ತೀವ್ರ ಅತಿಸಾರದಿಂದ ಸಂಭವಿಸುವ ಮಕ್ಕಳ ಮರಣವನ್ನು ಶೂನ್ಯಕ್ಕೆ ತರುವ ಉದ್ದೇಶದಿಂದ ಧಾರವಾಡ ಜಿಲ್ಲೆಯಾದ್ಯಂತ ಸುಮಾರು 1622 ಅಂಗನವಾಡಿ ಕೇಂದ್ರಗಳಲ್ಲಿ ಓಆರ್ಎಸ್ ವಿತರಣಾ ಅಭಿಯಾನ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಸಮನ್ವಯ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು, “ಈ ಅಭಿಯಾನವು ಜುಲೈ 31 ರವರೆಗೆ ನಡೆಯಲಿದ್ದು, ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು ಕ್ಷೇತ್ರ ಮಟ್ಟದಲ್ಲಿ ಅರಿವು ಮೂಡಿಸಲಿದ್ದಾರೆ. ತೀವ್ರತರ ಅತಿಸಾರ ಕೊನೆಗೊಳಿಸುವ ಅಭಿಯಾನದಡಿ ಜಿಲ್ಲೆಯಲ್ಲಿ ಹುಟ್ಟಿದ ಮಗುವಿನಿಂದ ಹಿಡಿದು ಐದು ವರ್ಷದವರೆಗಿನ ಮಕ್ಕಳನ್ನು ಗುರುತಿಸಿ ಓಆರ್ಎಸ್ ನೀಡಲಾಗುತ್ತದೆ. ಜಿಲ್ಲೆಯಲ್ಲಿಸುಮಾರು 95,118 ಮಕ್ಕಳಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿ ಓಆರ್ಎಸ್ ಕಾರ್ನರ್ಗಳನ್ನು ಮಾಡಲು ಮತ್ತು ಕೈತೊಳೆಯುವ ವಿಧಾನ ಕುರಿತಂತೆ ಮಕ್ಕಳಿಗೆ ತಿಳಿಸಿ ಹೇಳಲು ಸೂಚಿಸಲಾಗಿದೆ” ಎಂದು ಹೇಳಿದರು.
ಶಾಲೆಗಳಲ್ಲಿ ಶುದ್ಧ ಕುಡಿಯುವ ನೀರನ್ನು ವಿದ್ಯಾರ್ಥಿಗಳಿಗೆ ಒದಗಿಸಲು ಶಾಲಾ ಶಿಕ್ಷಣ ಇಲಾಖೆಗೆ ಸೂಚಿಸಿದರು. ಅಭಿಯಾನದ ಕುರಿತು ಧಾರವಾಡದ ಎಸ್.ಡಿ.ಎಮ್ ಮತ್ತು ಹುಬ್ಬಳ್ಳಿ ಕಿಮ್ಸ್ ವೈದ್ಯಕೀಯ ಮಹಾವಿದ್ಯಾಲಯದ ಮಕ್ಕಳ ವಿಭಾಗ ಮತ್ತು ಸಮುದಾಯ ಆರೋಗ್ಯ ವಿಭಾಗದವರಿಂದಲೂ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ತಿಳಿಸಿದರು.
ಇದನ್ನೂ ಓದಿ: ಧಾರವಾಡ | ಕಬ್ಬಿನ ಹೊಲದಲ್ಲಿ 12 ಅಡಿ ಉದ್ದದ ಹೆಬ್ಬಾವು
ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಸಂಗಪ್ಪಾ ಗಾಬಿ ಮಾತನಾಡಿ, ಜಿಲ್ಲಾ ಆಸ್ಪತ್ರೆಯಲ್ಲಿ ಅತಿಸಾರದಿಂದ ಬಳಲುತ್ತಿರುವ ಮಕ್ಕಳಿಗೆ ಸೂಕ್ತ ವ್ಯವಸ್ಥೆ ಲಭ್ಯವಿರುವುದಾಗಿ ತಿಳಿಸಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್. ಎಮ್ ಹೊನಕೇರಿ ಮಾತನಾಡಿ, ಇದೊಂದು ಮಹತ್ವದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮವಾಗಿದ್ದು, ಎಲ್ಲ ಇಲಾಖೆಗಳು ಸಹಕಾರ ನೀಡಬೇಕೆಂದು ಕೋರಿದರು.
ಸಭೆಯಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಸುಜಾತಾ ಹಸವೀಮಠ, ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು, ತಾಲೂಕು ಆರೋಗ್ಯ ಅಧಿಕಾರಿಗಳು, ತಾಲೂಕು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಾರ್ತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ದಿ ಅಧಿಕಾರಿಗಳು, ಎಸ್.ಡಿ.ಎಮ್ ಮತ್ತು ಕಿಮ್ಸ್ ವೈದ್ಯಕೀಯ ಮಹಾವಿದ್ಯಾಲಯದ ತಜ್ಞ ವೈದ್ಯರು ಉಪಸ್ಥಿತರಿದ್ದರು.