ಕರ್ನಾಟಕ ಸರ್ಕಾರದ ವಿಧಾನ ಪರಿಷತ್ಗೆ ನೂತನವಾಗಿ ಚುನಾಯಿತರಾದ ಐವನ್ ಡಿಸೋಜಾ ಅವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮವನ್ನು ಜುಲೈ 7 ರಂದು ಉಡುಪಿಯಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಗುರು ಫರ್ಡಿನಾಂಡ್ ಗೊನ್ಸಾಲ್ವಿಸ್ ಹೇಳಿದರು.
ಶುಕ್ರವಾರ ಉಡುಪಿ ಪ್ರೆಸ್ಕ್ಲಬ್ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜುಲೈ 7 ರಂದು ಸಂಜೆ 4 ಗಂಟೆಗೆ ಮಿಷನ್ ಕಾಂಪೌಂಡ್ನಲ್ಲಿರುವ ಬಾಸೆಲ್ ಮಿಷನ್ ಮೆಮೋರಿಯಲ್ ಆಡಿಟೋರಿಯಂನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ” ಎಂದು ತಿಳಿಸಿದರು.
ಉಡುಪಿ ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಜೆರಾಲ್ಡ್ ಐಸಾಕ್ ಲೋಬೋ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಚಿವಾರದ ವಿನಯಕುಮಾರ್ ಸೊರಕೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಫಾದರ್ ಐವನ್ ಸೋನ್ಸ್, ಫಾದರ್ ಎಂ.ಸಿ. ಮಥಾಯಿ, ಪಾಸ್ಟರ್ ಸೆಲ್ವ ಕುಮಾರ್, ರೆ.ವಿಜಯ್ ಹಾರ್ವಿನ್ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಸನ್ಮಾನ ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಫಾರ್ ಹ್ಯೂಮನ್ ರೈಟ್ಸ್, ಉಡುಪಿ, ಸಿಎಸ್ಐ, ಯುಬಿಎಂಸಿ, ಆರ್ಥೊಡಾಕ್ಸ್ ಸಿರಿಯನ್ ಚರ್ಚ್ಗಳು, ಕ್ಯಾಥೋಲಿಕ್ ಸಭಾ ಉಡುಪಿ ಪ್ರದೇಶ, ಉಡುಪಿ ಧರ್ಮಪ್ರಾಂತ್ಯದ ಕ್ಯಾಥೋಲಿಕ್ ಸ್ತ್ರೀ ಸಂಘಟನೆ, ಭಾರತೀಯ ಕ್ಯಾಥೋಲಿಕ್ ಯುವ ಸಂಚಾಲನ, ಹಾಗೂ ಉಡುಪಿ ಜಿಲ್ಲೆಯ ಸಮಾನ ಮನಸ್ಕ ಜನರು ಜಂಟಿಯಾಗಿ ಆಯೋಜಿಸಿರುತ್ತಾರೆ. ಅವರು ಎರಡನೇ ಬಾರಿಗೆ ವಿಧಾನಪರಿಷತ್ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವುದಕ್ಕೆ ಉಡುಪಿ ಜಿಲ್ಲೆಯ ಜನತೆ ಹಾಗೂ ಕ್ರೈಸ್ತ ಸಮುದಾಯ ವಿಶೇಷ ರೀತಿಯಲ್ಲಿ ಹರ್ಷ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಕ್ರೈಸ್ತ ಸಮುದಾಯವು ಐವನ್ ಡಿಸೋಜಾ ಅವರಿಗೆ ಅಭಿನಂದನೆ ಸಲ್ಲಿಸಲು ಮತ್ತು ಅವರಿಗೆ ಎಲ್ಲಾ ಯಶಸ್ಸನ್ನು ಬಯಸಲು ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದರು.
ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಫಾರ್ ಹ್ಯೂಮನ್ ರೈಟ್ಸ್ನ ಉಪಾಧ್ಯಕ್ಷರಾದ ಪ್ರಶಾಂತ್ ಜತ್ತನ್ನ ಮಾತನಾಡಿ, “ಪಂಚಾಯತಿ ಮತ್ತು ತಾಲ್ಲೂಕು-ಜಿಲ್ಲಾ ಪಂಚಾಯತ್ಗಳ ತಳಮಟ್ಟದಿಂದ ರಾಜಕೀಯದಲ್ಲಿ ಅಪಾರ ಅನುಭವ ಹೊಂದಿರುವ ಐವನ್ ಡಿಸೋಜ ಅವರು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಪಕ್ಷದ ವಿವಿಧ ಖಾತೆಗಳನ್ನು ನಿರ್ವಹಿಸಿದ್ದಾರೆ. ಅವರು ಎರಡು ಬಾರಿ ವಿಧಾನಸಭೆಗೆ ಸ್ಪರ್ಧಿಸಿದ್ದಾರೆ. ಅವರು 2014 ರಿಂದ 2020 ರವರೆಗೆ ವಿಧಾನ ಪರಿಷತ್ತಿನ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ” ಎಂದರು.
“ಈಗ ಅವರು ಎರಡನೇ ಬಾರಿಗೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದು, ಇದಕ್ಕಾಗಿ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಐವನ್ ಅವರು ಸತ್ಯ ಮತ್ತು ನ್ಯಾಯಕ್ಕಾಗಿ ಹೋರಾಟ ನಡೆಸಿದ್ದಾರೆ. ಹಲವಾರು ನಿರ್ಗತಿಕ-ಅಸ್ವಸ್ಥ ವ್ಯಕ್ತಿಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣವನ್ನು ನೀಡುವಲ್ಲಿ ನೆರವು ನೀಡಿದ್ದಾರೆ’ ಎಂದರು.
ಇದನ್ನು ಓದಿದ್ದೀರಾ? ಮಂಗಳೂರು | ಉದ್ಯಮಿಯ ಮನೆ ದರೋಡೆ ಪ್ರಕರಣ: 10 ಮಂದಿಯ ಬಂಧನ; ಲಾರಿ ಚಾಲಕನೇ ಸೂತ್ರಧಾರ!
ಸುದ್ದಿಗೋಷ್ಠಿಯಲ್ಲಿ ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಡೆನಿಸ್ ಡೆಸಾ, ಕ್ಯಾಥೋಲಿಕ್ ಸಭಾ ಉಡುಪಿ ಅಧ್ಯಕ್ಷ ಸಂತೋಷ್ ಕರ್ನೆಲಿಯೊ, ಕ್ರೈಸ್ತ ಮುಂದಾಳು ವೆರೋನಿಕಾ ಕರ್ನೆಲಿಯೋ ಉಪಸ್ಥಿತರಿದ್ದರು.