ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚಾಪೋಲಿ ಘಟ್ಟದ ಬಳಿ ಕಾರವಾರ–ಜೋಯಿಡಾ ರಸ್ತೆಯಲ್ಲಿ ಎರಡು ರಾಜ್ಯ ಸಾರಿಗೆ ಬಸ್ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಮಾಹಿತಿಯ ಪ್ರಕಾರ, ಬೆಳಗಾವಿಯಿಂದ ಅಂಕೋಲಾ ಕಡೆಗೆ ಸಂಚರಿಸುತ್ತಿದ್ದ ಬಸ್ ಹಾಗೂ ಉಳವಿಯಿಂದ ಇಚಲಕರಂಜಿ ಕಡೆಗೆ ತೆರಳುತ್ತಿದ್ದ ಮತ್ತೊಂದು ಬಸ್ ಚಾಪೋಲಿ ಘಟ್ಟ ಪ್ರದೇಶದಲ್ಲಿ ಪರಸ್ಪರ ಡಿಕ್ಕಿ ಹೊಡೆದಿವೆ. ಅಪಘಾತದ ವೇಳೆ ಎರಡೂ ಬಸ್ಗಳಲ್ಲಿ ಒಟ್ಟು 150ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಗಾಯಗೊಂಡವರಲ್ಲಿ ಜೋಯಿಡಾದ ಬಿಜಿವಿಎಸ್ ಪಿಯು ಕಾಲೇಜು ಹಾಗೂ ದಾಂಡೇಲಿ ಭಾಗದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳೂ ಸೇರಿದ್ದಾರೆ ಎನ್ನಲಾಗಿದೆ. ಅಪಘಾತದ ತಕ್ಷಣ ಸ್ಥಳೀಯರು ಹಾಗೂ ಅಧಿಕಾರಿಗಳು ರಕ್ಷಣಾ ಕಾರ್ಯ ಕೈಗೊಂಡು ಗಾಯಾಳುಗಳನ್ನು ಜೋಯಿಡಾ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಸಚಿವರ ಹೆಜ್ಜೆ ಗುರುತು ಕಾಣದ ಉತ್ತರ ಕನ್ನಡ: ಆಡಳಿತದ ಅಂತರವೇ ಅಭಿವೃದ್ಧಿಗೆ ಅಡ್ಡಿ
This video cannot be played in your browser. Open the video directly
ಗಂಭೀರವಾಗಿ ಗಾಯಗೊಂಡ ಕೆಲವರನ್ನು ಹೆಚ್ಚಿನ ಚಿಕಿತ್ಸೆಗೆ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ಹಾಗೂ ಧಾರವಾಡದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಮಂಜುನಾಥ ಮುನ್ನೊಳ್ಳಿ, ಪೊಲೀಸ್ ಉಪನಿರೀಕ್ಷಕ ಜಗದೀಶ ಎನ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭೇಟಿ ನೀಡಿ ನಂತರ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ
ಈ ಕುರಿತು ಜೋಯಿಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರವಾದ ಕಾರಣ ಏನು ಎಂಬುದು ತನಿಖೆ ನಂತರ ತಿಳಿದು ಬರಲಿದೆ.





