ಹಾನಗಲ್ ತಾಲ್ಲೂಕಿನ ವಿದ್ಯಾರ್ಥಿನಿ ಬಿಂದುಶ್ರೀಗೆ NEET ಪರೀಕ್ಷೆಯಲ್ಲಿ ಆಗಿರುವ ಅನ್ಯಾಯವನ್ನು ಸರಿಪಡಿಸಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಜಿಲ್ಲಾ ಸಮಿತಿಗಳು ಹಾವೇರಿ ಪಟ್ಟಣದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅವರಿಗೆ ಮನವಿ ಸಲ್ಲಿಸಿದರು.
“ಹಾನಗಲ್ ತಾಲ್ಲೂಕಿನ ವಿದ್ಯಾರ್ಥಿನಿ ಬಿಂದುಶ್ರೀ ಅವರು ನೀಟ್ ಪರೀಕ್ಷೆಯಲ್ಲಿ ಉತ್ತಮವಾಗಿ ಪರೀಕ್ಷೆ ಬರೆದಿದ್ದರೂ, ಪರೀಕ್ಷಾ ಪ್ರಕ್ರಿಯೆಯಲ್ಲಿನ ಅನ್ಯಾಯ/ಅಕ್ರಮದ ಪರಿಣಾಮವಾಗಿ ಒಎಂಆರ್ ಪ್ರತಿ ತಿರುಚಿ ಕೇವಲ 11 ಅಂಕ ಬರುವಂತೆ ಮಾಡಲಾಗಿದೆ. ಅವರ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆಯಾಗಿದೆ. ವಿದ್ಯಾರ್ಥಿನಿಯ ಪರಿಶ್ರಮ ಮತ್ತು ಭವಿಷ್ಯವನ್ನು ಪರಿಗಣಿಸಿ, ಈ ಪ್ರಕರಣವನ್ನು ಗಂಭೀರವಾಗಿ ಪರಿಶೀಲಿಸಿ ಅವರಿಗೆ ನ್ಯಾಯ ಒದಗಿಸುವುದು ಅಗತ್ಯವಾಗಿದೆ” ಮನವಿ ಮಾಡಿದರು.
“ನೀಟ್ ನಂತಹ ಮಹತ್ವದ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಾವುದೇ ರೀತಿಯ ಲೋಪ, ಅಕ್ರಮ ಅಥವಾ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಬಾರದು.
ಎಸ್ಎಫ್ಐ ಮತ್ತು ಡಿವೈಎಫ್ಐ ಸಮಿತಿಗಳ ವತಿಯಿಂದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸುತ್ತೇವೆ. ವಿದ್ಯಾರ್ಥಿನಿ ಬಿಂದುಶ್ರೀ ಅವರಿಗೆ ನೀಟ್ ಪರೀಕ್ಷೆಯಲ್ಲಿ ಆಗಿರುವ ಅನ್ಯಾಯದ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಪರೀಕ್ಷಾ ಪ್ರಕ್ರಿಯೆಯಲ್ಲಿ ನಡೆದಿರುವ ಲೋಪ/ತಪ್ಪು ಪತ್ತೆಹಚ್ಚಿ, ವಿದ್ಯಾರ್ಥಿನಿಗೆ ನ್ಯಾಯ ದೊರಕುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸಂಬಂಧಿಸಿದ ಅಧಿಕಾರಿಗಳಿಂದ ಪ್ರಕರಣದ ಕುರಿತು ಸ್ಪಷ್ಟ ವರದಿ ಪಡೆದು, ವಿದ್ಯಾರ್ಥಿನಿಯ ಶೈಕ್ಷಣಿಕ ಭವಿಷ್ಯಕ್ಕೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿನಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ, ಆಕೆಯ ಶೈಕ್ಷಣಿಕ ಹಕ್ಕು ಮತ್ತು ಭವಿಷ್ಯವನ್ನು ರಕ್ಷಿಸಬೇಕು.
ಇಂತಹ ಘಟನೆಗಳು ಮರುಕಳಿಸದಂತೆ ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆ ಹಾಗೂ ಪಾರದರ್ಶಕತೆ ಖಚಿತಪಡಿಸಬೇಕು. ವಿದ್ಯಾರ್ಥಿನಿ ಬಿಂದುಶ್ರೀ ಅವರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈ ಮನವಿಯನ್ನು ತುರ್ತಾಗಿ ಪರಿಗಣಿಸಿ, ನ್ಯಾಯ ಒದಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ. ಈ ವಿದ್ಯಾರ್ಥಿನಿಗೆ ಸರಿಯಾದ ರೀತಿಯಲ್ಲಿ ಪುನಃ ಪ್ರಶ್ನೆ ಪತ್ರಿಕೆಯನ್ನು ಪರಿಶೀಲಿಸಬೇಕು ಇಲ್ಲವಾದಲ್ಲಿ ನಮ್ಮ ಹೋರಾಟ ಬೃಹತ್ ಪ್ರಮಾಣದಲ್ಲಿ ನಡೆಸಬೇಕಾಗುತ್ತೆ.
ಈ ಸಂಧರ್ಭದಲ್ಲಿ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಹಾಸ್ಟೆಲ್ ವಿದ್ಯಾರ್ಥಿಗಳ ರಾಜ್ಯ ಸಂಚಾಲಕ ಅರುಣ್ ಕುಮಾರ್ ನಗವತ್, ಹಾವಿ.ವಿ ಘಟಕದ ಕಾರ್ಯದರ್ಶಿ ಶಂಭು ಸವದತ್ತಿ, ಉಪಾಧ್ಯಕ್ಷ ಪರಶುರಾಮ ಎಸ್, ಎಸ್ಎಫ್ಐ ಮುಖಂಡರಾದ ಕಲ್ಪನಾ ಬಡಿಗೇರ, ಕೀರ್ತಿ ಹುನಿಕಟ್ಟಿ, ಅಪೂರ್ವ ಮಲ್ಲಾಡ, ಜಯಲಕ್ಷ್ಮೀ ಪಾಟೀಲ್, ಸ್ವಪ್ನ ಮನೋಜಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.




