ಮುಂದಿನ ಬಾರಿಯೂ ನರೇಂದ್ರ ಮೋದಿಯವರೇ ಪ್ರಧಾನಿಯಾಗಲಿದ್ದು, ಅವರ ಅವಧಿಯಲ್ಲಿಯೇ ಎಸ್ಸಿ, ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳ ಮಾಡಿರುವುದನ್ನು ಸಂವಿಧಾನದ ಶೆಡ್ಯುಲ್ 9ಕ್ಕೆ ಸೇರಿಸಲು ಒತ್ತಾಯ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಶಯ ವ್ಯಕ್ತಪಡಿಸಿದರು.
ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಹಮ್ಮಿಕೊಂಡಿರುವ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಯಕ ಸಮುದಾಯವನ್ನು ಎಸ್ಟಿಗೆ ಸೇರಿಸಲು ದೊಡ್ಡ ಮಟ್ಟದ ಹೋರಾಟ ನಡೆದಿದೆ. ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿ ಯಾಗಿದ್ದಾಗಿದ್ದಾಗ ಶಿಫಾರಸ್ಸು ಮಾಡಿದ್ದರು, ಕೇಂದ್ರದಲ್ಲಿ ಚಂದ್ರಶೇಖರ ನೇತೃತ್ವದ ಸರ್ಕಾರ ಅಧಿಸೂಚನೆ ಹೊರಡಿಸಿತ್ತು. ಮಾಜಿ ಪ್ರಧಾನಿ ದೇವೇಗೌಡರು ಎಸ್ಟಿಗೆ ಸೇರಿಸಲು ಶ್ರಮ ವಹಿಸಿದ್ದರು ಎಂದು ಹೇಳಿದರು.
ನಾಯಕ ಸಮುದಾಯಕ್ಕೆ ಎಸ್ಟಿಗೆ ಸೇರ್ಪಡೆ ಮಾಡಿದ ಮೂವತ್ತೈದು ವರ್ಷಗಳ ನಂತರ ಈ ಸಮುದಾಯದ ಜನಸಂಖ್ಯೆ, ಆಶೋತ್ತರಗಳು ಹೆಚ್ಚಾಗಿವೆ. ನಮ್ಮ ಸಂವಿಧಾನ ಜೀವಂತಿಕೆ ಇರುವ ಸಂವಿಧಾನ, ಕಾಲಕ್ಕೆ ತಕ್ಕಂತೆ ತಿದ್ದುಪಡಿ ಮಾಡಲು ಅವಕಾಶ ಇದೆ. ಕೆಲವು ದೇಶದ ಸಂವಿಧಾನಗಳನ್ನು ಬರೆದು ಇಟ್ಟಿದ್ದಾರೆ. ಅವು ಜೀವಂತಿಕೆಯನ್ನು ಕಳೆದುಕೊಂಡಿವೆ. ದೇಶದಲ್ಲಿ ಕಾಲಕಾಲಕ್ಕೆ ಆಗುವ ಸಾಮಾಜಿಕ ಬದಲಾವಣೆಗೆ ತಕ್ಕಂತೆ ಸಂವಿಧಾನ ತಿದ್ದುಪಡಿ ಮಾಡಲು, ಸಮಾಜದ ಬೇಡಿಕೆಗಳಿಗೆ ಸ್ಪಂದಿಸುವ ಇಚ್ಚಾಶಕ್ತಿ ಬೇಕಿದೆ. ವಾಲ್ಮೀಕಿ ಸ್ವಾಮೀಜಿಗಳ ಹೋರಾಟದ ಫಲದಿಂದ ಎಸ್ಟಿ ಮೀಸಲಾತಿ ಪ್ರಮಾಣವನ್ನು ಶೇ. 3ರಿಂದ 7ಕ್ಕೆ ಹೆಚ್ಚಳ ಮಾಡಲು ನನಗೆ ಪ್ರೇರಣೆಯಾಯಿತು ಎಂದು ಹೇಳಿದರು.
ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ ಮಾಡುವುದಕ್ಕೆ ಕೆಲವರು ಜೇನುಗೂಡಿಗೆ ಕೈ ಹಾಕುತ್ತಿದ್ದೀರಿ ಎಂದು ಹೇಳಿದರು. ನಾನು ನನಗೆ ಜೇನು ಕಡಿದರೂ ಚಿಂತೆಯಿಲ್ಲ, ಈ ಸಮುದಾಯಗಳಿಗೆ ಜೇನು ತಿನ್ನಿಸುತ್ತೇನೆ ಎಂದು ಐತಿಹಾಸಿಕ ತೀರ್ಮಾನ ಕೈಗೊಂಡಿದ್ದೇನೆ. ಮೀಸಲಾತಿ ಹೆಚ್ಚಳದ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ್ದೇವೆ. ಅಲ್ಲದೇ ಶೆಡ್ಯುಲ್ 9ನಲ್ಲಿ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದೇವೆ. ಮುಂದಿನ ಬಾರಿಯೂ ಮೋದಿಯವರೇ ಪ್ರಧಾನಿ ಆಗುವುದರಿಂದ ಮೀಸಲಾತಿ ಹೆಚ್ಚಳವನ್ನು ಶೆಡ್ಯುಲ್ 9ಗೆ ಸೇರಿಸಲು ಒತ್ತಾಯಿಸುವುದಾಗಿ ತಿಳಿಸಿದರು.
ಮೀಸಲಾತಿ ಹೆಚ್ಚಳದಿಂದ ಎಸ್ಟಿ ಸಮುದಾಯಕ್ಕೆ ಸುಮಾರು 3500 ಹೆಚ್ಚು ಎಂಜನಿಯರಿಂಗ್ ಸೀಟುಗಳು, ಸುಮಾರು 400 ವೈದ್ಯಕೀಯ ಸೀಟುಗಳು ಹೆಚ್ಚುವರಿಯಾಗಿ ದೊರೆತಿವೆ. ಅಲ್ಲದೆ ಎಲ್ಲ ಇಲಾಖೆಗಳ ಬಡ್ತಿಯಲ್ಲಿ ಹೆಚ್ಚು ಅವಕಾಶಗಳು ದೊರೆತಿವೆ. ನಾವು ಮಾಡಿರುವ ಆದೇಶವನ್ನು ಈ ರಾಜ್ಯ ಸರ್ಕಾರ ಜಾರಿಗೊಳಿಸಬೇಕು. ಆ ಕೆಲಸವನ್ನು ವಾಲ್ಮೀಕಿ ಸ್ವಾಮೀಜಿ ಈ ಸರ್ಕಾರ ದಿಂದ ಮಾಡಿಸಬೇಕು ಎಂದು ತಿಳಿಸಿದರು.
ಪ್ರಜಾಪ್ರಭುತ್ವ ದಲ್ಲಿ ಜನರ ಇಚ್ಚಾಶಕ್ತಿಯೇ ಅಂತಿಮ, ಆ ವಿಚಾರದಲ್ಲಿ ನನಗೆ ಜನರ ಇಚ್ಚಾಶಕ್ತಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ ಎಂಬ ಹೆಮ್ಮೆ ಇದೆ. ನನ್ನ ಅವಧಿಯಲ್ಲಿ ಎಸ್ಸಿಎಸ್ಟಿ, ಹಿಂದುಳಿದವರಿಗೆ ಸಾಮಾಜಿಕವಾಗಿ ನ್ಯಾಯ ಕೊಡಲು ಮೀಸಲಾತಿ ಹೆಚ್ಚಿಸುವ ಕೆಲಸ ಮಾಡಿದ್ದು, ನಾವು ಮಾಡಿರುವ ತೀರ್ಮಾನಗಳು ಮುಂದಿನ ದಿನಗಳಲ್ಲಿ ಆ ಸಮುದಾಯಗಳಿಗೆ ಅನುಕೂಲವಾಗುವ ವಿಶ್ವಾಸ ನನಗಿದೆ. ಒಬ್ಬ ನಾಯಕನಾಗಿ ನಮ್ಮ ಜನರಿಗೆ ರಕ್ಷಣೆ ಕೊಡದಿದ್ದರೆ ಏನು ಪ್ರಯೋಜನ? ನಾವು ಯಾವುದೇ ಸಮುದಾಯದಲ್ಲಿ ಹುಟ್ಡಿರಬಹುದು ಆದರೆ, ತುಳಿತಕ್ಕೊಳಗಾದ ಸಮುದಾಯಗಳಿಗೆ ನ್ಯಾಯ ಕೊಡಿಸುವ ಅವಾಕಾಶ ಸಿಕ್ಕಾಗ ಆ ಕೆಲಸವನ್ನು ಮಾಡಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ರಾಜುಗೌಡ, ವಾಲ್ಮೀಕಿ ಪೀಠಾಧ್ಯಕ್ಷ ಪ್ರಸನ್ನಾನಂದಪುರಿ ಸ್ವಾಮೀಜಿ, ಹರಿಹರ ಪಂಚಮಸಾಲಿ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ, ಶಾಸಕ ಬಿ. ಪಿ. ಹರೀಶ್, ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯ, ಸಾವಿರಾರು ಭಕ್ತರು, ಮತ್ತಿತರರು ಹಾಜರಿದ್ದರು.