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕಿ ಡಾ. ಸ್ಮಿತಾ ಜೆ ಎಸ್, ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಪಶುವೈದ್ಯ ಡಾ .ಜಿ ಕೆ ಜಯದೇವಪ್ಪ, ಡಾ. ವಿಶ್ವನಾಥ್, ರೇಷ್ಮೆ ಇಲಾಖೆ ಉಪ ನಿರ್ದೇಶಕ ಚಂದ್ರಪ್ಪ ಇದ್ದರು.