ಕೋವಿಡ್ ಬಗ್ಗೆ ಜಿಲ್ಲೆಯ ಜನರು ಆತಂಕ ಪಡಬೇಕಿಲ್ಲ, ಆದರೆ ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕೋವಿಡ್ ಮುಂಜಾಗ್ರತೆ ಕುರಿತು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿ ಅವರು, “ಜ್ವರ, ನೆಗಡಿ, ಕೆಮ್ಮು ಇರುವವರು ಮಾಸ್ಕ್ ಧರಿಸಬೇಕು. ಹೆಚ್ಚಿನ ತೊಂದರೆಯಾದರೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೋವಿಡ್-19 ರೋಗದ ಲಕ್ಷಣಗಳು ಕಂಡು ಬಂದರೆ ಹೋಮ್ ಐಸೋಲೆಷನಲ್ಲಿ ಇರಬಹುದಾಗಿದ್ದು, ಆರೋಗ್ಯ ಇಲಾಖೆಯ ಅಧಿಕಾರಿಗಳು ತಮ್ಮ ಮನೆಗಳಿಗೆ ಭೇಟಿ ನೀಡಿ ಆರೋಗ್ಯದ ಬಗ್ಗೆ ಪರೀಕ್ಷಿಸುತ್ತಾರೆ. ಸೀವಿಯರ್ ಆದರೆ ಮಾತ್ರ ಜನರು ಆಸ್ಪತ್ರೆಗಳಿಗೆ ದಾಖಲಾಗಬೇಕು” ಎಂದು ಹೇಳಿದರು.
“ರಾಜ್ಯ ಸರ್ಕಾರ ಕಾಲ ಕಾಲಕ್ಕೆ ನೀಡುವ ಕೋವಿಡ್-19 ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸಿ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಜಾತ್ರೆ, ಉತ್ಸವ ಸೇರಿದಂತೆ ಇತರೆ ಕಾರ್ಯಕ್ರಮಗಳಿಗೆ ಯಾವುದೇ ನಿರ್ಬಂಧ ಇಲ್ಲದಿದ್ದರೂ ಸ್ವಯಂ ಆರೋಗ್ಯದ ಬಗ್ಗೆ ಗಮನ ಕೊಡಬೇಕು. ಹೊಸ ವರ್ಷ ಹಾಗೂ ಜಿಲ್ಲೆಯ ಹುಮನಾಬಾದ ವೀರಭದ್ರೇಶ್ವರ ಜಾತ್ರೆ ಸೇರಿದಂತೆ ಇತರೆ ಯಾವುದೇ ಉತ್ಸವದ ಸಂದರ್ಭಗಳಲ್ಲಿ ಜನರು ತಮ್ಮ ಆರೋಗ್ಯದ ಕಡೆ ಎಚ್ಚರ ವಹಿಸಬೇಕು. ಈ ಹಿಂದೆ ಕೋವಿಡ್ ಮೊದಲ ಮತ್ತು ಎರಡನೇ ಅಲೆ ಬೀದರ್ ಜಿಲ್ಲೆಯಿಂದಲೇ ಆರಂಭವಾಗಿತ್ತು. ಹಾಗಾಗಿ ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಬೆಡ್, ವೆಂಟಿಲೇಟರ್, ಆಕ್ಸಿಜನ್ ಸೇರಿದಂತೆ ಇತರೆ ಯಾವುದೇ ಸಮಸ್ಯೆಗಳಾಗದಂತೆ ಮುಂಜಾಗ್ರತೆ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
“ತಮಿಳುನಾಡು,ಕೇರಳ, ಮಹಾರಾಷ್ಟ್ರ, ತೆಲಂಗಾಣದಿಂದ ಬರುವ ಪ್ರಯಾಣಿಕರ ಮೇಲೆ ನಿಗಾವಹಿಸಿ ಮಾಹಿತಿ ಪಡೆಯಬೇಕು. 60 ವರ್ಷ ಮೇಲ್ಪಟ್ಟವರು ಮಾಸ್ಕ್ ಧರಿಸಬೇಕು. ನೆಗಡಿ, ಕೆಮ್ಮು, ಜ್ವರ ಇರುವ ಶಾಲಾ ಮಕ್ಕಳು ಮಾಸ್ಕ್ ಧರಿಸಿ ಹೋಗಬೇಕು, ಗರ್ಭಿಣಿಯರಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಲ್ಲ, ಆದರೂ ವೈದ್ಯರ ಸಲಹೆ ಪಡೆದುಕೊಳ್ಳಬೇಕೆಂದರು. ಜನರು ಗುಂಪು ಸೇರುವುದಕ್ಕೆ ಯಾವುದೇ ನಿರ್ಬಂಧಗಳಿಲ್ಲ. ಜಿಲ್ಲೆಯ ಗಡಿಗಳಲ್ಲಿ ಚೆಕ್ ಪೋಸ್ಟ್ ಇಲ್ಲ, ಆದರೆ ಕೋವಿಡ್- 19 ಓಮಿಕ್ರಾನ್ನ ಉಪ ತಳಿ ಜೆಎನ್-1 ಪ್ರಕರಣಗಳು ರಾಜ್ಯದಲ್ಲಿ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು ಮುಂಜಾಗ್ರತೆ ವಹಿಸಬೇಕು” ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ದಿಲಿಫ್ ಬಡೋಲೆ ಮಾತನಾಡಿ, “ಜನರು ಗುಂಪು ಸೇರುವಲ್ಲಿ ಮಾಸ್ಕ್ ಧರಿಸಿ, ಶಾಲಾ ಮತ್ತು ಅಂಗನವಾಡಿ ಕೇಂದ್ರಗಳಿಗೆ ಜ್ವರ, ಕೆಮ್ಮು, ನೆಗಡಿ ಇರುವ ಮಕ್ಕಳಿಗೆ ಶಾಲೆಗಳಿಗೆ ಕಳುಹಿಸಬೇಡಿ, ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಮತ್ತು ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕೆಂದು” ಹೇಳಿದರು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಮಾತನಾಡಿ, “ಪೊಲೀಸರು ತುರ್ತಾಗಿ ಸ್ಪಂದಿಸಲು ಸಾರ್ವಜನಿಕರು 112 ಸಹಾಯವಾಣಿಗೆ ಕರೆ ಮಾಡಿ ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ. ಈಗಾಗಲೇ ಹಿಂದಿನ ಕೋವಿಡ್ ಅಲೆಯಲ್ಲಿ ಸಮಸ್ಯೆಗಳನ್ನು ನೋಡಿದ್ದೇವೆ, ಇದೀಗ ಎಲ್ಲರೂ ಒಟ್ಟಾಗಿ ಕಾರ್ಯ ನಿರ್ವಹಿಸಬೇಕು” ಎಂದು ಅಧಿಕಾರಿಗಳಿಗೆ ಹೇಳಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಉಪ ತಹಶೀಲ್ದಾರ್ ವರ್ಗಾವಣೆಗೆ ಆಗ್ರಹಿಸಿ ಅರಬೆತ್ತಲೆ ಪ್ರತಿಭಟನೆ
ಸಭೆಯಲ್ಲಿ ಬೀದರ ಸಹಾಯಕ ಆಯುಕ್ತ ಲವೀಶ್ ಓರ್ಡಿಯಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಜ್ಞಾನೇಶ್ವರ ನೀರಗುಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೆಶಕ ಪ್ರಭಾಕರ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ದಿಲೀಪ ಡೋಂಗರೆ, ಸಹಾಯಕ ಕಾರ್ಯಪಾಲಕ ಅಭಿಯಂತರು ನಾಗನಾಥ, ಹುಮನಾಬಾದ ನಗರ ಸಭೆ ಮುಖ್ಯಾಧಿಕಾರಿ ಶಿವಕುಮಾರ, ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕಿನ ತಹಸೀಲ್ದಾರರು, ತಾಲ್ಲೂಕ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ನಗರ ಸಭೆ, ಪುರಸಭೆ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.