ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ವಿಶ್ವವಿದ್ಯಾಲಯದಲ್ಲಿ ನಡೆದ ವಿದ್ಯಾರ್ಥಿನಿ ಸಾವು ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಗೃಹ ಇಲಾಖೆಗೆ ಪತ್ರ ಬರೆದು, ಖುದ್ದು ಭೇಟಿ ನೀಡಿ ಮನವಿ ಮಾಡುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ತಿಳಿಸಿದರು.
ಗದಗ ಪಟ್ಟಣದ ಜಿಲ್ಲಾಡಳಿತ ಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಪ್ರಕರಣ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಲಾಗಿದೆ” ಎಂದು ಹೇಳಿದರು.
“ಮೃತ ವಿದ್ಯಾರ್ಥಿನಿಯ ಕುಟುಂಬವು ಕೊಲೆ ಆರೋಪ ಮಾಡಿದ್ದು, ವಸತಿ ನಿಲಯದ ಸಿಸಿ ಟಿವಿ ದೃಶ್ಯಾವಳಿಯ ಒಂದು ತಿಂಗಳ ಬ್ಯಾಕ್ಅಪ್ ಇಲ್ಲವೆಂದು ತಿಳಿದುಬಂದಿದೆ. ದೂರು ದಾಖಲಿಸುವ ವೇಳೆ ಪೊಲೀಸರು ಒತ್ತಡ ಹೇರಿದ್ದಾರೆಂಬ ಆರೋಪವೂ ಕೇಳಿಬಂದಿದೆ. ಪೊಲೀಸ್ ಠಾಣೆಯ ಸಿಸಿ ಟಿವಿ ದೃಶ್ಯಾವಳಿಯನ್ನೂ ಪರಿಶೀಲಿಸಲಾಗುವುದು” ಎಂದು ಹೇಳಿದರು.
“ರೋಣ ತಾಲೂಕು ಆಸ್ಪತ್ರೆ ಹಾಗೂ ಗದಗಿನ ಎ ಎಚ್ ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಗಂಡುಮಕ್ಕಳ ಜನನ ಪ್ರಮಾಣ ಹೆಚ್ಚಿರುವುದು ಆತಂಕಕಾರಿ. ಹೆಣ್ಣು ಭ್ರೂಣ ಹತ್ಯೆ ತಡೆಯಲು ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ” ಎಂದರು.
“ರೋಣ ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಬೇಕು. ಮಹಿಳಾ ಗ್ರಾಮಸಭೆಗಳನ್ನು ನಿಯಮಿತವಾಗಿ ನಡೆಸಬೇಕು ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳೆಯರ ಅಹವಾಲು ಆಲಿಸಲು ತಿಂಗಳಿಗೆ ಒಂದು ದಿನ ಮೀಸಲಿಡುವಂತೆ ಸರ್ಕಾರದ ಗಮನ ಸೆಳೆಯಲಾಗುವುದು” ಎಂದು ತಿಳಿಸಿದರು.
“ಎರಡು ದಿನಗಳ ಜಿಲ್ಲಾ ಪ್ರವಾಸದಲ್ಲಿ ವಸತಿ ನಿಲಯಗಳು, ಆಸ್ಪತ್ರೆಗಳು, ಅಲೆಮಾರಿ ಸಮುದಾಯದ ನಿವಾಸಗಳು, ಪೊಲೀಸ್ ಠಾಣೆ, ಮಕ್ಕಳ ದತ್ತು ಕೇಂದ್ರ, ಕೃಷಿ ಕಾರ್ಮಿಕರು ಹಾಗೂ ಕುರಿಗಾಹಿಗಳನ್ನು ಭೇಟಿ ಮಾಡಲಾಗಿದೆ. ಅಲೆಮಾರಿ ಸಮುದಾಯಕ್ಕೆ ಕುಡಿಯುವ ನೀರು, ರಸ್ತೆ, ಶೌಚಾಲಯ ಹಾಗೂ ಗ್ರಂಥಾಲಯದಂತಹ ಮೂಲಸೌಕರ್ಯ ಕಲ್ಪಿಸುವ ಅಗತ್ಯವಿದೆ” ಎಂದು ಹೇಳಿದರು.
ಇದನ್ನೂ ಓದಿದ್ದೀರಾ? ತೀರ್ಥಹಳ್ಳಿ | ಗುಡ್ಡ ಕುಸಿತ: ಮಗು ಸೇರಿ ಮೂವರ ಸಾವು, ಕೂಲಿಗಾಗಿ 4 ದಿನದ ಹಿಂದಷ್ಟೇ ಊರು ಬಿಟ್ಟಿದ್ದ ಕುಟುಂಬ
“ಅಹವಾಲು ಸ್ವೀಕಾರ ಸಭೆಯಲ್ಲಿ ಸಾವಿರಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು. ದೇವದಾಸಿಯರು, ಅಲೆಮಾರಿ ಸಮುದಾಯದವರು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ಹಲವರು ಉದ್ಯೋಗ, ಮನೆ, ಪಿಂಚಣಿ, ಮೂಲಸೌಕರ್ಯ ಹಾಗೂ ಕೌಟುಂಬಿಕ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು. ಮನೆ ಸೌಲಭ್ಯಕ್ಕಾಗಿ ಬಂದ 66 ಅರ್ಜಿಗಳನ್ನು ವಿವಿಧ ವಸತಿ ಯೋಜನೆಗಳಲ್ಲಿ ಆದ್ಯತೆಯ ಮೇರೆಗೆ ಪರಿಗಣಿಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಡಾ.ನಾಗಲಕ್ಷ್ಮಿ ಚೌಧರಿ ತಿಳಿಸಿದರು.
ಈ ವೇಳೆ ಸಭೆಯಲ್ಲಿ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ ಇದ್ದರು.
ಘಟನೆ ಹಿನ್ನೆಲೆ
ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಸಾರ್ವಜನಿಕ ಆರೋಗ್ಯ(ಎಂಪಿಎಚ್) ದ್ವಿತೀಯ ಸೆಮಿಸ್ಟರ್ ವಿದ್ಯಾರ್ಥಿನಿ ಡಾ. ವೀಣಾ ಹಾನಾಪುರ (26) ಗುರುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಜಿಲ್ಲೆಯ ನರಗುಂದ ಪಟ್ಟಣದ ನಿವಾಸಿಯಾಗಿರುವ ವಿದ್ಯಾರ್ಥಿನಿಯ ಕುಟುಂಬ ಪ್ರಸ್ತುತ ಬಾದಾಮಿ ತಾಲೂಕಿನಲ್ಲಿ ವಾಸವಿದೆ ಎನ್ನಲಾಗಿದೆ.
ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿನ ತನ್ನ ಕೊಠಡಿಗೆ ಗುರುವಾರ ರಾತ್ರಿ 8.30ಕ್ಕೆ ತೆರಳಿದ್ದು, ರಾತ್ರಿ 11 ಗಂಟೆಯಾದರೂ ಕೊಠಡಿಯ ಬಾಗಿಲು ತೆರೆಯದೇ ಹಾಗೂ ಊಟಕ್ಕೂ ಹಾಜರಾಗದ ಹಿನ್ನೆಲೆ ಸಹಪಾಠಿ ವಿದ್ಯಾರ್ಥಿನಿಯರು ವಾರ್ಡನ್ಗೆ ಮಾಹಿತಿ ನೀಡಿದ ಬಳಿಕ ಪರಿಶೀಲನೆ ನಡೆಸಿದಾಗ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿತ್ತು. ತಕ್ಷಣವೇ ಪೊಲೀಸರ ಸಮ್ಮುಖದಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವ ಪ್ರಯತ್ನ ಮಾಡಿದರಾದರೂ ಆಸ್ಪತ್ರೆ ತಲುಪುವ ಮೊದಲೇ ವಿದ್ಯಾರ್ಥಿನಿ ಸಾವಿಗೀಡಾಗಿದ್ದಾಳೆಂದು ವೈದ್ಯರು ತಿಳಿಸಿದ್ದರು. ಘಟನೆಗೆ ಕಾರಣ ತಿಳಿದುಬಂದಿಲ್ಲ.




