ಗಜೇಂದ್ರಗಡ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಬರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ತಾಲೂಕು ಸಮಿತಿಯಿಂದ ಶಾಖಾ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ಗದಗ ಜಿಲ್ಲೆಯ ಗಜೇಂದ್ರಗಡ ನಗರದ ಕೆಎಸ್ಆರ್ಟಿಸಿ ಡಿಪೋ ಎದುರು ಪ್ರತಿಭಟನೆ ನಡೆಸಿದ ಎಸ್ಎಫ್ಐ ಕಾರ್ಯಕರ್ತರು, “ನಗರದ ಹೊರಭಾಗದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಮಹಾವಿದ್ಯಾಲಯಕ್ಕೆ ಸುತ್ತಮುತ್ತ ಹಳ್ಳಿಗಳಿಂದ ನೂರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಬರುತ್ತಾರೆ. ಆದರೆ ಇಲ್ಲಿ ಬಸ್ ವ್ಯವಸ್ಥೆ ಇಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆ ಉಂಟಾಗುತ್ತಿದ್ದು, ಕೂಡಲೇ ಬಸ್ ವ್ಯವಸ್ಥೆ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

ಎಸ್ಎಫ್ಐ ಜಿಲ್ಲಾ ಉಪಾಧ್ಯಕ್ಷ ಚಂದ್ರು ರಾಠೋಡ ಮಾತನಾಡಿ, “ಗಜೇಂದ್ರಗಡ ಶಿಕ್ಷಣ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಬೆಳೆಯುತ್ತಿರುವ ನಗರವಾಗಿದ್ದು, ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ನೂರಾರು ಗ್ರಾಮಿಣ ಭಾಗದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಬರುತ್ತಾರೆ. ಆದರೆ ಅವರಿಗೆ ಕಾಲೇಜಿಗೆ ಹೋಗಲು ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲ. ಜತೆಗೆ ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಸೇರಿದಂತೆ ಬಹುತೇಕ ಸಮಸ್ಯೆಗಳಿವೆ. ಇವುಗಳನ್ನು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕೂಡಲೇ ಸರಿಪಡಿಸಲು ಮುಂದಾಗಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಹೃದಯಾಘಾತ: ಸಾಮಾಜಿಕ ಕಾರ್ಯಕರ್ತ ನಿಧನ
ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರು, ಸಂಘಟನೆ ಮುಖಂಡರಾದ ಪ್ರದೀಪ್ ಮಾದರ, ಅನಿಲ ರಾಠೋಡ, ವಿಕಾಸ್ ರಮಣಿ, ಮಹಮ್ಮದ್ ರಫಿ, ಕೊಲ್ಕಾರ್ ಫಾರುಕ್ ನೀಲೋಗಲ್, ಮಹೇಶ್, ನವೀನ ತಳವಾರ, ಸಚ್ಚಿದಾನಂದ, ವಿಶ್ವನಾಥ್ ಶಿರಹಟ್ಟಿ, ವಿನಾಯಕ ಚಕ್ರಸಾಲಿ, ಶ್ರಿಶಾಂಕ್ ಉಪ್ಪಾರ, ಶ್ರಿಕಾಂತ, ಸಿದ್ದಯ್ಯ, ಪವನ್ ಶಶಿಧರ, ಮುತ್ತಪ್ಪ, ಮಲ್ಲಿಕಾರ್ಜುನ, ಉಮೇಶ್ ಮಂಜುನಾಥ ಹಾಗೂ ವಿದ್ಯಾರ್ಥಿ ಮುಖಂಡರು ಇದ್ದರು
ವರದಿ : ಎಸ್ಎಫ್ಐ ಜಿಲ್ಲಾ ಉಪಾಧ್ಯಕ್ಷ ಚಂದ್ರು ರಾಠೋಡ