ಕಳೆದ ನಾಲ್ಕೈದು ದಿನಗಳಿಂದ ಸುರಿದ ಮಳೆಯಿಂದಾಗಿ ನವಲಗುಂದ ತಾಲೂಕಿನಲ್ಲಿ ತುಪ್ಪರಿ ಹಳ್ಳ ಹಾಗೂ ಬೆಣ್ಣಿ ಹಳ್ಳಗಳು ತುಂಬಿ ಹರಿದಿದ್ದು, ಪ್ರವಾಹ ಉಂಟಾಗಿದೆ. ಪ್ರವಾಹದಿಂದ ಹಾನಿಗೊಳಗಾದ ಹನಸಿ, ಶಿರಕೋಳ, ಬಳ್ಳೂರ ಗ್ರಾಮಗಳಿಗೆ ಸಚಿವ ಸಂತೋಷ ಲಾಡ್, ಶಾಸಕ ಎನ್.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಭೇಟಿ ನೀಡಿ, ಪರಿಸ್ಥಿತಿ ಪರಿಶೀಲಿಸಿದ್ದಾರೆ.
ಹನಸಿ ಗ್ರಾಮದಲ್ಲಿ ಲಲಿತಾ ಗಂಗಪ್ಪ ಹೆಬ್ಬಳ್ಳಿ, ಗುರಪಾದಪ್ಪ ರುದ್ರಪ್ಪ ಆಯೆಟ್ಟಿ ಹಾಗೂ ಬಸವರಾಜ ಚಂದ್ರಶೇಖರ ಇಂಡಿ, ಬಳ್ಳೂರ ಗ್ರಾಮದ ವಾಸುದೇವ ಬೆಳ್ಳಿಕಟ್ಟಿ ಮತ್ತು ರೇಣ್ಣಪ್ಪ ಕುಂಬಾರ ಎಂಬವರ ಮನೆಗಳು ಹಾನಿಗೊಳಗಾಗಿದ್ದು, ಶೀಘ್ರವೇ ಪರಿಹಾರ ಒದಗಿಸಲಾಗುವುದು ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂತೋಷ್ ಲಾಡ್, “2019ರಲ್ಲಿ ಸರ್ಕಾರ ಒದಗಿಸಿದ ಅನುದಾನದಲ್ಲಿ ಹೂಳು ತೆಗೆಯುವುದು, ಬದು ಎತ್ತರಿಸುವುದು ಹಾಗೂ ತಡೆಗೋಡೆ ಕಾಮಗಾರಿಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ. ಆದರೂ, ಸಹ ನೀರು ಗ್ರಾಮಗಳಿಗೆ ಹಾಗೂ ರೈತರ ಜಮೀನುಗಳಿಗೆ ನುಗ್ಗಿ ಸಾಕಷ್ಟು ಹಾನಿಯಾಗುತ್ತಿದೆ. ವೈಜ್ಞಾನಿಕವಾಗಿ ಮೇಲ್ಸೇತುವೆ ಎತ್ತರಿಸುವುದು ಹಾಗೂ ಹಲವೆಡೆ ಬ್ಯಾರೇಜಗಳನ್ನು ನಿರ್ಮಿಸಿ ಮುಂದಿನ ದಿನಮಾನಗಳಲ್ಲಿ ಜನರಿಗೆ ರೈತರಿಗೆ ತೊಂದರೆ ಆಗದಂತೆ ಶಾಸಕರು ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿ ಕ್ರಮಕೈಗೊಳ್ಳಲಾಗುವುದು. ಮಳೆಗಾಲದ ನಂತರ ದುರಸ್ತಿ ಕಾರ್ಯ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.
“ವೈಜ್ಞಾನಿಕ ಹಾಗೂ ಗುಣಮಟ್ಟದ ಕಾಮಗಾರಿ ನಿರ್ಮಾಣಕ್ಕೆ ಗುತ್ತಿಗೆದಾರರಿಗೆ, ಅಧಿಕಾರಿಗಳಿಗೆ ತಾಕೀತು ಮಾಡಲಾಗುವುದು. ತಾಂತ್ರಿಕತೆ ಅರಿತು ಟೆಂಡರ್ ಕರೆಯುವುದು ಸೂಕ್ತ. ತುಪ್ಪರಿಹಳ್ಳ 65 ಹಾಗೂ ಬೆಣ್ಣಿಹಳ್ಳ 140 ಕಿ.ಮೀ. ಹರಿದಿದೆ. ಹಳ್ಳದಗುಂಟ ಹಾನಿ ಮಾಡುತ್ತಿವೆ. ಈ ಉಭಯ ಹಳ್ಳಗಳಲ್ಲಿ ವ್ಯರ್ಥವಾಗಿ ಹರಿಯುವ ನೀರನ್ನು ಸಂಗ್ರಹಿಸಿ ಸದ್ಬಳಕೆಗೆ ಯೋಜನೆ ರೂಪಿಸುವ ಬಗ್ಗೆ ಚಿಂತಿಸಲಾಗುತ್ತಿದೆ” ಎಂದರು.
ನವಲಗುಂದ ಶಾಸಕ ಎನ್.ಎಚ್.ಕೋನರೆಡ್ಡಿ ಮಾತನಾಡಿ, “ತುಪ್ಪರಿಹಳ್ಳಕ್ಕೆ ರೂ. 315 ಕೋಟಿ ಮಂಜೂರಾಗಿದೆ. ಮೊದಲ ಹಂತದಲ್ಲಿ 150 ಕೋಟಿ ಟೆಂಡರ್ ಆಗಿದೆ. ದ್ವಿತೀಯ ಹಂತದಲ್ಲಿ 110 ಕೋಟಿ ಟೆಂಡರ್ ಆಗಬೇಕಿದೆ” ಎಂದರು.
“ಉಪ್ಪಿನಬೆಟಗೇರಿಯಿಂದ ಪ್ರಾರಂಭವಾಗುವ ಬೆಣ್ಣೆಹಳ್ಳ ನವಲಗುಂದವರೆಗೆ ಹರಿಯಲಿದೆ. ಈ ನೀರು ನೀರಾವರಿ ಬಳಕೆಗೆ ಯೋಜನೆ ರೂಪಿಸಲಿದೆ. ಈ ಬಗ್ಗೆ ವಿಸ್ತøತ ಯೋಜನಾ ವರದಿ ತಯಾರಿಸುವ ಪ್ರಕ್ರಿಯೆ ನಡೆದಿದೆ” ಎಂದು ತಿಳಿಸಿದರು.
“ಬಾಗಲಕೋಟಿ, ಹಾವೇರಿ, ಧಾರವಾಡ ಜಿಲ್ಲೆಗಳು ಒಳಗೊಳ್ಳುವ ಈ ಬೆಣ್ಣೆಹಳ್ಳ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ನೀರಾವರಿಗೆ ಒಳಪಡಿಸುವಂತೆ ಘೋಷಿಸಿದ್ದು, ಎಸ್ಡಿಆರ್ಎಫ್ ದಲ್ಲಿ 1,600 ಕೋಟಿಗೆ ಡಿಪಿಆರ್ ಆಗಿದೆ ಎಂದರು. ಅಲ್ಲದೇ, ನೀರು ಸಂಗ್ರಹಿಸಲು ಜಾಗದ ಕೊರತೆ ಇರುವ ಕಾರಣಕ್ಕೆ ಕೆರೆಗಳಿಗೆ ಈ ನೀರನ್ನು ತುಂಬಿಸಿ, ಪಂಪ್ ಮಾಡಿ ಬಳಸುವ ಯೋಜನೆ ರೂಪಿಸುವ ಕಾರ್ಯ ನಡೆದಿದೆ. ಇದು ಮೂರು ಹಂತದಲ್ಲಿ ಕಾರ್ಯ ಜರುಗಲಿದೆ ಎಂದು ತಿಳಿಸಿದರು. ಬೆಣ್ಣೆಹಳ್ಳದ ಜಮೀನು ಹಾನಿ ಸರ್ವೆ ಆಗಿಲ್ಲ. ಸದ್ಯ ಮಳೆಗಾಲ ಇದೆ. ಮಳೆಗಾಲದ ಬಳಿಕ ಸರ್ವೆ ಕಾರ್ಯ ನಡೆಯಲಿದೆ. ಬೆಣ್ಣೆಹಳ್ಳ ಅಗಲೀಕರಣ ಮಾಡಲು ಹಳ್ಳದ ಅಂಚಿನ ರೈತರು ಕೂಡ ಸಹಕಾರ ನೀಡಬೇಕಿದೆ” ಎಂದರು.