ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ಹಾಗೂ ವಾಹನ ಚಾಲಕರಾಗಿ ಹಲವು ವರ್ಷಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ಹಂಗಾಮಿ ನೌಕರರು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕು, ಬಂಡೀಪುರದಲ್ಲಿ ಮುಷ್ಕರ ಆರಂಭಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, 2017ರ ಮೊದಲು ಮುಂಚೂಣಿ ಸಿಬ್ಬಂದಿ ಹಾಗೂ ಇಲಾಖೆಯ ವಾಹನ ಚಾಲಕರಾಗಿ ಕಾರ್ಯನಿರ್ವಹಿಸುತ್ತಿರುವ ಮತ್ತು 10 ವರ್ಷಗಳಿಗಿಂತ ಹೆಚ್ಚು ಸೇವೆ ಸಲ್ಲಿಸಿರುವ ನೌಕರರ ಬೇಡಿಕೆಗಳ ನ್ಯಾಯೋಚಿತತೆ ಕುರಿತು ಸರ್ಕಾರ ಗಂಭೀರವಾಗಿ ಪರಿಗಣನೆ ನಡೆಸಿದೆ. ಇವರನ್ನು ಇಲಾಖೆಯ ವತಿಯಿಂದಲೇ ಹಿಂದಿನಂತೆ ನೇಮಕ ಮಾಡಿಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆಯೇ, ಸೇವಾ ಹಿರಿತನದ ಆಧಾರದ ಮೇಲೆ ಹೆಚ್ಚುವರಿ ವೇತನ ಹಾಗೂ ಭತ್ಯೆ ನೀಡುವ ಸಾಧ್ಯತೆಗಳಿವೆಯೇ ಎಂಬ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸುವ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ.
ಈ ಸಂಬಂಧ, ಅರಣ್ಯಪಡೆ ಮುಖ್ಯಸ್ಥರ ನೇತೃತ್ವದಲ್ಲಿ ವಿಶೇಷ ಸಮಿತಿಯನ್ನು ರಚಿಸಲು ಸೂಚನೆ ನೀಡಲಾಗಿದೆ. ಸಮಿತಿ ಕಾನೂನಾತ್ಮಕ ಮತ್ತು ಮಾನವೀಯ ದೃಷ್ಟಿಕೋನಗಳಿಂದ ವಿಚಾರಿಸಿ, ರಾಜ್ಯದ ಅಡ್ವಕೇಟ್ ಜನರಲ್ ಅವರ ಅಭಿಪ್ರಾಯ ಪಡೆದು, ನ್ಯಾಯಸಮ್ಮತವಾದ ವರದಿಯನ್ನು 7 ದಿನಗಳೊಳಗಾಗಿ ಸಲ್ಲಿಸಲು ಸೂಚಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಮೈಸೂರು | ವಾಣಿಜ್ಯ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ–ಯುವ ಕಾಂಗ್ರೆಸ್ ಆಕ್ರೋಶ
ಇದೇ ವೇಳೆ, ವನ್ಯಜೀವಿ ವಿಭಾಗದಲ್ಲಿ ವಾಹನ ಚಾಲಕರಾಗಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಅಪಾಯ ಭತ್ಯೆ ವಿಸ್ತರಿಸುವುದಕ್ಕೂ ನಿರ್ದೇಶನ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಈ ವಿಶೇಷ ಸುದ್ದಿ ಓದಿದ್ದೀರಾ?ಮೈಸೂರು | ಚೆಲುವಾಂಬ ಆಸ್ಪತ್ರೆಯಲ್ಲಿ ಶಿಶುಗಳ ಸರಣಿ ಸಾವು: ವ್ಯವಸ್ಥೆಯ ವೈಫಲ್ಯವೇ?
ಹಂಗಾಮಿ ನೌಕರರ ಬೇಡಿಕೆಗಳಿಗೆ ಸ್ಪಂದನೆ ನೀಡುವ ದಿಸೆಯಲ್ಲಿ ಸರ್ಕಾರ ಕ್ರಮ ಕೈಗೊಂಡಿರುವುದು ಮುಷ್ಕರಕ್ಕೆ ಶೀಘ್ರ ಪರಿಹಾರ ಕಂಡುಕೊಳ್ಳುವ ನಿರೀಕ್ಷೆಯನ್ನು ಹುಟ್ಟಿಸಿದೆ.




