ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ, ಚಿಕನ್ಗುನ್ಯಾ, ಮಲೇರಿಯಾ ಸಾಂಕ್ರಾಮಿಕ ರೋಗಗಳ ಪ್ರಕರಣಗಳು ಹೆಚ್ಚಳವಾಗುತ್ತಿವೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸದ್ಯ ಮಳೆ ಬರುತ್ತಿದ್ದು, ನೀರು ನಿಲ್ಲುವ ಮತ್ತು ಸಂಗ್ರಹಗಾರಗಳಿಂದಾಗಿ ಡೆಂಗ್ಯೂ ಪ್ರಕರಣಗಳಲ್ಲಿ ಅಧಿಕ ಏರಿಕೆ ಕಾಣುತ್ತಿದೆ ಎಂದು ಆರೋಗ್ಯ ಇಲಾಖೆ ಅಭಿಪ್ರಾಯಪಟ್ಟಿದೆ.
ಡೆಂಗ್ಯೂ ಜ್ವರದ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು ಯಶಸ್ವಿಯಾಗುವಲ್ಲಿ ಸಾರ್ವಜನಿಕರ ಪಾತ್ರವು ಮಹತ್ವದ್ದಾಗಿದೆ ಎಂದು ಹೇಳಿದೆ.
ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ಏರಿಕೆ
ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಹುಟ್ಟಿಸಿದೆ. ಈ ವರ್ಷ ಸೆಪ್ಟೆಂಬರ್ 15 ರವರೆಗೆ ಬೆಂಗಳೂರಿನಲ್ಲಿ 9,147 ಡೆಂಗ್ಯೂ ಪ್ರಕರಣಗಳು ಕಂಡುಬಂದಿವೆ.
ಬೆಂಗಳೂರಿನಲ್ಲಿ ಸೆಪ್ಟೆಂಬರ್ ತಿಂಗಳು ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಜತೆಗೆ ನಿಫಾ ವೈರಸ್ನ ಆತಂಕವೂ ರಾಜ್ಯದಲ್ಲಿ ಮನೆಮಾಡಿದೆ. ಆಗಸ್ಟ್ನಲ್ಲಿ 2,374 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ. ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 20ರ ನಡುವೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 2,182 ಪ್ರಕರಣಗಳು ದಾಖಲಾಗಿವೆ.
ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಬೆಂಗಳೂರು ಪೂರ್ವ, ದಕ್ಷಿಣ ಮತ್ತು ಮಹದೇವಪುರ ವಲಯಗಳಲ್ಲಿ ಹೆಚ್ಚಿನ ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ.
ರಾಜ್ಯದಲ್ಲಿ 9,208 ಡೆಂಗ್ಯೂ ಪ್ರಕರಣ ದಾಖಲು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿಅಂಶಗಳ ಪ್ರಕಾರ, “ಕರ್ನಾಟಕದಲ್ಲಿ ಜನವರಿ 1 ರಿಂದ ಸೆಪ್ಟೆಂಬರ್ 19 ರವರೆಗೆ 9,208 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 5,220 ಪ್ರಕರಣಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ಪತ್ತೆಯಾಗಿವೆ. ಮೈಸೂರು ಮತ್ತು ಉಡುಪಿ ಜಿಲ್ಲೆಗಳು ಎರಡನೇ ಮತ್ತು ಮೂರನೇ ಅತಿ ಹೆಚ್ಚು ಡೆಂಗ್ಯೂ ಹರಡುವ ಜಿಲ್ಲೆಗಳಾಗಿವೆ” ಎಂದು ತಿಳಿಸಿದೆ.
“ಆಗಸ್ಟ್ನಲ್ಲಿ ಡೆಂಗ್ಯೂ ಪಾಸಿಟಿವಿಟಿ ದರ 43% ಇತ್ತು. ಇದೀಗ, ಸೆಪ್ಟೆಂಬರ್ನಲ್ಲಿ 13% ಕ್ಕೆ ಇಳಿದಿದೆ. ಡೆಂಗ್ಯೂ ಟೆಸ್ಟ್ ಮಾಡಿಸಿದವರ ಒಟ್ಟು ಸಂಖ್ಯೆಗೆ ಹೋಲಿಸಿದರೆ ಡೆಂಗ್ಯೂ ಸೋಂಕು ದೃಢಪಟ್ಟವರ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ” ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ತ್ರಿಲೋಕಚಂದ್ರ ಹೇಳಿದ್ದಾರೆ.
ಬೆಂಗಳೂರನ್ನು ಹೊರತುಪಡಿಸಿ ಕೊಡಗು, ಬೀದರ್, ತುಮಕೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಡೆಂಗ್ಯೂ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದೆ.
ಡೆಂಗ್ಯೂ ಜ್ವರ
ಈಡಿಸ್ ಸೊಳ್ಳೆ ಕಚ್ಚುವುದರಿಂದ ಡೆಂಗ್ಯೂ ಜ್ವರ ಬರುತ್ತದೆ. ಇದು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈಡಿಸ್ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಸೊಳ್ಳೆ ಕಚ್ಚಿದ 5-7 ದಿನಗಳಲ್ಲಿ ವ್ಯಕ್ತಿಗೆ ರೋಗದ ಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭವಾಗುತ್ತದೆ.
ರೋಗದ ಲಕ್ಷಣಗಳು
ಇದ್ದಕ್ಕಿದಂತೆ ವಿಪರೀತ ಜ್ವರ, ಕಣ್ಣಿನ ಗುಡ್ಡೆಗಳ ಹಿಂಭಾಗದಲ್ಲಿ ನೋವು, ತೀವ್ರ ತಲೆನೋವು, ಮೈ-ಕೈ ಮತ್ತು ಕೀಲು ನೋವು, ವಾಕರಿಕೆ ವಾಂತಿ ಜತೆಗೆ ತೀವ್ರ ಹೊಟ್ಟೆ ನೋವು, ಬಾಯಿ, ಮೂಗು & ವಸಡುಗಳಲ್ಲಿ ರಕ್ತಸ್ರಾವ, ಚರ್ಮದ ಮೇಲೆ ಅಲ್ಲಲ್ಲಿ ಕೆಂಪಾದ ಗಂಧೆಗಳು, ಕಪ್ಪು ಬಣ್ಣದ ಮಲ ವಿಸರ್ಜನೆ, ವಿಪರೀತ ಬಾಯಾರಿಕೆ, ತಣ್ಣನೆಯ ಬಿಳಿಚಿದ ಚರ್ಮ, ಜ್ಞಾನ ತಪ್ಪುವುದು, ರಕ್ತದ ಒತ್ತಡದ ಕುಸಿತ ಹಾಗೂ ನಾಡಿಬಡಿತದ ಕುಸಿತ ಇವು ಡೆಂಗ್ಯೂ ರೋಗದ ಲಕ್ಷಣಗಳಾಗಿವೆ.
“ಡೆಂಗ್ಯೂ ಜ್ವರಕ್ಕೆ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ. ಆದರೆ, ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆಯನ್ನು ನೀಡಲಾಗುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆಯನ್ನು ಪಡೆಯದಿದ್ದಲ್ಲಿ ರೋಗ ಲಕ್ಷಣಗಳು ಉಲ್ಬಣಗೊಂಡು ಡೆಂಗ್ಯೂ ರಕ್ತ ಸ್ರಾವ ಜ್ವರ (Dengue Hemorrhagic Fever – DHF) ಹಾಗೂ ಡೆಂಗ್ಯೂ ಆಘಾತ ಜ್ವರ (Dengue Shock Syndrome – DSS) ದಿಂದ ಸಾವು ಸಂಭವಿಸಬಹುದು. ಹಾಗಾಗಿ, ಡೆಂಗ್ಯೂ ಜ್ವರದ ಲಕ್ಷಣಗಳು ಕಂಡುಬಂದ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆಯಬೇಕು” ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಚಿಕನ್ಗುನ್ಯ
ಚಿಕನ್ಗುನ್ಯ ಸೋಂಕಿತ ಈಡಿಸ್ ಜಾತಿಯ ಸೊಳ್ಳೆಗಳು ಕಚ್ಚುವುದರಿಂದ ಬರುತ್ತದೆ. ಈ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಆದರೆ ಚಿಕನ್ಗುನ್ಯ ಮಾರಣಾಂತಿಕವಲ್ಲ.
ರೋಗದ ಲಕ್ಷಣಗಳು
ಇದ್ದಕ್ಕಿದ್ದಂತೆ ಜ್ವರ, ಕೀಲುಗಳಲ್ಲಿ ತೀವ್ರವಾದ ನೋವು ಮತ್ತು ಊತ ಕಾಣಿಸಿಕೊಳ್ಳುವುದು ಇವು ಚಿಕನ್ಗುನ್ಯದ ಲಕ್ಷಣಗಳಾಗಿವೆ.
“ಚಿಕನ್ಗುನ್ಯ ಸೋಂಕಿಗೆ ನಿರ್ದಿಷ್ಟವಾದ ಚಿಕಿತ್ಸೆ ಇಲ್ಲ. ಆದರೆ, ರೋಗ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುತ್ತದೆ. ಯಾವುದೇ ಜ್ವರವಿರಲಿ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕು. ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ರಕ್ತಪರೀಕ್ಷೆ ಹಾಗೂ ಚಿಕಿತ್ಸೆ ಮಾಡಲಾಗುತ್ತದೆ” ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ; ಸಮಸ್ಯೆ ಹೇಳಿಕೊಳ್ಳಿ
ಈಡಿಸ್ ಸೊಳ್ಳೆಗಳ ಉತ್ಪತ್ತಿ ತಾಣಗಳು
ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಸೊಳ್ಳೆಗಳು ಮನೆಗಳಲ್ಲಿನ ನೀರು ಶೇಖರಣಾ ಸಂಗ್ರಾಹಕಗಳಾದ, ಸಿಮೆಂಟ್ ತೊಟ್ಟಿಗಳು, ಬ್ಯಾರೆಲ್, ಡ್ರಂ, ಹೂ ಕುಂಡಗಳ ಕೆಳಗಿನ ತಟ್ಟೆಗಳು, ಏರ್-ಕೂಲರ್, ರೆಫ್ರಿಜರೇಟರ್ನ ಡಿ-ಫ್ರಾಸ್ಟ್ ಟ್ರೇ (De-frost Tray)ಗಳಲ್ಲಿ ಹಾಗೂ ಮನೆಯ ಸುತ್ತ-ಮುತ್ತಲಿನ ಪರಿಸರದಲ್ಲಿ ಬಿಸಾಡಿದ ಒಡೆದ ಬಾಟಲಿ, ಟೈರು, ಪ್ಲಾಸ್ಟಿಕ್ ಗ್ಲಾಸ್, ಎಳನೀರಿನ ಚಿಪ್ಪು ಹಾಗೂ ಇತರ ಘನತ್ಯಾಜ್ಯ ವಸ್ತುಗಳಲ್ಲಿ ಸಂಗ್ರಹವಾದ ಮಳೆಯ ನೀರಿನಲ್ಲಿ ಈಡಿಸ್ ಸೊಳ್ಳೆಗಳು ಹೇರಳವಾಗಿ ಉತ್ಪತ್ತಿಯಾಗುತ್ತವೆ.
ಈಡಿಸ್ ಸೊಳ್ಳೆ ಉತ್ತತ್ತಿಯಾಗದಿರಲು ಏನು ಮಾಡಬೇಕು?
- ಮನೆಯಲ್ಲಿರುವ ಎಲ್ಲ ನೀರಿನ ಸಂಗ್ರಾಹಕಗಳು ಮತ್ತು ಮೇಲ್ಬಾವಣಿಯಲ್ಲಿರುವ ತೊಟ್ಟಿಯ ನೀರನ್ನು ಕನಿಷ್ಠ ವಾರಕ್ಕೊಮ್ಮೆ ಖಾಲಿ ಮಾಡಿ, ಉಜ್ಜಿ ತೊಳೆದು, ಒಣಗಿಸಿ ನೀರನ್ನು ಮತ್ತೆ ತುಂಬಿಸಿ ಭದ್ರವಾಗಿ ಮುಚ್ಚಳಿಕೆಯಿಂದ ಮುಚ್ಚುವುದು.
- ಮನೆಯ ಸುತ್ತ-ಮುತ್ತಲಿನ ಪರಿಸರದಲ್ಲಿನ ಒಡೆದ ಬಾಟಲಿ, ಟಿನ್, ಟೈರು ಇತ್ಯಾದಿ ಘನತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರವಹಿಸುವುದು.
- ಘನತ್ಯಾಜ್ಯ ವಸ್ತುಗಳನ್ನು ಬೋರಲಾಗಿಡುವುದು ಅಥವಾ ಶೀಘ್ರವಾಗಿ ಸೂಕ್ತ ವಿಲೇವಾರಿ ಮಾಡಬೇಕು.
- ಏರ್ ಕೂಲರ್ಗಳಲ್ಲಿ ನೀರನ್ನು ಕನಿಷ್ಠ ವಾರಕ್ಕೊಮ್ಮೆ ಬದಲಾಯಿಸಬೇಕು.
- ಯಾವಾಗಲೂ ಮೈ ತುಂಬಾ ಬಟ್ಟೆ ಧರಿಸಬೇಕು.
- ಹಗಲು ಹೊತ್ತಿನಲ್ಲಿ ನಿದ್ರಿಸುವ/ವಿಶ್ರಾಂತಿ ಪಡೆಯುವ ಗರ್ಭಿಣಿಯರು, ಮಕ್ಕಳು ಮತ್ತು ವಯಸ್ಸಾದವರು ತಪ್ಪದೆ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು.
- ಡೆಂಗ್ಯೂ ಜ್ವರ ಪೀಡಿತರೂ ಸಹ ತಪ್ಪದೆ ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು.
- ಜ್ವರ ಪೀಡಿತರು ಸಾಕಷ್ಟು ದ್ರವರೂಪದ ಆಹಾರಗಳನ್ನು ಸೇವಿಸುವುದು ಹಾಗೂ ಅಗತ್ಯ ವಿಶ್ರಾಂತಿಯನ್ನು ಪಡೆಯಬೇಕು.
- ಮನೆಯ ಕಿಟಕಿ ಬಾಗಿಲುಗಳಿಗೆ ಸೊಳ್ಳೆ ನಿರೋಧಕ ಜಾಲರಿಗಳನ್ನು ಅಳವಡಿಸಬೇಕು.
- ಈಡಿಸ್ ಲಾರ್ವಾ ಸಮೀಕ್ಷೆ ಹಾಗೂ ಉತ್ಪತ್ತಿತಾಣ ಸಮೀಕ್ಷೆಗೆಂದು ಮನೆ ಭೇಟಿ ನೀಡುವ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಸ್ವಯಂಸೇವಕರು ನೀಡುವ ಸಲಹೆ – ಸೂಚನೆಗಳನ್ನು ಪಾಲಿಸಬೇಕು.
- ಶಾಲಾ – ಕಾಲೇಜು, ಅಂಗನವಾಡಿ, ಸರ್ಕಾರಿ / ಖಾಸಗಿ ಕಚೇರಿಗಳು, ಬಸ್ ಡಿಪೋ ಇತ್ಯಾದಿಗಳಲ್ಲಿಯೂ – ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡುವುದು ಅಗತ್ಯವಾಗಿದೆ.
ಏನು ಮಾಡಬಾರದು?
- ಡೆಂಗ್ಯೂ ಜ್ವರದ ಲಕ್ಷಣಗಳು ಕಂಡು ಬಂದಲ್ಲಿ ಸ್ವಯಂ ವೈದ್ಯ ಪದ್ಧತಿಯನ್ನು ಪಾಲಿಸದೆ, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯಿರಿ.
- ಡೆಂಗ್ಯೂ ಜ್ವರದ ಲಕ್ಷಣಗಳಿದ್ದಲ್ಲಿ ಬ್ರೂಫಿನ್ ಅಥವಾ ಇತರ ನೋವು ನಿವಾರಕಗಳನ್ನು ಸೇವಿಸಬಾರದು. ಇದರಿಂದ ರಕ್ತಸ್ರಾವವಾಗುವ ಸಾಧ್ಯತೆಗಳಿವೆ.