ಬಹುತೇಕ ಗ್ರಾಮೀಣ ಪ್ರದೇಶದ ಜನರಿಗೆ ತಮ್ಮ ಆರೋಗ್ಯದ ಕುರಿತು ಕಾಳಜಿ ಇರುವುದಿಲ್ಲ. ಹಾಗಾಗಿ ತಾವು ಆರೋಗ್ಯವಾಗಿರಲು ಸುತ್ತಮುತ್ತ ಇರುವ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಮುತ್ತುರಾಯರೆಡ್ಡಿ ಸಲಹೆ ನೀಡಿದರು.
ಗದಗ ಜಿಲ್ಲೆ ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ, ಆರೋಗ್ಯ ಅಮೃತ ಅಭಿಯಾನದಡಿ ಹಮ್ಮಿಕೊಂಡಿದ್ದ ಮನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಶರಾವತಿ ಹಿರೇಮಠ ಮಾತನಾಡಿ, “ಗ್ರಾಮೀಣ ಭಾಗದ ಜನರಲ್ಲಿ ಆರೋಗ್ಯದ ಕೊರತೆ ಕಾಣುತ್ತದೆ. ಹಾಗಾಗಿ ಎಲ್ಲರೂ ಕೂಡ ಗ್ರಾಮದ ಸ್ವಚ್ಛತೆಯ ಕಡೆಗೆ ಗಮನಹರಿಸಬೇಕು. ಸ್ವಚ್ಛತೆ ಕಾಯ್ದುಕೊಳ್ಳದಿದ್ದರೆ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಜನರು ಪೌಷ್ಠಿಕ ಆಹಾರ, ಶುಚಿ ರುಚಿಯಾದ ಆಹಾರ ಸೇವನೆಯಿಂದ ಆರೋಗ್ಯ ಕಾಯ್ದುಕೊಳ್ಳಬೇಕು” ಎಂದು ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಬದು ನಿರ್ಮಾಣ ಕಾಮಗಾರಿ ಸ್ಥಳದಲ್ಲಿ 420 ಮಂದಿ ಮನರೇಗಾ ಕೂಲಿಕಾರರಿಗೆ ಅಸಾಂಕ್ರಾಮಿಕ ರೋಗಗಳ ತಪಾಸಣಾ ಶಿಬಿರ ನಡೆಸಲಾಯಿತು. ಅಧಿಕ ರಕ್ತದೊತ್ತಡ ಮತ್ತು ಮಧುಮೇಹ ಪರೀಕ್ಷೆ ಮಾಡಲಾಯಿತು. ಜೊತೆಗೆ ಅಧಿಕ ರಕ್ತದೊತ್ತಡ, ಮಧುಮೇಹ, ಕ್ಷಯರೋಗ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಮನರೇಗಾ ಸಮಸ್ಯೆ ಪರಿಹಾರಕ್ಕೆ ಕಾರ್ಮಿಕರ ಆಗ್ರಹ
ಈ ಅಭಿಯಾಣದಲ್ಲಿ ಚಿಕ್ಕನರಗುಂದ ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಣ ಕಂಬಳಿ, ಗ್ರಾಮ ಪಂಚಾಯಿತಿ ಸರ್ವ ಸದಸ್ಯರು, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕುಮಾರಿ ಶೈನಾಜ್ ಮುಜಾವರ, ಗ್ರಾಮ ಪಂಚಾಯಿತಿ ಆರೋಗ್ಯ ಅಮೃತ ಅಭಿಯಾನದ ತಾಲೂಕು ಸಂಯೋಜಕ ಅಜಯ್ ನೀಲವಾಣಿ, ಚಿಕ್ಕನರಗುಂದ, ಸಂತೋಷ ಅಂಬಿಗೇರ. ಆಶಾ ಕಾರ್ಯಕರ್ತೆಯರು ಶೋಭಾ ಬೂದಿಹಾಳ, ಸುಮಿತ್ರಾ ಮರಿಯಣ್ಣವರ, ದ್ರಾಕ್ಷಾಯಿಣಿ ಹಿರೇಮಠ, ಶ್ರೀದೇವಿ ಅಂತಕ್ಕನವರ, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ನರೇಗಾ ಸಿಬ್ಬಂದಿ ವರ್ಗ ಇದ್ದರು.