ಕೇಂದ್ರ ಬಿಜೆಪಿ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ನಾಯಕರಿಗೆ ರೈತರ, ಸ್ತ್ರೀ ಶಕ್ತಿ ಸಂಘಗಳ, ಮಹಿಳೆಯರ ಸಾಲ ಮನ್ನಾ ಮಾಡುವ ನೈತಿಕತೆ ಇಲ್ಲ. ರೈತರ, ಮಹಿಳೆಯರ ಮತಗಳಿಂದ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ರೀಮಂತರ ಪರವಾದ ಆಡಳಿತ ನಡೆಸಿ ಬಡವರಿಗೆ, ಕಾರ್ಮಿಕ ವರ್ಗಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಯು.ಬಸವರಾಜು ಆಡಳಿತರೂಢ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ವಾಗ್ದಾಳಿ ನಡೆಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಗೂಳೂರು ವೃತ್ತದಲ್ಲಿ ಗುರುವಾರ ಆಯೋಜಿಸಿದ್ದ ಸಿಪಿಐಎಂ 18ನೇ ಜಿಲ್ಲಾ ಸಮ್ಮೇಳನದ ಬಹಿರಂಗ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದ ಜನರು ಬಿಜೆಪಿಯನ್ನು ತಿರಸ್ಕರಿಸಿದ್ದರೂ ಎನ್ಡಿಎ ಮೈತ್ರಿಕೂಟದ ಮೂಲಕ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದು ಬಂಡವಾಳದಾರರ ಪರವಾಗಿ ಅಧಿಕಾರ ನಡೆಸುತ್ತಿದ್ದು, ಬಿಜೆಪಿ ಸರ್ಕಾರ ಮತ್ತೆ ಹಳೇ ತಪ್ಪುಗಳನ್ನು ಮುಂದುವರಿಸುತ್ತಿದೆ. ಕಳೆದ ಮೂರು ವರ್ಷಗಳಿಂದ ಕರ್ನಾಟಕ ರಾಜ್ಯದ ಜನತೆ ಕೋವಿಡ್, ಅತಿವೃಷ್ಠಿ, ಅನಾವೃಷ್ಠಿಗಳಂತ ಸಮಸ್ಯೆಗಳಿಂದ ಬಳಲುತ್ತಿದ್ದು ಪರಿಹಾರ ನೀಡಬೇಕಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಜನರಿಗೆ ಪರಿಹಾರ ನೀಡುತ್ತಿಲ್ಲ. ಸಾಲದ ಮೇಲೆ ಸಾಲ ಮಾಡಿ ಬಜೆಟ್ ಮಂಡನೆ ಮಾಡಿ ಬಂಡವಾಳಶಾಹಿಗಳ ಪರ ಸರ್ಕಾರ ನಿಂತಿದೆ. ಇವೆಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗಬೇಕಾದರೆ ಬಡವರ, ಕೂಲಿ ಕಾರ್ಮಿಕರ, ರೈತರ ಪರ ನಿಲ್ಲುವ ಸಿಪಿಐ(ಎಂ) ಪಕ್ಷ ಅಧಿಕಾರಕ್ಕೆ ಬರಬೇಕಾಗಿದೆ ಎಂದರು.

ಸಿಪಿಐ(ಎಂ) ಪಾಲಿಟ್ ಬ್ಯೂರೋ ಸದಸ್ಯ ಬಿ.ವಿ.ರಾಘವಲು ಮಾತನಾಡಿ, ಕೈಗಾರಿಕೆ ಸ್ಥಾಪನೆ, ಕೃಷಿ, ರೈತರ ಸಮಸ್ಯೆ, ಕೂಲಿ ಕಾರ್ಮಿಕರ ನಿರುದ್ಯೋಗ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟ ಮಾಡುವ ಏಕೈಕ ಪಕ್ಷ ಸಿಪಿಎಂ ಪಕ್ಷ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ದೇಶ ಮತ್ತು ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿರುವ ಜನ ವಿರೋಧಿ ಬಿಜೆಪಿ, ಕಾಂಗ್ರೆಸ್ ಸರ್ಕಾರಕ್ಕೆ ಬುದ್ದಿ ಕಲಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಕೊಡಬೇಕಾದರೆ ಪ್ರತಿಯೊಬ್ಬರು ಸಿಪಿಎಂ ಪಕ್ಷವನ್ನು ಗಟ್ಟಿಗೊಳಿಸಬೇಕಾಗಿದೆ ಎಂದು ಮನವಿ ಮಾಡಿದರು.

ಆಂಧ್ರಪ್ರದೇಶದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಬಣ್ಣ ಬಣ್ಣದ ಬಟ್ಟೆ ಧರಿಸಿ ನಟನೆ ಮಾಡುತ್ತಿದ್ದ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಇಂದು ಜನರ ಸಮಸ್ಯೆಗಳಿಗೆ ಪರಿಹಾರ ದೊರಕಿಸುವ ಕೆಲಸ ಬಿಟ್ಟು ಸನಾತನ, ಹಿಂದೂ ಧರ್ಮದ ಪ್ರಚಾರಕನಾಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ರಾಜಕಾರಣಿಗಳಿಂದ ಜನರ ಸಮಸ್ಯೆಗಳಿಗೆ ಹೇಗೆ ಪರಿಹಾರ ಸಿಗಲಿದೆ ಎಂದು ಪ್ರಶ್ನಿಸಿದರು.
ಬಹಿರಂಗ ಸಭೆಗೂ ಮುನ್ನ ಬಾಗೇಪಲ್ಲಿ ಪಟ್ಟಣದ ಸುಂದರಯ್ಯ ಭವನದ ಮುಂಭಾಗದಿಂದ ಗೂಳೂರು ವೃತ್ತದವರೆಗೆ ನೂರಾರು ಮಂದಿ ಸಿಪಿಐಎಂ ಕಾರ್ಯಕರ್ತರು ಬೃಹತ್ ಮೆರವಣಿಗೆಯನ್ನು ನಡೆಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ದ ದಿಕ್ಕಾರ ಕೂಗಿದರು.

ಇದನ್ನೂ ಓದಿ : ಚಿಕ್ಕಬಳ್ಳಾಪುರ | ಕನ್ನಡ ಜ್ಯೋತಿ ರಥಯಾತ್ರೆಗೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಚಾಲನೆ
ಸಮ್ಮೇಳನದಲ್ಲಿ ಸಿಪಿಐ(ಎಂ) ಮುಖಂಡರಾದ ಕೆ.ಎನ್.ಉಮೇಶ್, ಜಿ.ಸಿ.ಬಯ್ಯಾರೆಡ್ಡಿ, ಡಾ.ಅನಿಲ್ ಕುಮಾರ್, ಎಂ.ಪಿ.ಮುನಿ ವೆಂಕಟಪ್ಪ, ಎಂ.ಎನ್.ರಘುರಾಮರೆಡ್ಡಿ, ಸಾವಿತ್ರಮ್ಮ, ಚನ್ನರಾಯಪ್ಪ, ಓಬಳರಾಜು, ಜಯರಾಮರೆಡ್ಡಿ, ಕೆ.ನಾಗರಾಜು, ಸಿದ್ದಗಂಗಪ್ಪ, ವಾಲ್ಮೀಕಿ ಅಶ್ವತ್ಥಪ್ಪ, ಎಸ್ಎಫ್ಐ ಸೋಮಶೇಖರ್, ಕೃಷ್ಣಪ್ಪ, ಮುನಿಯಪ್ಪ ಮತ್ತಿತರರು ಇದ್ದರು.