ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಗಿ ಕೋರಿ ಟಾಟಾ ಪವರ್ ಕಂಪೆನಿ ಸಲ್ಲಿಸಿರುವ ಅರ್ಜಿಯನ್ನು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ(ಕೆಇಆರ್ಸಿ) ತಿರಸ್ಕರಿಸಬೇಕೆಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘವು ಜೂನ್ 18ರಂದು ರಾಜ್ಯದ ಎಲ್ಲ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.
ಮೈಸೂರು ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ರಾಜ್ಯದ 19 ಜಿಲ್ಲೆಗಳಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಸಾರ್ವಜನಿಕ ವಿದ್ಯುತ್ ವಿತರಣಾ ಕಂಪೆನಿಗಳಿಗೆ ಸಮಾನಾಂತರವಾಗಿ ವಿದ್ಯುತ್ ವಿತರಣಾ ಪರವಾನಿಗೆ ಕೋರಿ ಟಾಟಾ ಪವರ್ ಅರ್ಜಿ ಸಲ್ಲಿಸಿರುವುದಾಗಿ ಹೇಳಿದರು. ಒಡಿಶಾದಲ್ಲಿ ಇದೇ ಕಂಪನಿಗೆ ನೀಡಲಾಗಿದ್ದ ಪರವಾನಿಗೆಯಿಂದ ಅಲ್ಲಿನ ವಿದ್ಯುತ್ ವಿತರಣಾ ವ್ಯವಸ್ಥೆ ಹಿನ್ನಡೆ ಅನುಭವಿಸಿದೆ ಎಂದು ಆರೋಪಿಸಿದ ಅವರು, ಕರ್ನಾಟಕದಲ್ಲಿಯೂ ಇದೇ ಮಾದರಿಯ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇರುವುದರಿಂದ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಒತ್ತಾಯಿಸಿದರು.
ಕರ್ನಾಟಕದ ಸಾರ್ವಜನಿಕ ವಿದ್ಯುತ್ ಕ್ಷೇತ್ರವು ಸುಮಾರು 124 ವರ್ಷಗಳ ಇತಿಹಾಸ ಹೊಂದಿದ್ದು, ಉತ್ಪಾದನೆ, ಶೇಖರಣೆ ಮತ್ತು ವಿತರಣೆಯಲ್ಲಿ ಸಮರ್ಥ ವ್ಯವಸ್ಥೆಯನ್ನು ರೂಪಿಸಿಕೊಂಡಿದೆ. ಸಾರ್ವಜನಿಕ ಹಣದಿಂದ ನಿರ್ಮಾಣಗೊಂಡಿರುವ ಮೂಲಸೌಕರ್ಯ ಮತ್ತು ಆಸ್ತಿಗಳ ಮೇಲೆ ಖಾಸಗಿ ಕಂಪನಿಗಳ ಕಣ್ಣಿದೆ ಎಂದು ಅವರು ಹೇಳಿದರು.
ವಿದ್ಯುತ್ ಕ್ಷೇತ್ರದ ಖಾಸಗೀಕರಣಕ್ಕೆ ಸಂಘವು ಆರಂಭದಿಂದಲೂ ವಿರೋಧ ವ್ಯಕ್ತಪಡಿಸುತ್ತಿದ್ದು, ಸಾರ್ವಜನಿಕ ಸೇವೆಯನ್ನು ಖಾಸಗಿ ವಲಯಕ್ಕೆ ಒಪ್ಪಿಸಿದರೆ ಗ್ರಾಮೀಣ ವಿದ್ಯುತೀಕರಣ ಹಾಗೂ ಸಾರ್ವತ್ರಿಕ ವಿದ್ಯುತ್ ಬಳಕೆಗೆ ಉತ್ತೇಜನ ನೀಡುವ ಸರ್ಕಾರದ ಯೋಜನೆಗಳಿಗೆ ಧಕ್ಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ರೈತರ ಕೃಷಿ ಪಂಪ್ಸೆಟ್ಗಳಿಗೆ ದೊರೆಯುತ್ತಿರುವ ವಿದ್ಯುತ್ ಪೂರೈಕೆ, ಬಡ ಕುಟುಂಬಗಳಿಗೆ ನೀಡಲಾಗುತ್ತಿರುವ ಭಾಗ್ಯಜ್ಯೋತಿ ಮತ್ತು ಕುಟೀರಜ್ಯೋತಿ ಯೋಜನೆಗಳು, 200 ಯೂನಿಟ್ ಉಚಿತ ಗೃಹ ವಿದ್ಯುತ್ ಹಾಗೂ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ನೀಡಲಾಗುತ್ತಿರುವ ವಿದ್ಯುತ್ ರಿಯಾಯಿತಿಗಳ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇದೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ರೈತರು, ಉದ್ಯಮಿಗಳು ಹಾಗೂ ವಿದ್ಯುತ್ ಗ್ರಾಹಕರು ಜೂ.23ರೊಳಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬೇಕು ಎಂದು ಕರೆ ನೀಡಿದರು. ರಾಜ್ಯದ ವಿದ್ಯುತ್ ಇಲಾಖೆಯ ಕಚೇರಿಗಳ ಮೂಲಕವೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ಸಾರ್ವಜನಿಕರು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಜೂ.18ರಂದು ನಡೆಯುವ ಪ್ರತಿಭಟನೆ ವೇಳೆ ಜಿಲ್ಲಾಧಿಕಾರಿಗಳು ಮತ್ತು ತಹಸೀಲ್ದಾರರ ಮೂಲಕ ಕೆಇಆರ್ಸಿಗೆ ಆಕ್ಷೇಪಣೆ ಸಲ್ಲಿಸಲಾಗುವುದು. ಅಲ್ಲದೆ ಜೂ.20ರಂದು ಸಂಘದ 100ಕ್ಕೂ ಹೆಚ್ಚು ಮುಖಂಡರ ನಿಯೋಗ ಬೆಂಗಳೂರಿನಲ್ಲಿರುವ ವಿದ್ಯುತ್ ನಿಯಂತ್ರಣ ಆಯೋಗದ ಕಚೇರಿಗೆ ತೆರಳಿ ಲಿಖಿತ ಆಕ್ಷೇಪಣೆ ಸಲ್ಲಿಸಲಿದೆ ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ?ಮೈಸೂರು | ಗಂಗೋತ್ರಿ ಬಡಾವಣೆಯಲ್ಲಿ ಕಲುಷಿತ ನೀರು ಸರಬರಾಜು: ಶಾಶ್ವತ ಪರಿಹಾರಕ್ಕೆ ನಿವಾಸಿಗಳ ಆಗ್ರಹ
ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ನೇತ್ರಾವತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ಮರಂಕಯ್ಯ ಹಾಗೂ ಕಾರ್ಯದರ್ಶಿ ಮಂಡಕಳ್ಳಿ ಮಹೇಶ್ ಉಪಸ್ಥಿತರಿದ್ದರು.




