ವಿಜಯಪುರದ ರಾಜಗುರು ಮೆಕ್ಕಜೋಳ ಸಂಸ್ಕರಣಾ ಘಟಕದಲ್ಲಿ ಸಂಭವಿಸಿದ ಅವಘಡದಲ್ಲಿ ಏಳು ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕು ಎಂದು ವಿಜಯಪುರ ಜಿಲ್ಲಾ ಜಂಟಿ ಕಾರ್ಮಿಕ ಸಂಘಟನೆಗಳ ಸಮಿತಿ ಆಗ್ರಹಿಸಿದೆ.
ವಿಜಯಪುರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ ಸಮಿತಿಯ ಕಾರ್ಯಕರ್ತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. “ಜೀವ ಕಳೆದುಕೊಂಡ ಕಾರ್ಮಿಕರ ಕುಟುಂಬಕ್ಕೆ ಕಾರ್ಮಿಕ ಕಾಯ್ದೆಗಳ ಪ್ರಕಾರ, ಮಾನವೀಯ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಹಾಗೂ ಜಿಲ್ಲಾಡಳಿತ ಹೆಚ್ಚಿನ ಪರಿಹಾರ ನೀಡಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದೆ.
“ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರಿಗೂ ಉಚಿತ ಮತ್ತು ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಬೇಕು. ಅವರ ಅರೆ ಅಂಗವೈಕಲ್ಯೆಕ್ಕೆ ಅನುಗುಣವಾಗಿ ಸೂಕ್ತ ಪರಿಹಾರ ನೀಡಬೇಕು. ಈ ಕುರಿತು ಜಿಲ್ಲೆಯ ಕಾರ್ಮಿಕ ಅಧಿಕಾರಿಗಳು, ಪಿಎಫ್ ಅಧಿಕಾರಿಗಳು, ಇಎಸ್ಇ ಅಧಿಕಾರಿಗಳ ಮೂಲಕ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.
ಪ್ರತಿಭಟನಾಕಾರರ ಹಕ್ಕೊತ್ತಾಯಗಳು:
1) ಮರಣ ಹೊಂದಿದ ಕಾರ್ಮಿಕರ ಕುಟುಂಬಕ್ಕೆ ಪರಿಹಾರವನ್ನು ಒದಗಿಸಬೇಕು.
2) ಗಾಯಾಳುಗಳಾದ ಕಾರ್ಮಿಕರಿಗೆ ಉತ್ತಮ ಉಚಿತವಾಗಿ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಬೇಕು.
3) ಗಾಯಾಳುಗಳಾದ ಕಾರ್ಮಿಕರು ಪೂರ್ಣ ಗುಣಮುಖರಾಗಿ ಮರಳಿ ಉದ್ಯೋಗಕ್ಕೆ ತಿರುಗುವವರೆಗೂ ವೇತನ ನೀಡಬೇಕು.
4) ಕೈಗಾರಿಕೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಕಾರ್ಮಿಕರಿಗೆ ಪಿಎಫ್ ಮತ್ತು ಇಎಸ್ಐ ಸೌಕರ್ಯಗಳನ್ನು ಕಡ್ಡಾಯಗೊಳಿಸಬೇಕು.
5) ಕೈಗಾರಿಕಾ ಕಟ್ಟಡ ನಿರ್ಮಾಣದಲ್ಲಿ ಗುಣಮಟ್ಟ ಕಾಪಾಡಬೇಕು.
6) ಎಲ್ಲಾ ಕೈಗಾರಿಕೆಗಳಲ್ಲಿ ಸುರಕ್ಷತಾ ಸಾಮಗ್ರಿಗಳನ್ನು ವ್ಯವಸ್ಥೆ ಮಾಡಿ, ಎಲ್ಲಾ ಕೈಗಾರಿಕೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಶಾಸನಬದ್ಧ ಸೌಕರ್ಯಗಳಾದ ಪಿಎಫ್, ಇಎಸ್ಐ ನೀಡಿದ ಕುರಿತು ಮೇಲಿಂದ ಮೇಲೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು.
7) ಕೈಗಾರಿಕಾ ಕಾರ್ಮಿಕ ಕಾಯ್ದೆಗಳನ್ನು ಉಲ್ಲಂಘನೆ ಮಾಡಿದ ಮಾಲೀಕರ ಮೇಲೆ ಕ್ರಮ ಕೈಗೊಳ್ಳಬೇಕು.
8) ವಲಸೆ ಕಾರ್ಮಿಕರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿಶೇಷ ನೀತಿಗಳನ್ನು ಸೌಲಭ್ಯಗಳನ್ನು ರೂಪಿಸಬೇಕು.
ನಿಯೋಗದಲ್ಲಿ ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ್ ಎಚ್ಟಿ, ಪ್ರಗತಿಪರ ಸಂಘಟನೆ ಮುಖಾಂಡಾರದ ಸಿದ್ದಲಿಂಗ ಬಾಗೇವಾಡಿ, ಸಿ.ಎ ಗಂಟೆಪ್ಪ ಗೋಳು ಸಂಚಾಲಕರು ಎಐಟಿಯುಸಿ, ಸಿಐಟಿಯು ನ ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ್ ಹಂದ್ರಾಳ, ಆರ್ ಆರ್ ನದಾಫ ರಾಜ್ಯ ಕಾರ್ಯದರ್ಶಿ ಕೆಎಸ್ಆರ್ಟಿಸಿ, ಪ್ರಗತಿಪರ ಸಂಘಟನೆಯ ಮುಖಂಡರಾದ ಅಕ್ರಮ್ ಮಾಶಾಳಕರ ಇತರರು ಉಪಸ್ಥಿತರಿದ್ದರು.