ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು ಹಾಗೂ ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿ ಬುಧವಾರ ಜಯ ಕರ್ನಾಟಕ ಸಂಘಟನೆಯ ವಡಗೇರಾ ತಾಲೂಕು ಘಟಕದ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಸಂಘಟನೆಯ ಗೌರವಾಧ್ಯಕ್ಷ ಮಲ್ಲು ಹಲಗಿ ಮಾತನಾಡಿ, ‘ಮುಂಗಾರು ಮಳೆ ಕೈಕೊಟ್ಟ ಪರಿಣಾಮ ತಾಲೂಕಿನಾದ್ಯಂತ ರೈತರು ಬೆಳೆದಿರುವ ಬೆಳೆಗಳು ಒಣಗಿ ಹೋಗಿವೆ. ಸಾಲ ಮಾಡಿ ಬೀಜ, ರಸಗೊಬ್ಬರ ಖರೀದಿಸಿ ಬಿತ್ತನೆ ಮಾಡಿದ್ದ ರೈತರು ಇದೀಗ ಮಳೆಗಾಗಿ ಮುಗಿಲು ನೋಡುವಂತಾಗಿದೆ’ ಎಂದು ಹೇಳಿದರು.
‘ಕಳೆದ ವರ್ಷ ಅತಿಯಾದ ಮಳೆಯಿಂದ ಬೆಳೆ ಹಾನಿಯಾಗಿತ್ತು. ಈ ಬಾರಿ ಮಳೆ ಕೊರತೆಯಿಂದ ಬೆಳೆ ಕೈಕೊಟ್ಟಿದೆ. ಸತತ ಎರಡು ವರ್ಷಗಳಿಂದ ರೈತರು ಸಂಕಷ್ಟದಲ್ಲಿದ್ದು, ಜಾನುವಾರುಗಳಿಗೂ ಮೇವಿನ ಕೊರತೆ ಎದುರಾಗಿದೆ. ಸರ್ಕಾರ ತಕ್ಷಣ ರೈತರ ನೆರವಿಗೆ ಧಾವಿಸಬೇಕು’ ಎಂದು ಒತ್ತಾಯಿಸಿದರು.
‘ಪ್ರತಿ ಎಕರೆಗೆ ₹50 ಸಾವಿರ ಬೆಳೆ ಪರಿಹಾರ ನೀಡಬೇಕು. ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾನುವಾರುಗಳಿಗಾಗಿ ಮೇವು ಬ್ಯಾಂಕ್ ಸ್ಥಾಪಿಸಬೇಕು’ ಎಂದು ಆಗ್ರಹಿಸಿದರು.
‘ರೈತರ ಸಮಸ್ಯೆಗಳಿಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ರೈತರನ್ನು ಸಂಘಟಿಸಿ ಉಗ್ರ ಹೋರಾಟ ನಡೆಸಲಾಗುವುದು’ ಎಂದು ಮಲ್ಲು ಹಲಗಿ ಎಚ್ಚರಿಸಿದರು.
ಇದನ್ನು ಓದಿದ್ದೀರಾ? ಕಲಬುರಗಿ | ಪರಿಸರ ರಕ್ಷಿಸಿದರೆ ಮಾನವ ಸಮಾಜದ ರಕ್ಷಣೆ: ಮಲ್ಲಿಕಾರ್ಜುನ್ ಎಂಎಸ್
ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಭೀಮಣ್ಣ ಬೂದಿಹಾಳ, ಜಿಲ್ಲಾ ಕಾರ್ಯದರ್ಶಿ ಶಂಕರಗೌಡ ಕುರಕುಂದಿ, ಉಪಾಧ್ಯಕ್ಷ ಮುತ್ತಣ್ಣ, ನಿಂಗಣ್ಣ ಬೀಳಾರ್, ವೆಂಕಟ್ ರೋಟ್ನಡಗಿ, ದೇವಪ್ಪ ಇಟಗಿ ವಡಗೇರಾ, ಮರೆಪ್ಪ ರಾಮಜಗಲಿ, ಹಣಮಂತ ಹಂಚಿನಾಳ, ಜಲಾಲ್ ಸಾಬ್ ಕೋನಳ್ಳಿ, ಬಸಪ್ಪ ಮಾಲಹಳ್ಳಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದರು.




