ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಹಂಪಸಂದ್ರ ಗ್ರಾಮದಲ್ಲಿ ಅಂಬೇಡ್ಕರ್ ಮತ್ತು ವಾಲ್ಮೀಕಿ ಅವರ ಪುತ್ಥಳಿ ವಿವಾದ ತೀವ್ರ ಸಂಘರ್ಷದ ಸ್ವರೂಪ ಪಡೆದಿದೆ. ಗ್ರಾಮದಲ್ಲಿ ಉದ್ವಿಗ್ವ ಸ್ಥಿತಿ ಉಂಟಾಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕೆಎಸ್ಆರ್ಪಿ ತುಕಡಿ ಸೇರಿದಂತೆ 150ಕ್ಕೂ ಹೆಚ್ಚು ಪೊಲೀಸರ ತಂಡ ಗ್ರಾಮದಲ್ಲಿ ಬೀಡು ಬಿಟ್ಟಿದೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದ ರೀತಿಯಲ್ಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ತಹಶೀಲ್ದಾರ್ ಮಹೇಶ್ ಪತ್ರಿ ಸೇರಿದಂತೆ ಅಧಿಕಾರಿಗಳು ನಡೆಸಿದ ಶಾಂತಿ ಸಭೆಯೂ ವಿಫಲವಾಗಿದೆ. ಎರಡೂ ಸಮುದಾಯಗಳ ನಡುವೆ ಮಾತಿನ ಚಕಮಕಿ ನಡೆದು ಕಲ್ಲು ತೂರಾಟ ನಡೆಸುವ ಹಂತಕ್ಕೂ ಪರಿಸ್ಥಿತಿ ತಲುಪಿತ್ತು.
ಸಿದ್ದಗಂಗಮ್ಮ ಎಂಬುವವರು ವಾಲ್ಮೀಕಿ ಸಮುದಾಯಕ್ಕೆ ಸೇರಿದ ಶನಿಮಹಾತ್ಮ ದೇವಸ್ಥಾನಕ್ಕೆ ನಿವೇಶನ ದಾನ ನೀಡಿದ್ದರು. ಈ ನಿವೇಶನದಲ್ಲಿ ಪರಿಶಿಷ್ಟ ಜಾತಿಯವರು ಶನಿವಾರ ರಾತ್ರಿ ಅಂಬೇಡ್ಕರ್ ಪುತ್ಥಳಿ ಪ್ರತಿಷ್ಠಾಪಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ವಾಲ್ಮೀಕಿ ಸಮುದಾಯದವರು ಭಾನುವಾರ ಅಂಬೇಡ್ಕರ್ ಪುತ್ಥಳಿ ಮುಂಭಾಗದಲ್ಲಿಯೇ ಮಹರ್ಷಿ ವಾಲ್ಮೀಕಿಯ ಭಾವಚಿತ್ರವಿರುವ ನಾಮಫಲಕ ನಿಲ್ಲಿಸಿದ್ದಾರೆ.
ಆಗ ಎರಡೂ ಸಮುದಾಯಗಳ ನಡುವೆ ಘರ್ಷಣೆ ಉಂಟಾಗಿದೆ. ಅಂಬೇಡ್ಕರ್ ಪುತ್ಥಳಿ ಅನಾವರಣಕ್ಕೆ ಮಹರ್ಷಿ ವಾಲ್ಮೀಕಿ ನಾಮಫಲಕ ಅಡ್ಡವಿದೆ. ಆದ್ದರಿಂದ ನಾಮಫಲಕವನ್ನು ಪಕ್ಕಕ್ಕೆ ಸರಿಸಬೇಕು ಎಂದು ಪರಿಶಿಷ್ಟ ಜಾತಿ ಮುಖಂಡರು ಮನವಿ ಮಾಡಿದರು.
ತಹಶೀಲ್ದಾರ್ ಮಹೇಶ್ ಎಸ್. ಪತ್ರಿ ಮಹರ್ಷಿ ವಾಲ್ಮೀಕಿ ನಾಮಫಲಕವನ್ನು, ಅಂಬೇಡ್ಕರ್ ಪುತ್ಥಳಿ ಪಕ್ಕದಲ್ಲಿ ನಿಲ್ಲಿಸಿ ಎರಡಕ್ಕೂ ಮಾಲಾರ್ಪಣೆ ಮಾಡಿ ಎರಡೂ ಸಮುದಾಯಗಳ ನಡುವೆ ಉದ್ವಿಗ್ನತೆ ಕಡಿಮೆ ಮಾಡಲು ಪ್ರಯತ್ನಿಸಿದರು.
“ಅಂಬೇಡ್ಕರ್ ಅವರ ಬಗ್ಗೆ ಅಪಾರ ಗೌರವವಿದೆ. ಆದರೆ ಕ್ಷುಲ್ಲಕ ಕಾರಣಕ್ಕೆ ದೇವಾಲಯದ ಜಾಗ ಒತ್ತುವರಿ ಮಾಡಿಕೊಂಡು ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿರುವುದು ಸರಿಯಲ್ಲ. ಗ್ರಾಮದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ” ಎಂದು ವಾಲ್ಮೀಕಿ ಸಮುದಾಯದ ಮುಖಂಡರು ಆರೋಪಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಡಿವೈಎಸ್ಪಿ, ಶಿವಕುಮಾರ್, ವೃತ್ತ ನಿರೀಕ್ಷಕ ಸತ್ಯನಾರಾಯಣ, ಸಶಸ್ತ್ರ ಮೀಸಲುಪಡೆಯೊಂದಿಗೆ ಗ್ರಾಮಕ್ಕೆ ಬಂದು ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ. ಮುಂದುವರೆದು, ಎರಡೂ ಗುಂಪುಗಳ ಮುಖಂಡರ ಸಭೆ ಕರೆದು ಮಾತುಕತೆ ನಡೆಸಿದ್ದಾರೆ. ಆದರೆ, ಮಾತುಕತೆ ವಿಫಲವಾಗಿದ್ದು, ಇಂದು ಶಾಂತಿ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಚಿಕ್ಕಬಳ್ಳಾಪುರ | ರಾಜಕೀಯ ತಿರುವು ಪಡೆದುಕೊಂಡ ಗುಂಡೇಟು ಪ್ರಕರಣ; ಸುಧಾಕರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ತಹಶೀಲ್ದಾರ್ ಮಹೇಶ್ ಜಾಗದ ದಾಖಲೆಗಳನ್ನು ಪರಿಶೀಲಿಸಿ, “ಸಿದ್ದಗಂಗಮ್ಮ ಅವರಿಗೆ ಗ್ರಾಮ ಪಂಚಾಯಿತಿಯಿಂದ ಜಾಗ ಮಂಜೂರಾಗಿದೆ. ಈಗಾಗಲೇ ಅವರು ಬೇರೆ ಕಡೆ ವಾಸಿಸುತ್ತಿದ್ದಾರೆ. ಆ ಜಾಗವನ್ನು ಶನಿಮಹಾತ್ಮ ದೇವಾಲಯಕ್ಕೆ ಬಿಟ್ಟಕೊಟ್ಟಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಮುಂದಿನ ಕ್ರಮ ಕೈ ಗೊಳ್ಳಲಾಗುವುದು” ಎಂದಿದ್ದಾರೆ.
ಖಾಲಿ ನಿವೇಶನದಲ್ಲಿ ಶನಿವಾರ ರಾತ್ರಿ ಇದ್ದಕ್ಕಿದ್ದಂತೆ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿರುವುದು ಗ್ರಾಮದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ.