“ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ನ್ಯಾಯ ಒದಗಿಸುವ ದೃಷ್ಠಿಯಿಂದ ಜಿಲ್ಲೆಯ ಶಾಲಾ, ಕಾಲೇಜು, ಆಸ್ಪತ್ರೆ ಮತ್ತು ಪಂಚಾಯಿತಿಗಳಲ್ಲಿ 900 ಕ್ಕೂ ಹೆಚ್ಚು ಕಾನೂನು ಸಲಹಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ” ಎಂದು ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ದಾವಣಗೆರೆ ಜಿಲ್ಲಾ ಆಡಳಿತಾತ್ಮಕ ನ್ಯಾ. ರವಿ ವಿ.ಹೊಸಮನಿ ತಿಳಿಸಿದರು.
ದಾವಣಗೆರೆ ನಗರದ ಜಿಲ್ಲಾ ಪಂಚಾಯತ್ನ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಕಾನೂನು ಸಲಹಾ ಕೇಂದ್ರಗಳ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಅವರು “ಜನಸಾಮಾನ್ಯರಿಗೆ ಕಾನೂನು ಅರಿವು ಮೂಡಿಸಿ ನ್ಯಾಯ, ಹಕ್ಕುಗಳು ಮತ್ತು ಸರ್ಕಾರದ ಜನ ಕಲ್ಯಾಣ ಯೋಜನೆಗಳ ಕುರಿತು ಜಾಗೃತಿ ಮೂಡಿಸಿ ಅರ್ಹರಿಗೆ ತಲುಪುವಂತೆ ಮಾಡಲು ಗ್ರಾಮ ಮಟ್ಟದಿಂದ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾನೂನು ಜಾಗೃತಿಗಾಗಿ ಜಿಲ್ಲೆಯಲ್ಲಿ ಕಾನೂನು ಸಲಹಾ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ” ಎಂದು ತಿಳಿಸಿದರು.

ಇಂದಿಗೂ ಕೆಲವರಿಗೆ ಸಮರ್ಪಕವಾಗಿ ಕಾನೂನಾತ್ಮಕ ನ್ಯಾಯ ಲಭಿಸುತ್ತಿಲ್ಲ. ಪಾರದರ್ಶಕವಾಗಿ ಸ್ಥಳೀಯ ಮಟ್ಟದಲ್ಲಿ ನ್ಯಾಯದ ಹಿತದೃಷ್ಠಿಯಿಂದ ಹಾಗೂಸಮಾಜದಲ್ಲಿ ಎಲ್ಲರೂ ಒಂದೇ ಸಮವಾಗಿಲ್ಲದ ಕಾರಣ ಸಂವಿಧಾನ ಪೀಠಿಕೆಯನ್ವಯ ಅಂಗವಿಕಲರು, ಮಹಿಳೆಯರು, ವಿದ್ಯಾರ್ಥಿಗಳು, ಹಿರಿಯ ನಾಗರೀಕರು, ತೃತೀಯ ಲಿಂಗಿಗಳಿಗೂ ಸಮಾನ ನ್ಯಾಯ, ಸರ್ಕಾರದ ಯೋಜನೆಗಳನ್ನು ಒದಗಿಸುವ ನಿಟ್ಟಿನಲ್ಲಿ ಸಲಹಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಕೊಳ್ಳುಬೇಕು” ಎಂದು ತಿಳಿಸಿದರು.

ʼʼಮೂಲಭೂತ ಹಕ್ಕುಗಳು ಎಲ್ಲರಿಗೂ ಸಲ್ಲಬೇಕು ಎನ್ನುವುದು ಸಂವಿಧಾನದ ಉದ್ದೇಶ. ತನ್ನ ಹಕ್ಕುಗಳನ್ನು ಪಡೆಯಲು ಪ್ರತಿ ನಾಗರೀಕನು ಕಾನೂನು ಅರಿತಿರಬೇಕು. ಆಗ ಮಾತ್ರ ತನ್ನ ಹಕ್ಕುಗಳ ಪ್ರಯೋಜನ ಪಡೆಯಲು ಸಾಧ್ಯ. ಸರ್ಕಾರದ ಕಾನೂನುಗಳು ಎಲ್ಲಾ ಜನರಿಗೂ ತಲುಪುತ್ತಿಲ್ಲವೆಂಬುದನ್ನು ತಿಳಿದು ಏನು ಅರಿಯದ ಜನರಿಗೆ ಕಾನೂನಿನ ಅರಿವು ಮೂಡಿಸಲು ಈ ಕೇಂದ್ರಗಳಿಂದ ಸಹಕಾರಿಯಾಗಲಿದೆ” ಎಂದರು.
“ಭಾರತದ ಸಂವಿಧಾನದ ಪೀಠಿಕೆ ಅದ್ಬುತವಾದದು. ಕಾರಣ ಅದರಲ್ಲಿ ಅಡಗಿರುವ ಉದ್ದೇಶ ಕಾರಣವಾಗಿದೆ. ಯೋಜನೆ ಜಾರಿಗೆ ಮೊದಲು ಎಲ್ಲರನ್ನು ಒಟ್ಟುಗೂಡಿಸಿಕೊಂಡು ಜಾರಿಗೊಳಿಸಬೇಕು. ಆದರೆ ಒಬ್ಬ ವ್ಯಕ್ತಿಗೆ ಎರಡು ಬಾರಿ ಆ ಯೋಜನೆ ತಲುಪಬಾರದು, ತಲುಪಿದರೆ ಆ ಯೋಜನೆ ವಿಫಲವಾದಂತೆ”ಎಂದರು.
” ಜನರು ಸಮಸ್ಯೆ ಅಥವಾ ಕಾನೂನು ಸಲಹೆಗೆ ಉಚಿತ ಸಹಾಯವಾಣಿ ಸಂಖ್ಯೆ 15100 ಗೆ ಕರೆಮಾಡಿ ಮಾಹಿತಿ ಮತ್ತು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು” ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಜಿ,ಎಂ.ಗಂಗಾಧರಸ್ವಾಮಿ ಮಾತನಾಡಿ, “ಜಿಲ್ಲೆಯಾದ್ಯಂತ ಈವರೆಗೂ ಪೋಕ್ಸೋ, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ದತಿ, ಮಹಿಳಾ ರಕ್ಷಣೆ, ಶಾಲಾ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದು, ರಸ್ತೆ ಸುರಕ್ಷತೆ ಸೇರಿದಂತೆ ಹಲವಾರು ಜಾಗೃತಿ ಕಾರ್ಯಗಾರ ಆಯೋಜಿಸಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಲ್ಲಿ ಸಾಕಷ್ಟು ಅರಿವು ಮೂಡಿಸಲಾಗಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಪ್ರಾರಂಭಿಸಿರುವ ಕಾನೂನು ಸಲಹಾ ಕೇಂದ್ರಗಳಿಂದ ಅತ್ಯುತ್ತಮ ಕಾರ್ಯವಾಗಲಿದೆ. ಇದರಿಂದ ಜಿಲ್ಲೆಯಲ್ಲಿನ ಕಟ್ಟಕಡೆಯ ವ್ಯಕ್ತಿಗೂ ಸ್ಥಳೀಯ ಮಟ್ಟದಲ್ಲಿಯೇ ತನ್ನ ಹಕ್ಕು ಮತ್ತು ನ್ಯಾಯ ಪಡೆಯಲು ಸಹಕಾರಿಯಾಗಿದೆ. ಅದರಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳು ತಂಡೋಪ ತಂಡವಾಗಿ ಕಾರ್ಯನಿರ್ವಹಿಸಿ ಪ್ರತಿಯೊಬ್ಬರಿಗೂ ನ್ಯಾಯ ಒದಗಿಸುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತೇವೆ” ಎಂದು ಮಾಹಿತಿ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಮಾತನಾಡಿ, “ಶಿಕ್ಷಣದ ಜೊತೆಗೆ ಕಾನೂನಿನ ಅರಿವು ಮುಖ್ಯ. ಮಹಿಳಾ ಮತ್ತು ಮಕ್ಕಳ ದೌರ್ಜನ್ಯಕ್ಕೆ ಒಳಗಾದಾಗ ಪ್ರತಿಯೊಬ್ಬರು ನಮ್ಮ ಹಕ್ಕುಗಳ ರಕ್ಷಣೆ ಮಾಡಿಕೊಳ್ಳುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು. ಇತ್ತೀಚೆಗೆ ಸೈಬರ್ ಕ್ರೈಂ ಹೆಚ್ಚುತ್ತಿದ್ದು ಡಿಜಿಟಲ್ ಅರೆಸ್ಟ್ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು, ವಿದ್ಯಾವಂತರೇ ಡಿಜಿಟಲ್ ಅರೆಸ್ಟ್ ಗೆ ಒಳಗಾಗುತ್ತಿದ್ದಾರೆ. ಇಲಾಖೆ ವತಿಯಿಂದ ಯಾವುದೇ ಕಾರ್ಯಕ್ರಮ, ಕಾರ್ಯಗಾರ ಆಯೋಜನೆ ಮಾಡಿದರೂ ಸಹ ಅದನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಜನರ ಸಹಕಾರ ಮುಖ್ಯ. ಆಗಾಗಿ ಜಿಲ್ಲೆಯಲ್ಲಿ ಇಂತಹ ಕಾರ್ಯಗಾರ ಅಗತ್ಯ” ಎಂದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಗುಡ್ಡಗಳಲ್ಲಿ ಅಕ್ರಮ ಮಣ್ಣು ಸಾಗಾಣಿಕೆ: ರೈತರ ಅಧಿಕಾರಿಗಳ ಮೇಲೆ ಕ್ರಮಕ್ಕೆ ಆಗ್ರಹ
ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ವೇಲಾ ಡಿ.ಕೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ, ಈ ವೇಳೆ ಜಿಲ್ಲಾ ಪಂಚಾಯತ್ ಸಿಇಓ ಗಿತ್ತೆ ಮಾಧವ ವಿಠಲ ರಾವ್, ವಕೀಲರ ಸಂಘದ ಜಿಲ್ಲಾಧ್ಯಕ್ಷ ಗುರುಬಸವರಾಜ್, ವಿವಿಧ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ವಕೀಲರು ಉಪಸ್ಥಿತರಿದ್ದರು.