ಮಕ್ಕಳನ್ನು ಪ್ರೋತ್ಸಾಹಿಸಿ ಅವರ ಭವಿಷ್ಯ ನಿರ್ಮಾಣಕ್ಕೆ ಮಕ್ಕಳ ಹಬ್ಬದಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಹೇಳಿದರು.
ಗದಗ ನಗರದ ಕನಕ ಭವನದಲ್ಲಿ ಶನಿವಾರ (ಮಾ.2) ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನವೆಂಬರ್ 14ರಂದು ಮಕ್ಕಳ ದಿನಾಚರಣೆಯನ್ನು ಆಚರಿಸುತ್ತಾ ಬಂದಿದ್ದೇವೆ. ಅದೇ ರೀತಿ ಮಾರ್ಚ 2ರಂದು ಮಕ್ಕಳ ಹಬ್ಬವನ್ನು ಆಚರಿಸುತ್ತಿದ್ದೇವೆ. ನಮ್ಮ ದೇಶವು ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು ಆ ತೋಟದಲ್ಲಿ ಅರಳುತ್ತಿರುವ ಹೂಗಳಾದ ಮಕ್ಕಳೆಲ್ಲರಿಗೂ ಉಜ್ವಲ ಭವಿಷ್ಯ ಕಾದಿದೆ. ನಮ್ಮ ದೇಶದ ಮಾನವ ಸಂಪನ್ಮೂಲವು ಅತೀ ಮುಖ್ಯವಾಗಿದೆ. ಚಂದ್ರಯಾನಕ್ಕೆ ಪ್ರಯಾಣದ ವಿಚಾರ ಮಾಡುವ ಅದ್ಭುತ ಬೆಳವಣಿಗೆಯೂ ಸಹ ಸಂತಸದ ವಿಷಯವಾಗಿದೆ. ನಮ್ಮ ನಾಡನ್ನು ಶ್ರೀಮಂತ, ಸಂಪದ್ಭರಿತ, ಪ್ರಜ್ಞಾವಂತ, ಬುದ್ಧಿವಂತ ನಾಡನ್ನಾಗಿಸುವಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದರು.
ಮಕ್ಕಳಿಗಾಗಿ ಪುಟಾಣಿ ರೈಲು
ಮಕ್ಕಳಲ್ಲಿ ಆಟದ ವಾತಾವರಣ ನಿರ್ಮಿಸಿ ಸಂತಸಪಡಿಸಲು ಗದಗನಲ್ಲಿನ ಸಾಲುಮರದ ತಿಮ್ಮಕ್ಕನ ಉದ್ಯಾನವನದಲ್ಲಿ ಮಕ್ಕಳಿಗಾಗಿ ಪುಟಾಣಿ ರೈಲನ್ನು ಓಡಿಸಲಾಗುವುದು ಎಂದು ಸಚಿವ ಎಚ್.ಕೆ.ಪಾಟೀಲ ತಿಳಿಸಿದರು.
ಕಾರ್ಯಕ್ರಮದಲ್ಲಿ ಗಣ್ಯರಾದ ಸಿದ್ದು ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎ. ರಡ್ಡೇರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕರಿ ಶ್ರೀಮತಿ ರಾಧಾ ಮಣ್ಣೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಡಾ.ಕಮಲವ್ವ ಬೈಲೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ರಫೀಕಾ ಹಳ್ಳೂರ, ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು, ಶಾಲಾ ಶಿಕ್ಷಕರು, ವಿವಿಧ ಸ್ಪರ್ಧೆಯ ನಿರ್ಣಾಯಕರುಗಳು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಹಾಜರಿದ್ದರು.
ಡಾ. ವೆಂಕಟೇಶ ಅಲ್ಕೋಡ ನಾಡಗೀತೆ ಪ್ರಸ್ತುತಪಡಿಸಿದರು. ಎಸ್.ಎಸ್. ಗೌಡರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಮಕ್ಕಳಿಗಾಗಿ ಜಾನಪದ ನೃತ್ಯ, ಕವನ ಬರೆಯುವ ಸ್ಪರ್ಧೆ, ಗಾಯನ, ಹಗ್ಗ ಜಗ್ಗಾಟ, ಲಗೋರಿ, ಚಿತ್ರಕಲೆ, ಕಥೆ ಬರೆಯುವ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ಸ್ಪರ್ಧೆಗಳಲ್ಲಿ ಮಕ್ಕಳು ತಮ್ಮ ಕಲಾ ಪ್ರತಿಭೆ, ಜಾಣ್ಮೆಯನ್ನು ಪ್ರದರ್ಶಿಸಿದರು.