ಕೃಷಿ ಅಧಿಕಾರಿ ಹುದ್ದೆಗಳಿಗೆ ಕೃಷಿ ವಿವಿ ಪದವೀಧರರಿಗೆ ಮಾತ್ರ ಅವಕಾಶ ನೀಡಬೇಕೆಂದು ಆಗ್ರಹಿಸಿ, ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ 21ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆ ತೀವ್ರಗೊಂಡು ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹವನ್ನೂ ಆರಂಭಿಸಿದ್ದಾರೆ.
ಕೃಷಿ ಅಧಿಕಾರಿ ನೇಮಕಾತಿಯಲ್ಲಿ ಇತರ ಪದವಿ ಪಡೆದವರಿಗೆ ಅವಕಾಶ ನೀಡಿರುವುದನ್ನು ಖಂಡಿಸಿ ಹಾಗೂ ಈ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ, ವಿದ್ಯಾರ್ಥಿಗಳು ವಿವಿ ಪ್ರವೇಶ ದ್ವಾರ ಹಾಗೂ ಆಡಳಿತ ಭವನದ ಮುಂದೆ ನಿರಂತರ ಧರಣಿ ನಡೆಸುತ್ತಿದ್ದಾರೆ. ಆರಂಭದಲ್ಲಿ ಪ್ರತಿಭಟನಾ ಧರಣಿಗೆ ಸೀಮಿತವಾಗಿದ್ದ ಹೋರಾಟ, ಈಗ ಉಪವಾಸ ಸತ್ಯಾಗ್ರಹದ ಮಟ್ಟಕ್ಕೆ ತಲುಪಿದೆ.
ರಾಜ್ಯ ಸರ್ಕಾರ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳು ಧಿಕ್ಕಾರ ಕೂಗುತ್ತಾ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದ ಒಬ್ಬ ವಿದ್ಯಾರ್ಥಿನಿ ಬೆಳಿಗ್ಗೆ ಉಪಹಾರ ಸೇವಿಸದೆ ಅಸ್ವಸ್ಥರಾಗಿದ್ದರು. ವೈದ್ಯರು ಅವರ ಆರೋಗ್ಯ ಪರೀಕ್ಷೆ ನಡೆಸಿ ಪ್ರಾಥಮಿಕ ಚಿಕಿತ್ಸೆ ನೀಡಿದರು.
ವಿದ್ಯಾರ್ಥಿಗಳು, “ಕೃಷಿ ಅಧಿಕಾರಿ ನೇಮಕಾತಿಯಲ್ಲಿ ಕೃಷಿ ವಿವಿ ಪದವೀಧರರಿಗೆ ಮಾತ್ರ ಅವಕಾಶ ನೀಡಬೇಕು. ಇಲ್ಲದಿದ್ದರೆ ನಮ್ಮ ಹೋರಾಟವನ್ನು ತೀವ್ರಗೊಳಿಸುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ. 21 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಗೆ ಸರ್ಕಾರ ಇನ್ನೂ ಸ್ಪಂದಿಸದಿರುವುದು ವಿದ್ಯಾರ್ಥಿಗಳ ಅಸಮಾಧಾನ ಹೆಚ್ಚಿಸಿದೆ.
ಬೆಳಿಗ್ಗೆಯಿಂದಲೇ ವಿವಿ ಸಿಬ್ಬಂದಿಯನ್ನು ಗೇಟ್ ಬಳಿ ತಡೆದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಅಸ್ವಸ್ಥರಾದ ಸಹಪಾಠಿಗೆ ಚಿಕಿತ್ಸೆ ಕೊಡಿಸಿದ ತರುವಾಯ ಪುನಃ ಹೋರಾಟ ಮುಂದುವರೆಸಿದ್ದಾರೆ.




