“ಗದಗಿನಲ್ಲಿ ಬೌದ್ಧ ಸಂಸ್ಕೃತಿ ಮತ್ತು ವಿಚಾರಧಾರೆಗಳನ್ನು ಪಸರಿಸುವ ನಿಟ್ಟಿನಲ್ಲಿ ಹತ್ತು ಕೋಟಿ ರೂ ವೆಚ್ಚದಲ್ಲಿ ಭವ್ಯ , ಬುದ್ಧ ವಿಹಾರ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ ನೀಡಿದೆ” ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ ಅವರು ಪ್ರಕಟಿಸಿದರು.
ಗದಗ ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
“ಬುದ್ಧ ವಿಹಾರದ ನಿರ್ಮಾಣಕ್ಕಾಗಿ ಈಗಾಗಲೇ ೧೦ ಕೋಟಿ ರೂಪಾಯಿಗಳ ಅನುದಾನ ಮಂಜೂರಾಗಿದ್ದು, ಆ ಪೈಕಿ ೩ ಕೋಟಿ ರೂಪಾಯಿಗಳು ಈಗಾಗಲೇ ಬಿಡುಗಡೆಯಾಗಿ ಜಿಲ್ಲಾಧಿಕಾರಿಗಳ ವ್ಯಾಪ್ತಿಗೆ ತಲುಪಿವೆ. ನಗರದ ಮೆಡಿಕಲ್ ಕಾಲೇಜು ಸಮೀಪವಿರುವ ಗುಡ್ಡದ ಮೇಲಿನ ಆಯಕಟ್ಟಿನ ಜಾಗದಲ್ಲಿ ಈ ವಿಹಾರ ತಲೆ ಎತ್ತಲಿದೆ. ಇದಕ್ಕೆ ಸಂಬಂಧಿಸಿದ ನಕ್ಷೆ ಮತ್ತು ಯೋಜನಾ ವರದಿ ಸಿದ್ಧವಾಗಿದ್ದು, ಮುಂದಿನ ಒಂದು ತಿಂಗಳ ಒಳಗಾಗಿ ಕಾಮಗಾರಿ ಆರಂಭವಾಗಲಿದೆ” ಎಂದು ಸಚಿವರು ತಿಳಿಸಿದರು.
ವಿಧಾನ ಪರಿಷತ್ ಶಾಸಕ ಎಸ್. ವಿ. ಸಂಕನೂರು ಮಾತನಾಡಿ,”ಭವ್ಯ ಬುದ್ಧ ವಿಹಾರಕ್ಕೆ ಅಭಿನಂದನೆ ಸಲ್ಲಿಸಿ ಇದೇ ಸಂದರ್ಭದಲ್ಲಿ ಗದಗ ನಗರದಲ್ಲಿ ೧೦ ಕೋಟಿ ರೂಪಾಯಿ ವೆಚ್ಚದಲ್ಲಿ ಭವ್ಯವಾದ ಬುದ್ಧ ವಿಹಾರ ನಿರ್ಮಾಣಕ್ಕೆ ಮುಂದಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಅವರ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಈ ವಿಹಾರವು ಬೌದ್ಧ ಧರ್ಮದ ತತ್ವಗಳನ್ನು ಪ್ರಚಾರ ಮಾಡಲು ಮತ್ತು ಅಧ್ಯಯನ ಮಾಡಲು ಪೂರಕವಾಗಲಿದೆ” ಎಂದು ಅವರು ಹರ್ಷ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವೀಕೆಂದ್ರಿಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಡಿ. ಆರ್. ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕ್ಷರು ಅಧ್ಯಕ್ಷ ಬಿ.ಬಿ ಅಸೂಟಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ.ಕೆ.ಆರ್., ಉಪವಿಭಾಗಧಿಕಾರಿ ಗಂಗಪ್ಪ ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ ಜಗದೀಶ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ. ಆರ್. ಮುಂಡರಗಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ಡಾ. ನಂದಾ ಹಣಬರಟ್ಟಿ, ಸಪಾಯಿ ಕರ್ಮಚಾರಿ ಸಂಘದ ಸದಸ್ಯ ಎಸ್.ಎನ್ ಬಳ್ಳಾರಿ, ಸೇರಿದಂತೆ ಸಮಾಜದ ಗಣ್ಯರು, ಮುಖಂಡರುಗಳು, ಎಲ್ಲಾ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.




