ಪರಿಸರ ಸುರಕ್ಷತೆ ಮತ್ತು ಸಾರ್ವಜನಿಕ ಆರೋಗ್ಯವನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಆಸ್ಪತ್ರೆಗಳು, ಚಿಕಿತ್ಸಾಲಯಗಳು ಮತ್ತು ಪ್ರಯೋಗಾಲಯಗಳ ಪ್ರತಿನಿಧಿಗಳೊಂದಿಗೆ ಮೈಸೂರಿನ ಮಹಾನಗರ ಪಾಲಿಕೆಯ ವಲಯ ಕಚೇರಿ -3 ರ ಸಭಾಂಗಣದಲ್ಲಿ ಸಭೆ ನಡೆಸಿ ಜೈವಿಕ – ವೈದ್ಯಕೀಯ ತ್ಯಾಜ್ಯ ನಿರ್ವಹಣಾ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಒತ್ತು ನೀಡುವಂತೆ ಪಾಲಿಕೆ ಆಯುಕ್ತರಾದ ಶೈಖ್ ತನ್ವಿರ್ ಆಸೀಫ್ ತಾಕೀತು ಮಾಡಿದರು.
ಜೈವಿಕ-ವೈದ್ಯಕೀಯ ತ್ಯಾಜ್ಯ ನಿರ್ವಹಣಾ ನಿಯಮಗಳು, 2016 (ಬಿಎಂಡಬ್ಲ್ಯೂ ನಿಯಮಗಳು 2016) ಪರಿಣಾಮಕಾರಿ ಅನುಷ್ಠಾನದ ಕುರಿತು ಚರ್ಚಿಸುವುದು ಸಭೆಯ ಕಾರ್ಯಸೂಚಿಯಾಗಿತ್ತು. ಸಭೆಯಲ್ಲಿ ಸ್ವಚ್ಛತಾ ಕಾರ್ಮಿಕರು ಸಾರ್ವಜನಿಕ ಆರೋಗ್ಯ ಮತ್ತು ಪರಿಸರಕ್ಕೆ ಗಮನಾರ್ಹ ಅಪಾಯವನ್ನುಂಟುಮಾಡುವ ಜೈವಿಕ – ವೈದ್ಯಕೀಯ ತ್ಯಾಜ್ಯವನ್ನು ಪ್ರತಿನಿತ್ಯ ಉತ್ಪತಿಯಾಗುವ ಘನ ತ್ಯಾಜ್ಯದೊಂದಿಗೆ ಮಿಶ್ರಣ ಮಾಡುತ್ತಿರುವ ನಿರಂತರ ಅಭ್ಯಾಸದ ಬಗ್ಗೆ ಆಯುಕ್ತರಾದ ಶೈಖ್ ತನ್ವಿರ್ ಆಸೀಫ್ ಗಂಭೀರ ಕಳವಳ ವ್ಯಕ್ತಪಡಿಸಿದರು.
ಜೈವಿಕ – ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಬೇರ್ಪಡಿಸಲು , ಸಂಗ್ರಹಿಸಲು ಮತ್ತು ವಿಲೇವಾರಿ ಮಾಡಲು ಎಲ್ಲಾ ಆರೋಗ್ಯ ಸಂಸ್ಥೆಗಳು ಬಿಎಂಡಬ್ಲ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಒತ್ತಾಯಿಸಿದರು. ಹಾಗೂ ಇದನ್ನು ಕಟ್ಟುನಿಟ್ಟಾಗಿ ನಿರ್ವಹಿಸಲು ಸೆಪ್ಟೆಂಬರ್.1ರಿಂದ 2025 ರ ವರೆಗೆ ಗಡುವನ್ನು ನಿಗಧಿಪಡಿಸಿದರು. ಈ ನಿಗದಿತ ದಿನಾಂಕದ ನಂತರ ಮಾನದಂಡಗಳನ್ನು ಪಾಲಿಸಲು ವಿಫಲವಾದರೆ ಕಾನೂನಿನ ನಿಬಂಧನೆಗಳ ಪ್ರಕಾರ ಕಠಿಣ ದಂಡ ವಿಧಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಲಭ್ಯವಿರುವ ಅನುದಾನವನ್ನು ನಿಯಮಾನುಸಾರ ಬಳಕೆ ಮಾಡಿ : ಡಾ ರವಿಕುಮಾರ್
ಮೈಸೂರು ಸ್ವಚ್ಛ ಮತ್ತು ಸುರಕ್ಷಿತ ನಗರವಾಗಿ ಉಳಿಯುವುದನ್ನು ಖಚಿತಪಡಿಸಿಕೊಳ್ಳಲು ಎಂಸಿಸಿ ಬದ್ಧವಾಗಿದೆ ಮತ್ತು ಈ ಗುರಿಯನ್ನು ಸಾಧಿಸಲು ಎಲ್ಲಾ ಪಾಲುದಾರರ ಸಹಕಾರ ಅವಶ್ಯವೆಂದು ತಿಳಿಸಿದರು. ಸದರಿ ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳು, ಇತರೆ ವೈದ್ಯಕೀಯ ಸಿಬ್ಬಂದಿಗಳು ಮತ್ತು ಸಂಸ್ಥೆಯವರು ಹಾಗೂ ಪಾಲಿಕೆಯ ಅಧಿಕಾರಿ ಸಿಬ್ಬಂದಿ ವರ್ಗದವರು ಇದ್ದರು.