- ಐದು ಗ್ಯಾರಂಟಿಗಳ ಈಡೇರಿಕೆಗೆ 50 ಸಾವಿರ ಕೋಟಿ ರೂ. ವೆಚ್ಚ
- ಇಂದಿರಾ ಕ್ಯಾಂಟೀನ್ಗಳನ್ನು ರೀ ಓಪನ್ ಮಾಡಲು ತೀರ್ಮಾನ
ಚುನಾವಣೆ ವೇಳೆ ಕರ್ನಾಟಕದ ಜನರಿಗೆ ತಾನು ನೀಡಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಇಂದೇ ಜಾರಿಗೊಳಿಸುವ ಆದೇಶ ಹೊರಡಿಸಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆದುಕೊಂಡಿದೆ.
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿಗಳಿಗೆ ಇಂದು ನಡೆದ ಸಚಿವ ಸಂಪುಟ ಸಭೆ ತಾತ್ವಿಕ ಒಪ್ಪಿಗೆ ನೀಡಿತ್ತು. ಇದಾದ ಬಳಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇದರ ಸಾಧಕ ಭಾದಕ ಪರಿಶೀಲಿಸಿ ಮುಂದಿನ ಕ್ಯಾಬಿನೆಟ್ ಸಭೆ ಬಳಿಕ ಇವುಗಳ ಸ್ಪಷ್ಟ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದರು.
ಆದರೆ ಆ ಸಭೆಗೂ ಮೊದಲೇ ತಮ್ಮ ನಿರ್ಧಾರ ಪರಾಮರ್ಶಿಸಿರುವ ಸಿಎಂ ಘೋಷಿತ ಯೋಜನೆಗಳನ್ನು ಇಂದಿನಿಂದಲೇ ಜಾರಿ ಮಾಡಿ ಆದೇಶಿಸಿದ್ದಾರೆ.
ಈ ಬೆಳವಣಿಗೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ನೇತೃತ್ವದಲ್ಲಿ ನಡೆದ ಪ್ರಥಮ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದರು.
ಇಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಅಂದಾಜು 50 ಸಾವಿರ ಕೋಟಿ ವೆಚ್ಚವಾಗಲಿದೆ. ಆದರೂ ಆರ್ಥಿಕ ದಿವಾಳಿಯಾಗದಂತೆ 5 ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ. ಕಟ್ಟುನಿಟ್ಟಾಗಿ ತೆರಿಗೆಯನ್ನು ವಸೂಲಿ ಮಾಡಿ ಗ್ಯಾರಂಟಿ ಜಾರಿ ಮಾಡಲಾಗುವುದು. ಜತೆಗೆ ರಾಜ್ಯದಲ್ಲಿರುವ ಇಂದಿರಾ ಕ್ಯಾಂಟೀನ್ಗಳನ್ನು ರೀ ಓಪನ್ ಮಾಡಲಾಗುವುದು” ಎಂದರು.
“ಗೃಹ ಜ್ಯೋತಿ ಯೋಜನೆ ಅಡಿ 200 ಯೂನಿಟ್ ಎಲ್ಲ ಮನೆಗಳಿಗೆ ಉಚಿತ ವಿದ್ಯುತ್ (ತಿಂಗಳಿಗೆ 1,200 ಕೋಟಿ ವೆಚ್ಚ ಸಾಧ್ಯತೆ), ಗೃಹ ಲಕ್ಷ್ಮೀ ಯೋಜನೆ ಅಡಿ ಪ್ರತಿ ಮನೆಯ ಒಡತಿಗೆ ತಿಂಗಳಿಗೆ 2,000 ಬ್ಯಾಂಕ್ ಖಾತೆಗೆ ಹಾಕಲು ತೀರ್ಮಾನ. ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ನೀಡಲು ತೀರ್ಮಾನ. ನಿರುದ್ಯೋಗಿ ಪದವೀಧರರಿಗೆ ಈ ವರ್ಷ ನಿರೊದ್ಯೋಗಿಗಳಾಗಿದ್ದವರಿಗೆ ಎರಡು ವರ್ಷದ ಅವಧಿಗೆ ಮಾಸಿಕ 3,000 ರೂ (ಮಧ್ಯದಲ್ಲಿ ಕೆಲಸ ಸಿಕ್ಕರೆ ಅನುದಾನ ಕಡಿತ), ಹಾಗೆಯೆ ಡಿಪ್ಲೋಮಾ ಮುಗಿಸಿ ನಿರುದ್ಯೋಗಿಗಳಾಗಿದ್ದವರಿಗೆ 1,500 ರೂ ತಿಂಗಳಿಗೆ ನೀಡಲು ತೀರ್ಮಾನ ಮಾಡಲಾಗಿದೆ. ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಮಾಡಲು ತೀರ್ಮಾನ ಮಾಡಲಾಗಿದೆ. (ಕರ್ನಾಟಕದ ಮಹಿಳೆಯರಾಗಿರಬೇಕು)” ಎಂದು ಗ್ಯಾರಂಟಿಗಳ ಬಗ್ಗೆ ವಿವರಿಸಿದರು.
“ಐದು ಗ್ಯಾರಂಟಿಗಳಿಗೆ ಅಂದಾಜು 50 ಸಾವಿರ ಕೋಟಿ ವೆಚ್ಚ ಆಗಬಹುದು, ಕೇಂದ್ರದಿಂದ ಈ ವರ್ಷ 50 ಸಾವಿರ ಕೋಟಿ ರೂ. ಬರುತ್ತದೆ. ಕರ್ನಾಟಕದಿಂದ 4 ಲಕ್ಷ ಕೋಟಿ ರೂ. ತೆರಿಗೆ ಕಟ್ಟುತ್ತೇವೆ. ಆದರೆ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಸಹಾಯಧನ ಬಂದಿಲ್ಲ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮಗೆ ಅನ್ಯಾಯವಾಗಿದೆ. ನ್ಯಾಯಯುತವಾಗಿ ಕರ್ನಾಟಕಕ್ಕೆ ಸಿಗಬೇಕಿದ್ದ 5,495 ಕೋಟಿ ರೂ.ವನ್ನು ಬಿಜೆಪಿ ರಾಜ್ಯ ಸರ್ಕಾರ ಕೇಳಿಲ್ಲ. ರಾಜ್ಯದ ಸಂಸದರು ಕೇಳಿಲ್ಲ. ಕೇಂದ್ರ ಸರ್ಕಾರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ” ಎಂದು ಕಿಡಿಕಾರಿದರು.
ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್ ಸರ್ಕಾರ | ಪ್ರಮಾಣವಚನ ಸ್ವೀಕರಿಸಿದವರು ಯಾರ ಹೆಸರಿನಲ್ಲಿ ಪ್ರಮಾಣ ಮಾಡಿದರು?
“ಪ್ರಣಾಳಿಕೆಯಲ್ಲಿ ಜನರಿಗೆ ಅನೇಕ ಭರವಸೆಗಳನ್ನು ಕೊಟ್ಟಿದ್ದೆವು. ಇದು ಕೇವಲ ಒಂದು ವರ್ಷದಲ್ಲಿ ಈಡೇರಿಸುವ ಭರವಸೆ ಅಲ್ಲ. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತದೆ. ಕಳೆದ ಬಾರಿ ನಾವು 158 ಭರವಸೆಗಳನ್ನು ಈಡೇರಿಸಿದ್ದೆವು. ಹೆಚ್ಚುವರಿಯಾಗಿ 30 ಕಾರ್ಯಕ್ರಮಗಳನ್ನು ಜಾರಿ ಮಾಡಿದ್ದೆವು” ಎಂದರು.
“ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಈ ದೇಶದ ಸಾಲ 53 ಲಕ್ಷದ 11 ಸಾವಿರ ಕೋಟಿ ಇತ್ತು. ಮೋದಿ ಅಧಿಕಾರಕ್ಕೆ ಬಂದ ನಂತರ 1,55 ಲಕ್ಷ ಕೋಟಿ ರೂ. ಆಗಿದೆ ಎಂದು” ಆರೋಪಿಸಿದರು.