ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾಗಿದ್ದ ಬಿ ಕೆ ಹರಿಪ್ರಸಾದ್ ಅವರು ತಮಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಬಿ ಕೆ ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತ ಎನ್ನಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಇದರಿಂದ ಬೇಸರಗೊಂಡಿರುವ ಅವರು ಶನಿವಾರ ಸಂಪುಟ ವಿಸ್ತರಣೆಯಾದ ಕೂಡಲೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಆಪ್ತರ ಬಳಿ ಹೇಳಿಕೊಂಡಿದ್ದಾರೆ.
ಹೈಕಮಾಂಡ್ ಜೊತೆ ನೇರ ಸಂಪರ್ಕದಲ್ಲಿದ್ದ ಬಿ ಕೆ ಹರಿಪ್ರಸಾದ್ ಅವರಿಗೆ ಪಕ್ಷ ನಿಷ್ಠೆ, ಹಿರಿತನ ಹಾಗೂ ಈಡಿಗ ಸಮುದಾಯದ ಆಧಾರದ ಮೇಲೆ ಸಚಿವ ಸ್ಥಾನ ಸಿಗಲಿದೆ ಎಂಬ ಮಾತುಗಳು ಕಾಂಗ್ರೆಸ್ ಪಡಸಾಲೆಯಲ್ಲಿ ಹೆಚ್ಚು ಕೇಳಿಬಂದಿದ್ದವು. ಆದರೆ, ಹರಿಪ್ರಸಾದ್ ಸೇರ್ಪಡೆಗೆ ಸಿಎಂ ಸಿದ್ದರಾಮಯ್ಯ ಅವರು ವಿರೋಧ ವ್ಯಕ್ತಪಡಿಸಿ, ಮಾಜಿ ಸಿಎಂ ಎಸ್ ಬಂಗಾರಪ್ಪ ಅವರ ಮಗ ಮಧು ಬಂಗಾರಪ್ಪ ಅವರಿಗೆ ಹಠ ಹಿಡಿದು ಸಚಿವ ಸ್ಥಾನ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
ರಾಜೀನಾಮೆ ವಿಚಾರವಾಗಿ ಬಿ ಕೆ ಹರಿಪ್ರಸಾದ್ ಅವರನ್ನು ಈ ದಿನ.ಕಾಮ್ ಸಂಪರ್ಕಿಸಿದಾಗ “ಈ ಬಗ್ಗೆ ಆ ಮೇಲೆ ಮಾತನಾಡುವೆ” ಎಂದಷ್ಟೇ ಹೇಳಿದರು.
ಬಿ ಕೆ ಹರಿಪ್ರಸಾದ್ ಅವರ ರಾಜೀನಾಮೆ ನೀಡಲಿದ್ದಾರೆ ಎಂಬ ವಿಷಯ ಹೈಕಮಾಂಡ್ ತಲುಪಿದ್ದು, ಅವರನ್ನು ಮನವೊಲಿಸುವ ಸಾಧ್ಯತೆ ಹೆಚ್ಚಿದೆ. ಹೈಕಮಾಂಡ್ ಮಾತಿಗೆ ಕಟ್ಟುಬಿದ್ದು, ಹರಿಪ್ರಸಾದ್ ಅವರು ಪಕ್ಷದಲ್ಲೇ ಉಳಿಯುತ್ತಾರಾ ಎಂಬುದು ಕಾದುನೋಡಬೇಕು.