ಮೈಸೂರು ಜಿಲ್ಲೆ, ಕೃಷ್ಣರಾಜ ನಗರದಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ₹404 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ₹109 ಕೋಟಿ ರೂಪಾಯಿಗಳ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಸೇರಿ ಒಟ್ಟು ₹513 ಕೋಟಿ ರೂಪಾಯಿಗಳ ವೆಚ್ಚದ ಕಾಮಗಾರಿಗಳಿಗೆ ಕಳೆದ ಶುಕ್ರವಾರ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಸಣ್ಣ ನೀರಾವರಿಗೆ ₹197 ಕೋಟಿ ರೂಪಾಯಿಗಳ ವೆಚ್ಚದ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಜೊತೆಗೆ ಆರೋಗ್ಯ ಇಲಾಖೆಯಡಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ಇದೇ ಸಂದರ್ಭದಲ್ಲಿ ನೆರವೇರಿಸಿದರು. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದರಿಂದ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದ ಬಳಿ ಹಣವಿಲ್ಲ ಎಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಟೀಕಿಸುತ್ತಿವೆ. ಪಾಪರ್ ಸರ್ಕಾರವಾಗಿದ್ದರೆ ₹513 ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿತ್ತೇ? ಬಿಜೆಪಿ ಮತ್ತು ಜೆಡಿಎಸ್ ಅಧಿಕಾರದಲ್ಲಿದ್ದಾಗ ಏನೂ ಮಾಡಲಿಲ್ಲ. ಆದರೆ, ಟೀಕೆ ಮಾಡುವುದನ್ನು ಹಾಗೂ ಸುಳ್ಳು ಹೇಳುವುದನ್ನು ಮಾತ್ರ ಬಿಡುವುದಿಲ್ಲ ಎಂದರು.
ಪಂಚ ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಜಾರಿ ಮಾಡಿದೆ. ಜನರು ಈ ಯೋಜನೆಗಳ ಸದುಪಯೋಗ ಆಗುತ್ತಿರುವಾಗ ಜಾರಿ ಮಾಡಿಲ್ಲ ಎಂದು ಹೇಗೆ ಹೇಳುತ್ತಾರೆ? ರಾಜ್ಯದ 3.50 ಕೋಟಿ ಮಹಿಳೆಯರು ಯಾವುದೇ ಬೇಧ ಭಾವವಿಲ್ಲದೇ ಶಕ್ತಿ ಯೋಜನೆಯನ್ನು ಬಳಸಿಕೊಂಡಿದ್ದಾರೆ. ಬಿಜೆಪಿ ಸರ್ಕಾರ ಇಂಥ ಯೋಜನೆಯನ್ನು ಜಾರಿ ಮಾಡಿತ್ತೇ? ಈವರೆಗೆ 500 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಓಡಾಡಿದ್ದಾರೆ. ಪ್ರತಿ ದಿನ 50-60 ಲಕ್ಷ ಮಹಿಳೆಯರು ಇದರ ಪ್ರಯೋಜನ ಪಡೆಯುತ್ತಿದ್ದಾರೆ.
ಜಿಎಸ್ಟಿ ಸಂಗ್ರಹಣೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಮುಂದಿನ ವರ್ಷ ನಾವು ಮೊದಲ ಸ್ಥಾನಕ್ಕೆ ಬರುವ ಪ್ರಯತ್ನ ಮಾಡುತ್ತೇವೆ. ಕಬಿನಿ ಸೇತುವೆಗೆ ₹25 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಾಗಿದೆ. ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆಯನ್ನು 40 ವರ್ಷಗಳ ಅವಧಿಗೆ ಗುತ್ತಿಗೆ ನೀಡಲಾಗಿದೆ. ಸಾಗರಕಟ್ಟೆ ಸೇತುವೆ, ರಸ್ತೆ ಅಗಲೀಕರಣ ಕಾಮಗಾರಿಗಳಿಗೆ ಅನುದಾನ ಒದಗಿಸಲಾಗಿದೆ. ಎಲ್ಲರೂ ಒಂದೇ ತಾಯಿಯ ಮಕ್ಕಳಂತೆ ಇರಬೇಕೆಂಬುದು ಸರ್ಕಾರದ ಆಶಯ.
ಬಿಜೆಪಿಯವರು ತಮ್ಮ ಅಧಿಕಾರಾವಧಿಯಲ್ಲಿ ಯಾವ ಕೆಲಸವನ್ನೂ ಮಾಡದೇ, ಕಾಂಗ್ರೆಸ್ ಸರ್ಕಾರದ ಯಶಸ್ಸಿಗೆ ಮರುಗುತ್ತಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಶಕ್ತಿ ಯೋಜನೆ, ನಂತರ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳನ್ನು ಜಾರಿಗೆ ತರಲಾಯಿತು. ತದನಂತರ ಜನವರಿ 2024 ರಲ್ಲಿ ಯುವನಿಧಿಯನ್ನು ಜಾರಿಗೊಳಿಸಲಾಗಿದ್ದು, ಇದಕ್ಕಾಗಿ ₹52,000 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ.

ಇದುವರೆಗೆ ಗ್ಯಾರಂಟಿಗಳಿಗೆ ₹90 ಸಾವಿರ ಕೋಟಿ ರೂಪಾಯಿಗಳು ವೆಚ್ಚವಾಗಿದೆ. ₹60 ಸಾವಿರ ಕೋಟಿ ರೂಪಾಯಿಗಳು ವಿವಿಧ ಪಿಂಚಣಿಗಳಿಗೆ, 7ನೇ ವೇತನ ಆಯೋಗ, ವಿದ್ಯುತ್ ಸಬ್ಸಿಡಿ ಸೇರಿದಂತೆ ವಿವಿಧ ಜನೋಪಯೋಗಿ ಯೋಜನೆಗಳಿಗೆ ಒಟ್ಟು ₹1.12 ಲಕ್ಷ ಕೋಟಿಗಳನ್ನು ವೆಚ್ಚ ಮಾಡಲಾಗಿದೆ. ₹2 .06 ಲಕ್ಷ ಕೋಟಿ ರೂಪಾಯಿ ಸವಲತ್ತುಗಳನ್ನು ಕೃಷಿಯ ವಿವಿಧ ಯೋಜನೆಗಳಿಗೆ ನೀಡಲಾಗಿದೆ. ಮೈಸೂರು ಭಾಗದ ಕೃಷಿಕರು ಕೃಷಿಯನ್ನು ವೈಜ್ಞಾನಿಕವಾಗಿ ಮಾಡಬೇಕು. ಉತ್ತಮ ಯಂತ್ರೋಪಕರಣ, ಬೀಜ, ಗೊಬ್ಬರ ನೀಡಲಾಗುತ್ತಿದೆ. ರೈತರು ಯಂತ್ರೋಪಕರಣ ಬಳಸಿ, ಉತ್ತಮ ರೀತಿಯಲ್ಲಿ ಬೆಳೆ ಬೆಳೆಯಬೇಕು.
ಜನಾಕ್ರೋಶ ಕೇವಲ ಬಿಜೆಪಿಯ ರಾಜಕೀಯದಲ್ಲಿ ಇದೆಯೇ ಹೊರತು, ಜನರಲ್ಲಿ ಆಕ್ರೋಶ ಇಲ್ಲ. ನುಡಿದಂತೆ ನಡೆಯುವ ನಮ್ಮ ಸರ್ಕಾರದ ಮೇಲೆ ಜನರು ತಮ್ಮ ವಿಶ್ವಾಸವನ್ನು ತೋರಿದ್ದಾರೆ. ಹಿಂದೆ ನಮ್ಮ ಸರ್ಕಾರ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಪ್ರಸ್ತುತ ನಮ್ಮ ಸರ್ಕಾರ 593 ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ತಿಳಿಸಿದ್ದು, 242 ಭರವಸೆಗಳನ್ನು ಈಡೇರಿಸಿದ್ದೇವೆ. ನಮ್ಮ ಸರ್ಕಾರ ಇನ್ನುಳಿದ ವರ್ಷಗಳಲ್ಲಿ ಉಳಿದ ಎಲ್ಲ ಭರವಸೆಗಳನ್ನೂ ಈಡೇರಿಸಲಿದೆ.
ಬಿಜೆಪಿಯವರು ತಮ್ಮ ಅಧಿಕಾರಾವಧಿಯಲ್ಲಿ ಹಣ ಲೂಟಿ ಹೊಡೆದರು. ₹2,70,000 ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಹಣವಿಲ್ಲದೇ ಮಂಜೂರಾತಿ ನೀಡಿದರು. ಬಿಜೆಪಿಯ ಬಸವರಾಜ ಬೊಮ್ಮಾಯಿಯವರು ತಮ್ಮ ಅವಧಿಯಲ್ಲಿ ₹1,66,000 ಕೋಟಿ ರೂಪಾಯಿ ಯೋಜನೆಗಳಿಗೆ ಹಣವಿಲ್ಲದೇ ಮಂಜೂರು ಮಾಡಿದ ಫಲವಾಗಿ ನಮ್ಮ ಸರ್ಕಾರವು ಬಾಕಿ ಮೊತ್ತವನ್ನು ಪಾವತಿಸುತ್ತಿದೆ.
ಹಾಲಿನ ದರ ಏರಿಕೆಯಾಗಿದ್ದು, ಹೆಚ್ಚಿನ ಮೊತ್ತ ರೈತರಿಗೆ ತಲುಪುತ್ತಿದೆಯೇ ಹೊರತು, ಸರ್ಕಾರದ ಬೊಕ್ಕಸಕ್ಕೆ ಬರುತ್ತಿಲ್ಲ. ನೆರೆ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕದಲ್ಲಿ ಹಾಲಿನ ದರ ಕಡಿಮೆಯಿದೆ. ಬಿಜೆಪಿಯವರು ಕೇಂದ್ರದಲ್ಲಿ ಹೆಚ್ಚಿಸಿರುವ ದರಗಳ ಬಗ್ಗೆ ಮಾತನಾಡುವುದಿಲ್ಲ ಎಂದು ಕುಟುಕಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ‘ ಬಸವ ಚರಿತ್ರೆ ‘ ಎಂಬುದು ಪ್ರಜಾಪ್ರಭುತ್ವ ಸ್ಥಾಪನೆಯ ಹೋರಾಟವಾಗಿದೆ : ಸಚಿವ ಡಾ. ಹೆಚ್. ಸಿ. ಮಹದೇವಪ್ಪ
ಕಾರ್ಯಕ್ರಮದಲ್ಲಿ ಸಚಿವರಾದ ಕೆ. ವೆಂಕಟೇಶ್, ಚೆಲುವರಾಯ ಸ್ವಾಮಿ, ದಿನೇಶ್ ಗುಂಡೂರಾವ್, ಶಾಸಕರಾದ ಡಿ. ರವಿಶಂಕರ್, ಅನಿಲ್ ಚಿಕ್ಕ ಮಾಧು, ಡಾ. ಯತಿಂದ್ರ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಇದ್ದರು.