ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ಬಳಿ ಬುಧವಾರ ಸಂಜೆ ನಾಲ್ವರು ಯೂಟ್ಯೂಬರ್ಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಕನ್ಯಾಡಿ ನಿವಾಸಿ ಜೀಪು ಚಾಲಕ ಸೋಮನಾಥ ಸಪಲ್ಯ(50) ನನ್ನು ಆ.7 ರಂದು ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಆರ್ ಗಾಣಿಗೇರಾ ನೇತೃತ್ವದ ತಂಡ ಬಂಧಿಸಿ ಕೊಕ್ಕಡ ಎಂಬಲ್ಲಿ ದಸ್ತಗಿರಿ ಮಾಡಿದ್ದು, ಗುರುವಾರ ಸಂಜೆ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಬೆಳ್ತಂಗಡಿ ನ್ಯಾಯಾಲಯವು ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಮಾಹಿತಿ ನೀಡಿದ್ದಾರೆ.
ಇದನ್ನು ಓದಿದ್ದೀರಾ? ಧರ್ಮಸ್ಥಳ | ಸುಳ್ಳು ಹೇಳಿ ಸಿಕ್ಕಿಬಿದ್ದ ‘ಸುವರ್ಣ ನ್ಯೂಸ್’ ವರದಿಗಾರರು
ಹಲವು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಆ.6 ರಂದು ಸಂಜೆ ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್ ನಲ್ಲಿ ನಾಲ್ಕು ಮಂದಿ ಯೂಟ್ಯೂಬರ್ ಮೇಲೆ ಹಲ್ಲೆ ನಡೆಸಿ ಕ್ಯಾಮರಾಗಳಿಗೆ ಹಾನಿ ಮಾಡಿ ಜೀವ ಬೆದರಿಕೆ ಒಡ್ಡಲಾಗಿತ್ತು. ಈ ಘಟನೆಯ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 189(2), 191(2), 115(2), 324(5),352,307 ಜತೆಗೆ 190 ಬಿಎನ್ಎಸ್ ಕಾಯ್ದೆಯ ಅಡಿಯಲ್ಲಿ ಸುಮಾರು 15 ರಿಂದ 40ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.
