ರಾಷ್ಟ್ರ ವಿರೋಧಿ ಹೇಳಿಕೆ ನೀಡಿರುವ ಶಾಸಕ ಜಿ ಎಸ್ ಪಾಟೀಲ ಅವರ ವಿರುದ್ದ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರಡಗಿ ಅವರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
“ಸಾಂವಿಧಾನಿಕ ಸಂಸ್ಥೆ ಮತ್ತು ವ್ಯಕ್ತಿಗಳ ವಿರುದ್ಧ ಅಪಪ್ರಚಾರ ಹಾಗೂ ಕಾನೂನು ಸುವ್ಯವಸ್ಥೆ ವಿಫಲಗೊಳಿಸುವ ಮೂಲಕ ರಾಜ್ಯದಲ್ಲಿ ಆಡಳಿತ ನಡೆಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಮುಡಾ ಹಗರಣದ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ ಬಳಿಕ ರಾಜ್ಯಾದ್ಯಂತ ಕಾಂಗ್ರೆಸ್ ನಾಯಕರು ಪ್ರತಿಭಟನೆ ನೆಪದಲ್ಲಿ ಪ್ರಧಾನಿ, ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಾಕಾರಿ ಮಾತುಗಳ ಮೂಲಕ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದ್ದಾರೆ” ಎಂದು ಹರಿಹಾಯ್ದರು.
“ಅನುಮತಿ ನೀಡಿರುವುದನ್ನು ವಿರೋಧಿಸಿ ಇತ್ತೀಚೆಗೆ ಗಜೇಂದ್ರಗಡದಲ್ಲಿ ಅಹಿಂದ್ ಸಮುದಾಯಗಳು ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ರೋಣ ಶಾಸಕ ಜಿ ಎಸ್ ಪಾಟೀಲ ಅವರು, ‘ಸಿದ್ದರಾಮಯ್ಯ ಅವರ ಅಧಿಕಾರ ಮೊಟಕುಗೊಳಿಸಲು ಮುಂದಾದರೆ ಬಾಂಗ್ಲಾ ದೇಶದಲ್ಲಿ ಪ್ರಧಾನಿ ಮನೆಗೆ ನುಗ್ಗಿದಂತೆ ನಮ್ಮಲ್ಲೂ ಜನರು ಪ್ರಧಾನಿ ಮೋದಿ ಅವರ ಮನೆಗೆ ನುಗ್ಗುವ ದಿನಗಳು ದೂರವಿಲ್ಲ’ವೆಂದು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ. ಇದು ಅಕ್ಷಮ್ಯ” ಎಂದು ಹರಿಹಾಯ್ದರು.
“ಜಿ ಎಸ್ ಪಾಟೀಲರು ಪ್ರಚೋದನಾತ್ಮಕ ಹೇಳಿಕೆ ನೀಡಿರುವುದನ್ನು ಗಮನಿಸಿದರೆ ಸರ್ಕಾರವೇ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ ಮಾಡಲು ಬಯಸಿದೆ ಎಂಬುದು ಸಹಜವಾಗಿ ಕಂಡು ಬರುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.
“ರಾಷ್ಟ್ರ ವಿರೋಧಿ ಹೇಳಿಕೆ ನೀಡಿರುವ ಜಿ ಎಸ್ ಪಾಟೀಲ ಅವರ ವಿರುದ್ದ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಜ್ಯದಲ್ಲಿ ಕೂಡಲೇ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು” ಎಂದು ಮನವಿ ಮಾಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಮನವಿ ಸ್ವೀಕರಿಸಿದರು.
ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ನಮ್ಮ ಗ್ರಾಮಗಳನ್ನು ಕಸ್ತೂರಿರಂಗನ್ ವರದಿಯಿಂದ ಕೈಬಿಡಬೇಕು: ರೈತ, ಕಾರ್ಮಿಕ ಹಿತರಕ್ಷಣಾ ಸಮಿತಿ
ವಿಧಾನ ಪರಿಷತ್ ಸದಸ್ಯ ಎಸ್ ವಿ ಸಂಕನೂರ, ಮುಖಂಡ ಜಗನ್ನಾಥಸಾ ಭಾಂಡಗೆ, ಎಂ ಎಸ್ ಕರಿಗೌಡ್ರು, ರವಿ ದಂಡಿನ, ನಗರಸಭೆ ಸದಸ್ಯರಾದ ಪ್ರಕಾಶ ಅಂಗಡಿ, ಮುತ್ತು ಮುಶಿಗೇರಿ, ಮಹಾಂತೇಶ ನಲವಡಿ, ಮಾಧೂಸಾ ಮೇರವಾಡೆ, ಅನಿಲ ಅಬ್ಬಿಗೇರಿ, ಗದಗ ಶಹರ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವಿಜಯಲಕ್ಷ್ಮಿ ಮಾನ್ವಿ ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಇದ್ದರು.