“ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚು ಕಂಡುಬರುವ ಪ್ರದೇಶಗಳ ಜಾಗೃತಿ ಮೂಡಿಸುವ ಮೂಲಕ ಜಿಲ್ಲೆಯಲ್ಲಿ ದೌರ್ಜನ್ಯ ತಡೆಗೆ ಅಗತ್ಯ ಕ್ರಮವಹಿಸಬೇಕು” ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಸೂಚನೆ ನೀಡಿದರು.
ಹಾವೇರಿ ಪಟ್ಟಣದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಜಿಲ್ಲಾ ಜಾಗೃತಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
“ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಇರುವ ಸರ್ಕಾರದ ಸೌಲಭ್ಯಗಳ ಕುರಿತು ಮಾಹಿತಿ ನೀಡಬೇಕು” ಎಂದು ಸೂಚನೆ ನೀಡಿದರು.
“ಅಂದಲಗಿ ಗ್ರಾಮ ಪಂಚಾಯತಿಯ ಗಾಂವಠಾಣ ವ್ಯಾಪ್ತಿಯಲ್ಲಿ ಲಭ್ಯವಿರುವ 19 ಎಕರೆ ಪ್ರದೇಶದಲ್ಲಿ ಪರಿಶಿಷ್ಟ ಜಾತಿಯ ನಿವೇಶನ ರಹಿತರಿಗೆ ಕಾನೂನಾತ್ಮಕವಾಗಿ ಹಂಚಿಕೆಗೆ ಕ್ರಮವಹಿಸಬೇಕು. ಕೂಡಲೇ ಕ್ರಿಯಾಯೋಜನೆ ಯೋಜನೆ ತಯಾರಿಸುವಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ತಾ. ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ” ಸೂಚನೆ ನೀಡಿದರು.
ನಾಲ್ಕು ಜನರಿಗೆ ನೌಕರಿ: “ದೌರ್ಜನ್ಯ ಪ್ರಕರಣಗಳಲ್ಲಿ ಮೃತಪಟ್ಟ 7 ಜನರ ಅವಲಂಬಿತರ ಪೈಕಿ ಈಗಾಗಲೇ ನಾಲ್ಕು ಜನರಿಗೆ ಸರ್ಕಾರಿ ಕೆಲಸ ನೀಡಲಾಗಿದೆ. ಒಂದು ಪ್ರಕರಣ ಬೇರೆ ಜಿಲ್ಲೆಗೆ ವರ್ಗಾವಣೆಯಾಗಿದೆ. ಉಳಿದ ಎರಡು ಪ್ರಕರಣದಲ್ಲಿ ಪತ್ನಿಯರು ಅಪರಾಧಿಗಳಾಗಿದ್ದಾರೆ” ಎಂದು ತಿಳಿಸಿದರು.
“ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ಶೂನ್ಯವಾಗಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ಠಾಣೆಗಳಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡಬಾರದು. ಪ್ರಕರಣದ ಸತ್ಯಾಸತ್ಯತೆ ತಿಳಿದುಕೊಳ್ಳಬೇಕು. ಎಸ್.ಸಿ.ಎಸ್.ಪಿ. ಹಾಗೂ ಟಿ.ಎಸ್.ಪಿ. ಯೋಜನೆ ಮೀಸಲಾದ ಅನುದಾನ ಆಯಾ ಸಾಲಿನಲ್ಲೇ ವೆಚ್ಚವಗಬೇಕು ಹಾಗೂ ಅರ್ಹ ಫಲಾನುಭವಿಗಳಿಗೆ ತಲುಬೇಕು. ದೇವಗಿರಿ ಗ್ರಾಮದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಕಾಲೋನಿಯ ಮನೆಗಳಲ್ಲಿ ಸಾರಾಯಿ ಮಾರಾಟವಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು” ಎಂದರು.
“ದೇವಗಿರಿ ಗ್ರಾಮದ ವಾಲ್ಮೀಕಿ ಸಮುದಾಯದ ಸ್ಮಶಾನಕ್ಕೆ ತಡೆಗೋಡೆ ನಿರ್ಮಾಣ ಮಾಡಬೇಕು. ಬಾಳಂಬೀಡ ಗ್ರಾಮದಲ್ಲಿ ಗ್ರಾಮ ಪಂಚಾಯತಿ 14-15ನೇ ಹಣಕಾಸು ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಕಾಲೋನಿಯಲ್ಲಿ ಯಾವುದೇ ಕೆಲಸ ಮಾಡುತ್ತಿಲ್ಲ. ಅಲ್ಲಿ ಪಕ್ಕಾಗಟಾರ್, ಹೈಮಾಸ್ಕ ದ್ವೀಪ ಅಳವಡಿಕೆ ಆಗಬೇಕು” ಎಂದರು.
“ಹಾನಗಲ್ ತಾಲೂಕು ಆರೆಲಕ್ಕಾಪೂರ ಗ್ರಾಮದಲ್ಲಿ ಮಹಾತಂಗೇಶ್ವರ ದೇವಸ್ಥಾನಕ್ಕೆ ಸೇರಿದ ಜಾಗದಲ್ಲಿ ಅನ್ಯ ಧರ್ಮಿಯರು ಮನೆ ಕಟ್ಟಿಕೊಂಡಿದ್ದಾರೆ. ಅವರನ್ನು ತೆರವುಗೊಳಿಸಬೇಕು. ನೆಗಳೂರು ಗ್ರಾಮದಲ್ಲಿ 350 ದಲಿತರ ಮನೆಗಳಿದ್ದು, ಅವರಿಗೆ ಇ-ಸ್ವತ್ತು ಉತಾರ ಇಲ್ಲ. ಹಾಗಾಗಿ ಅವರಿಗೆ ಇ-ಸ್ವತ್ತು ಉತಾರ ವಿತರಣೆ ಯಾಗಬೇಕು” ಎಂದು ನೂತನ ಸಮಿತಿಯ ಅಧಿಕಾರೇತರ ನಾಮನಿರ್ದೇಶಿತ ಸದಸ್ಯರಾದ ಶಿವರಾಜ ಹರಿಜನ, ಸಂಜಯಗಾಂಧಿ. ಬಸವರಾಜ ಹೆಡಿಡ್ಕೊಂಡ. ಎನ್.ಎಂ. ಗಾಳೆಮ್ಮನವರ. ಜಗದೀಶ ಹರಿಜನ ಅವರುಗಳು ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು.
ಈ ಸುದ್ದಿ ಓದಿದ್ದೀರಾ? ಗದಗ | ರಾಜ್ಯ ಸರಕಾರ ಎಲ್ಲ ಇಲಾಖೆಯಲ್ಲೂ ಭ್ರಷ್ಟಾಚಾರ ತಾಂಡವ: ಜೆಡಿಎಸ್ ಆರೋಪ
“ಈ ಸಭೆಯ ಗಮನಕ್ಕೆ ತರಲಾದ ಎಲ್ಲ ಸಮಸ್ಯೆಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಆದ್ಯತೆ ಮೇರೆಗೆ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ” ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ ಅವರು ಮಾತನಾಡಿ, “ಜನವರಿ-2025 ರಿಂದ ಈವರೆಗೆ 43 ಪ್ರಕರಣಗಳು ದಾಖಲಾಗಿದ್ದು, ದೌರ್ಜನ್ಯ ಪ್ರಕರಣಗಳಲ್ಲಿ ಮೃತಪಟ್ಟ 7 ಜನರ ಅವಲಂಬಿತರಿಗೆ ರೂ.1.23.363 ಮೊತ್ತ ಪಿಂಚಣಿ ಮಂಜೂರ ಮಾಡಲಾಗಿದೆ” ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ರುಚಿ ಬಿಂದಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ, ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ, ಸಮಿತಿಯ ಅಧಿಕಾರೇತರ ನಾಮನಿರ್ದೇಶಿತ ಸದಸ್ಯರಾದ ಅಜ್ಜಪ್ಪ ಗೋಣೆಮ್ಮನವರ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಇತರರು ಉಪಸ್ಥಿತರಿದ್ದರು.