ಗದಗ ಜಿಲ್ಲೆಯಲ್ಲಿ ಗಣಿಗಾರಿಕೆಯನ್ನು ಸರ್ಕಾರದ ನಿಯಮಾನುಸಾರ ಸರಿಯಾಗಿ ನಿರ್ವಹಿಸಬೇಕು. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿ ನಿರಂತರವಾಗಿ ನಿಯಮಗಳನ್ನು ಉಲ್ಲಂಘಿಸುವರನ್ನು ಗುರುತಿಸಿ ಗಡಿಪಾರು ಶಿಕ್ಷೆಗೆ ಒಳಪಡಿಸಲು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರದಂದು ಜಿಲ್ಲಾ ಟಾಸ್ಕ್ಫೋರ್ಸ(ಗಣಿ) ಸಮಿತಿ, ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಹಾಗೂ ಕರ್ನಾಟಕ ಕಲ್ಲುಪುಡಿ ಮಾಡುವ ಘಟಕಗಳ ನಿಯಂತ್ರಣ ಮತ್ತು ಪರವಾನಗಿ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ತಾಲೂಕು ತಹಶೀಲ್ದಾರ್ಗಳು ತಮಗಿರುವ ದಂಡಾಧಿಕಾರಿ ಅಧಿಕಾರವನ್ನು ಬಳಸಿಕೊಂಡು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದವರನ್ನು ಶಿಕ್ಷೆಗೆ ಗುರಿಪಡಿಸಬೇಕು. ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುವವರಿಗೆ ಅಧಿಕ ಪ್ರಮಾಣದ ದಂಡ ವಿಧಿಸಲು ಅವಕಾಶವಿದ್ದು, ಅದನ್ನು ಚಲಾಯಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡುವವರನ್ನು ಸರಿದಾರಿಗೆ ತರಬೇಕು” ಎಂದು ಸೂಚನೆ ನೀಡಿದರು.
“ದಂಡ ವಿಧಿಸಿದ ನಂತರ ಅದನ್ನು ಸಂಬಂಧಿಸಿದ ವ್ಯಕ್ತಿಯ ಖಾತೆಯಲ್ಲಿ ಭೋಜಾ ದಾಖಲಿಸಬೇಕು. ಪದೇಪದೆ ತಪ್ಪೆಸಗಿದಲ್ಲಿ ಅವರನ್ನು ಗಡಿಪಾರಿಗೆ ಶಿಕ್ಷೆಗೆ ಒಳಪಡಿಸಲು ಶಿಸ್ತು ಕ್ರಮ ಕೈಗೊಳ್ಳಲು ಮುಂದಾಗಬೇಕು” ಎಂದು ಸೂಚಿಸಿದರು.
“ಕಂದಾಯ, ಅರಣ್ಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಸಾರಿಗೆ ಇಲಾಖೆ, ಸಣ್ಣ ನೀರಾವರಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ತಮಗಿರುವ ಅಧಿಕಾರವನ್ನು ಚಲಾಯಿಸುವ ಮೂಲಕ ಅಕ್ರಮ ಮರಳು, ಕಲ್ಲು ಗಣಿಗಾರಿಕೆ ತಡೆಗೆ ಮುಂದಾಗಬೇಕು. ಈ ಮೂಲಕ ಸಾರ್ವಜನಿಕ ಆಸ್ತಿ ಸಂರಕ್ಷಣೆ ಮಾಡಬೇಕು ಹಾಗೂ ಸಾರ್ವಜನಿಕರ ವಿಶ್ವಾಸಾರ್ಹತೆ ಉಳಿಸಿಕೊಳ್ಳಬೇಕು” ಎಂದು ತಿಳಿಸಿದರು.
“ಅಕ್ರಮ ಗಣಿಗಾರಿಕೆ ಕುರಿತು ಮಾಧ್ಯಮದಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಂಬಂಧಿತ ಇಲಾಖೆಯ ಅಧಿಕಾರಿಗಳು ನೈಜತೆ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ವಹಿಸಬೇಕು” ಎಂದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ ಎಸ್ ನೇಮಗೌಡ ಮಾತನಾಡಿ, “ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದವರ ಮೇಲೆ ನಿರಂತರ ನಿಗಾ ವಹಿಸಬೇಕು. ವಾಹನಗಳ ತಪಾಸಣೆಯನ್ನು ನಿಯಮಿತವಾಗಿ ಸಾರಿಗೆ ಅಧಿಕಾರಿಗಳು ಮಾಡಬೇಕು. ಓವರ್ಲೋಡ್ ವಾಹನಗಳಿಗೆ ನಿಯಮಾನುಸಾರ ದಂಡ ವಿಧಿಸುವ ಮೂಲಕ ಪ್ರಕರಣ ದಾಖಲಿಸಬೇಕು” ಎಂದು ಸೂಚಿಸಿದರು.
“ಇಲಾಖಾಧಿಕಾರಿಗಳು ಜಂಟಿ ಸಮೀಕ್ಷೆ, ಸ್ಥಳ ಪರಿಶೀಲನೆಗೆ ತೆರಳುವ ಸಂದರ್ಭದಲ್ಲಿ ಪೊಲೀಸ್ ಇಲಾಖಾಧಿಕಾರಿಗಳ ಸಹಕಾರದೊಂದಿಗೆ ಕಾರ್ಯನಿರ್ವಹಿಸಬೇಕು” ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಭರತ್ ಎಸ್ ಮಾತನಾಡಿ, “ಸರ್ಕಾರದ ಮಾರ್ಗಸೂಚಿಗಳನ್ವಯ ಗಣಿಗಾರಿಕೆ ಮಾಡುವವರಿಗೆ ಅವಕಾಶ ನೀಡಬೇಕು. ಮಾರ್ಗಸೂಚಿ ಉಲ್ಲಂಘಿಸಿದಲ್ಲಿ ಶಿಸ್ತು ಕ್ರಮ ತಪ್ಪಿದ್ದಲ್ಲ ಎಂಬುದನ್ನು ಮನವರಿಕೆ ಮಾಡಿಸುವ ಕಾರ್ಯವನ್ನು ಇಲಾಖಾಧಿಕಾರಿಗಳು ಮಾಡಬೇಕು” ಎಂದರು.
ಸಭೆಯಲ್ಲಿ ಹೊಳೆ, ನದಿಗಳ ಪಾತ್ರದಲ್ಲಿನ ಗುರುತಿಸಿರುವ ಮರಳು ಬ್ಲಾಕ್ಗಳನ್ನು ವಿಲೇವಾರಿ, ಕಪ್ಪತಗುಡ್ಡ ವನ್ಯಜೀವಿ ಧಾಮದಿಂದ ಒಂದು ಕಿಮೀ ವ್ಯಾಪ್ತಿಯೊಳಗೆ ಬರುವ ಕ್ರಶರ್ ಘಟಕಗಳ ಪರವಾನಗಿಗಳನ್ನು ಸ್ಥಗಿತಗೊಳಿಸುವುದು, ಕ್ರಶರ್ ಘಟಕಗಳ ಹೊಸದಾಗಿ ಮಂಜೂರು ಮಾಡುವುದು, ಕಪ್ಪತಗುಡ್ಡ ವನ್ಯಜೀವಿ ಧಾಮದಿಂದ ಹತ್ತು ಕಿಮೀ ವ್ಯಾಪ್ತಿಯಲ್ಲಿರುವ ಕಟ್ಟಡ ಕಲ್ಲು, ಮರಳು, ಮಣ್ಣು ಗಣಿಗಾರಿಕೆ ಮತ್ತು ಕ್ರಶರ್ ಘಟಕಗಳ ಚಟುವಟಿಕೆಗಳನ್ನು ನಿಷೇಧಿಸುವುದು ಹಾಗೂ ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯೊಳಗೆ ಕಲ್ಲುಗಣಿ ಪರವಾನಿಗೆಗೆ ಹೊಸ ಅರ್ಜಿ ಕುರಿತಂತೆ ಚರ್ಚಿಸಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳ ನೇಮಕಾತಿಗೆ ಆಗ್ರಹ; ಕಾಲೇಜು ಶಿಕ್ಷಣ ಇಲಾಖೆಯ ಗೇಟ್ ಬಂದ್!
ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ ವೆಂಕಟೇಶ ನಾಯ್ಕ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಚಿದಂಬರಂ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರರು ಇದ್ದರು.
