ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಆಪರೇಷನ್ ಹಸ್ತ, ಆಪರೇಷನ್ ಕಮಲ ಜೋರಾಗಿ ಸದ್ದು ಮಾಡುತ್ತಿದ್ದು, ಕಲ್ಲೇಶ್ವರ ರೈಸ್ ಮಿಲ್ನಲ್ಲಿ ಮಹಾನಗರ ಪಾಲಿಕೆಯ ಬಿಜೆಪಿಯ ಹಾಲಿ ಸದಸ್ಯ ಸೋಗಿ ಶಾಂತಕುಮಾರ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ಲೋಕಸಭೆ ಚುನಾವಣೆಗೆ ಮತದಾನ ದಿನ ಹತ್ತಿರವಾಗುತ್ತಿದ್ದಂತೆ ಕಾಂಗ್ರೆಸ್ ಪಕ್ಷವು ಆಪರೇಷನ್ ಹಸ್ತ ಜೋರು ಮಾಡಿದೆ. ಈಗಾಗಲೇ ಮಾಯಕೊಂಡ ಬಿಜೆಪಿ ಯುವ ಮುಖಂಡ ವಾಗೀಶ್ ಸ್ವಾಮಿ, ಜಗಳೂರಿನ ಮಾಜಿ ಶಾಸಕ ಗುರುಸಿದ್ದನಗೌಡರು, ಅವರ ಪುತ್ರ ಹಾಗೂ ಆರೈಕೆ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ರವಿಕುಮಾರ್ ಮತ್ತವರ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಈಗ ಸೋಗಿ ಶಾಂತಕುಮಾರ್ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿರುವುದು ಕಮಲ ಪಾಳಯಕ್ಕೆ ಶಾಕ್ದಿ ನೀಡಿದೆ.
ಈ ವೇಳೆ ಪಾಲಿಕೆ ಸದಸ್ಯರಾದ ಗಡಿಗುಡಾಳ್ ಮಂಜುನಾಥ್, ಅಬ್ದುಲ್ ಲತೀಫ್, ಸವಿತಾ ಗಣೇಶ್ ಹುಲ್ಲುಮನಿ, ಕಾಂಗ್ರೆಸ್ ಮುಖಂಡ ಹುಲ್ಲುಮನಿ ಗಣೇಶ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್, ದಾವಣಗೆರೆ ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಜಿ. ಶಿವಕುಮಾರ್, ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಬಾಯಿ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
ಈ ವೇಳೆ ಮಾತನಾಡಿದ ಸೋಗಿ ಶಾಂತಕುಮಾರ್, ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪ್ರಭಾ ಮಲ್ಲಿಕಾರ್ಜುನ್ ಅವರು ಉತ್ತಮ ಅಭ್ಯರ್ಥಿ. ವಿದ್ಯಾವಂತರು, ಎಸ್.ಎಸ್. ಕೇರ್ ಟ್ರಸ್ಟ್ ಮೂಲಕ ಜನಸೇವೆ ಮಾಡಿದ್ದಾರೆ. ಜನರಿಗೆ ಸಹಾಯ ಮಾಡುತ್ತಿದ್ದಾರೆ. ಜನಸ್ಪಂದನೆ ಚೆನ್ನಾಗಿದೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರು ಹೇಗೆ ಜನರ ಪ್ರೀತಿ ಸಂಪಾದನೆ ಮಾಡಿ 2019ರ ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿದರು. ಅದೇ ರೀತಿಯಲ್ಲಿ ದಾವಣಗೆರೆಯಲ್ಲಿಯೂ ಪ್ರಭಾ ಮಲ್ಲಿಕಾರ್ಜುನ್ ಅವರು ಜಯ ಗಳಿಸಲಿದ್ದಾರೆ ಎಂದು ಹೇಳಿದರು.
ಎಸ್.ಎಸ್.ಮಲ್ಲಿಕಾರ್ಜುನ್ ಅವರು ಶಾಸಕರಾಗಿ, ಸಚಿವರಾಗಿ ದಾವಣಗೆರೆಗೆ ಹಲವಾರು ಕೊಡುಗೆ ನೀಡಿದ್ದಾರೆ. ಕುಂದುವಾಡ ಕೆರೆ, ಪಿ.ಪಿ. ರಸ್ತೆ ಅಗಲೀಕರಣ ಸೇರಿದಂತೆ ನೂರಾರು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು, ಬಡವರಿಗೆ ಸ್ಪಂದಿಸುವ ರೀತಿ, ಕಾಂಗ್ರೆಸ್ ತತ್ವ, ಸಿದ್ಧಾಂತ ಒಪ್ಪಿ ಬಿಜೆಪಿ ಬಿಟ್ಟು ಬಂದಿದ್ದೇನೆ. ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ಹಲವು ಅಭಿವೃದ್ಧಿ ಕಾರ್ಯಗಳು ಇನ್ನು ಮುಂದೆಯೂ ಆಗಲಿದೆ ಎಂದು ಸೋಗಿ ಶಾಂತಕುಮಾರ್ ಹೇಳಿದರು.
ಬಿಜೆಪಿ ಪಕ್ಷದ ಪಾಲಿಕೆ ಸದಸ್ಯನಾಗಿ ಗೆದ್ದಿದ್ದೇನೆ. ಆದರೆ, ಅಲ್ಲಿ ನನ್ನನ್ನು ಸರಿಯಾದ ರೀತಿ ನಡೆಸಿಕೊಳ್ಳಲಿಲ್ಲ ಎಂಬ ಬೇಸರವಿದೆ. ಮಲ್ಲಿಕಾರ್ಜುನ್ ಅವರ ನಾಯಕತ್ವ ಒಪ್ಪಿ ಕಾಂಗ್ರೆಸ್ಗೆ ಬಂದಿದ್ದು, ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು.
