ಕ್ವಾರಿ ಕೆಲಸ ಅಪಾಯಕಾರಿ ಎಂದು ನಮಗೆಲ್ಲರಿಗೂ ಗೊತ್ತು. ಇಲ್ಲಿ ಸಣ್ಣ ತಪ್ಪು ಕೂಡ ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು. ಆದರೆ, ಜಾಗರೂಕರಾಗಿದ್ದರೆ ಬಹುತೇಕ ಅಪಘಾತಗಳನ್ನು ತಡೆಯಬಹುದು ಎಂದು ಕಾರ್ಮಿಕ ಇಲಾಖೆಯ ಉಪ ನಿರ್ದೇಶಕರಾದ ಅಕ್ಬರ್ ಮುಲ್ಲಾ ಹೇಳಿದರು.
ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಧಾರವಾಡ ಜಿಲ್ಲಾಡಳಿತ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಬಳ್ಳಾರಿ ಡಿ.ಜಿ.ಎಂ.ಎಸ್ ಹಾಗೂ ಕಾರ್ಮಿಕ ಇಲಾಖೆ ಸಹಯೋಗದೊಂದಿಗೆ ಆಯೋಜಿಸಲಾದ ಒಂದು ದಿನದ ಜಾಗೃತಿ, ಉಪನ್ಯಾಸ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು, ಮಾತನಾಡಿದರು.
ಸರ್ಕಾರದ ನಿಯಮಾವಳಿ ಪ್ರಕಾರ ಎಲ್ಲರೂ ನಿಯಮಗಳನ್ನು ಪಾಲಿಸಬೇಕು. ನೀವು ಕೆಲಸ ಮಾಡುವ ಕ್ವಾರಿ ಸ್ಥಳಗಳ ಸುತ್ತಲೂ ತಂತಿ ಬೇಲಿಯನ್ನು ಹಾಕಿಸಬೇಕು. ಹಾಗೂ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಅದೇ ರೀತಿ ಅಗ್ನಿಶಾಮಕದಳ, ಆಂಬುಲೆನ್ಸ್ ಹಾಗೂ ಅಧಿಕಾರಿಗಳ ನಂಬರ, ಅವರ ಹೆಸರು ನಾಮಫಲಕಗಳಲ್ಲಿ ಅಳವಡಿಸಬೇಕು ಎಂದು ಹೇಳಿದರು.
ಸರಿಯಾಗಿ ದಾಖಲೆಗಳನ್ನು ನಿರ್ವಹಿಸಿಕೊಂಡು ಹೋಗಬೇಕು. ಪ್ರತಿ ವರ್ಷ ದಾಖಲೆಗಳ ನವೀಕರಣವನ್ನು ಕಡ್ಡಾಯವಾಗಿ ಮಾಡಿಸಬೇಕು. ಇದರ ಮುಖ್ಯ ಉದ್ದೇಶವೆಂದರೆ ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವುದು, ಅವರಿಗೆ ನ್ಯಾಯಯುತವಾದ ಕೆಲಸದ ವಾತಾವರಣವನ್ನು ಒದಗಿಸುವುದು ಮತ್ತು ಮಾಲೀಕರು ಹಾಗೂ ಕಾರ್ಮಿಕರ ನಡುವೆ ಉತ್ತಮ ಸಂಬಂಧವನ್ನು ಕಾಪಾಡುವುದು. ಈ ಉದ್ದೇಶಕ್ಕಾಗಿ ಸರಕಾರದಿಂದ ಹಲವಾರು ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದರು.
ಕಾರ್ಮಿಕ ಇಲಾಖೆಯ ಉಪನಿರ್ದೇಶಕಿ ಮಾರಿಕಾಂಬಾ ಮಾತನಾಡಿ, ಗಣಿಗಾರಿಕೆ ಕ್ಷೇತ್ರದಲ್ಲಿ ತೊಡಗಿರುವ ಕಾರ್ಮಿಕರು ತಮ್ಮ ಹಕ್ಕುಗಳನ್ನು ತಿಳಿದುಕೊಳ್ಳುವುದು ಹಾಗೂ ಸುರಕ್ಷತಾ ನಿಯಮಗಳನ್ನು ಅನುಸರಿಸುವುದು ಅವಶ್ಯಕ ಎಂದರು. ಗಣಿ ಮತ್ತು ಭೂ ವಿಜ್ಞಾನ ಹಿರಿಯ ಅಧಿಕಾರಿ ಡಾ. ಉಮೇಶ ಬಗರಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದನ್ನು ಓದಿದ್ದೀರಾ? ಆಧಾರರಹಿತ ಮತ್ತು ಸುಳ್ಳು : ಧರ್ಮಸ್ಥಳ ಬೆಳವಣಿಗೆ ಬಗ್ಗೆ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ವೇದಿಕೆಯಲ್ಲಿ ಪಟ್ಟಾ ಲ್ಯಾಂಡ್ ಕ್ವಾರಿ ಮತ್ತು ಜಲ್ಲಿ ಸ್ಟೋನ್ ಕ್ರಶರ್ ಓನರ್ಸ್ ಅಸೋಸಿಯೇಷನ್ ಅಧ್ಯಕ್ಷ ವಿ.ಎಸ್.ಪಾಟೀಲ, ಬಳ್ಳಾರಿ ಡಿ.ಜಿ.ಎಮ್.ಎಸ್. ಮೈಂಡ್ ಸೇಫ್ಟಿಯ ನಿರ್ದೇಶಕ ಯೋಹಾನ್ ಯಜುರಲ್ಲಾ, ಉಪನಿರ್ದೇಶಕ ದಿಪೇಂದ್ರ ಪಂಥ ಉಪಸ್ಥಿತರಿದ್ದರು. ಕಾರ್ಯಾಗಾರದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಕ್ವಾರಿಗಳ ಮಾಲೀಕರು ಭಾಗವಹಿಸಿದ್ದರು.
