- ರಸ್ತೆಯ ಮಾರ್ಗವಾಗಿ ಜೇವರ್ಗಿಗೆ ತೆರಳಿದ ರಾಹುಲ್ ಗಾಂಧಿ
- ಕರ್ನಾಟಕದಲ್ಲಿ ಕಾಂಗ್ರೆಸ್ 150 ಸ್ಥಾನ ಗೆಲ್ಲಲಿದೆ ಎಂದ ರಾಹುಲ್
ರಾಜ್ಯದಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆ ಪ್ರಯುಕ್ತ ರಾಜ್ಯದ್ಯಂತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರ ತೀವ್ರಗೊಳಿಸಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ನಡೆದ ಸಮಾವೇಶಕ್ಕೆ ಮಳೆ ಅಡ್ಡಿಯುಂಟು ಮಾಡಿದ್ದು, ಸುರಿಯುವ ಮಳೆಯಲ್ಲೇ ಛತ್ರಿಯ ಆಸರೆಯೊಂದಿಗೆ ರಾಹುಲ್ ಗಾಂಧಿ ಮತದಾರರನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ಹವಾಮಾನದ ವೈಪರಿತ್ಯದ ಕಾರಣ ಕಲಬುರಗಿ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ ತೆರಳುವುದು ಸಾಧ್ಯವಾಗಲಿಲ್ಲ. ಹಾಗಾಗಿ, ರಸ್ತೆಯ ಮಾರ್ಗವಾಗಿ ರಾಹುಲ್ ಗಾಂಧಿ ಜೇವರ್ಗಿಗೆ ತೆರಳಿದ್ದಾರೆ.
ಸುರಿಯುವ ಮಳೆಯಲ್ಲೇ ಮತದಾರರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, “ಮಳೆಯಿಂದ ಜನರಿಗೆ ತೊಂದರೆಯಾಗುತ್ತಿದೆ. ಇದಕ್ಕಾಗಿ ನಾನು ಕ್ಷಮೆ ಕೇಳುತ್ತೇನೆ. ಅತ್ಯಂತ ಭ್ರಷ್ಟ ಸರ್ಕಾರ ಕರ್ನಾಟಕದಲ್ಲಿದೆ. ಗುತ್ತಿಗೆದಾರರ ಸಂಘ ಕಮಿಷನ್ ವಿಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿತ್ತು. ಆದರೆ, ಭ್ರಷ್ಟಾಚಾರದ ವಿರುದ್ಧ ಅವರು ಕ್ರಮ ಕೈಗೊಳ್ಳಲಿಲ್ಲ” ಎಂದು ಕಿಡಿಕಾರಿದ್ದಾರೆ.
“ಕರ್ನಾಟಕದಲ್ಲಿ ನಾವು 150 ಸ್ಥಾನ ಗೆಲ್ಲುತ್ತೇವೆ. ಬಿಜೆಪಿ 40 ಸ್ಥಾನ ಗೆಲ್ಲುತ್ತದೆ. ಬಿಜೆಪಿ ಸರ್ಕಾರ ಸರಿಯಾಗಿ 371ಜೆ ಅನುಷ್ಠಾನಕ್ಕೆ ತರಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ಪ್ರತಿ ಗ್ರಾಪಂಗೆ ₹1 ಕೋಟಿ ಅನುದಾನ ನೀಡಲಿದ್ದೇವೆ. ಕಾಂಗ್ರೆಸ್ ಪಕ್ಷ ಘೋಷಿಸಿದ ಎಲ್ಲ ಗ್ಯಾರಂಟಿಗಳನ್ನು ಈಡೇರಿಸುತ್ತೇವೆ. 40% ಸರ್ಕಾರದಿಂದ ಇಂತಹ ಗ್ಯಾರಂಟಿ ಕೊಡಲು ಸಾಧ್ಯವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? 2050ರ ವೇಳೆಗೆ ನೀರಿನ ಕೊರತೆ ಎದುರಿಸಲಿರುವ ಬೆಂಗಳೂರು
“ರಾಜ್ಯದ ಜನರಿಗೆ ನಾಲ್ಕು ಗ್ಯಾರೆಂಟಿಗಳನ್ನು ಕೊಟ್ಟಿದ್ದೇವೆ. ಆದರೆ, ಪ್ರಧಾನಿ ಮೋದಿ ಅವರು ಈ ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದೆನ್ನುತ್ತಾರೆ. ಬಿಜಿಪಿಯ ಶಾಸನದ ಪ್ರಕಾರ ಇಂತಹ ಯೋಜನೆಗಳು ಈಡೇರಿಸಲು ಸಾಧ್ಯವಿಲ್ಲ. ಏಕೆಂದರೆ ಅವರು 40 ಪರ್ಸೆಂಟ್ ಕಳ್ಳವು ಮಾಡುತ್ತಾರೆ. 40 ಪರ್ಸೆಂಟ್ ಕದಿಯುವುದರಿಂದ ಇಂತಹ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಾಗುವುದಿಲ್ಲ” ಎಂದು ವ್ಯಂಗ್ಯವಾಡಿದರು.