ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿದ ಬಳಿಕ 55 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ ಪ್ರಾಂಶುಪಾಲ ಶರಣಬಸಪ್ಪ ಪಾಟೀಲ್ ಮತ್ತು ವಾರ್ಡನ್ ರವಿ ವಾಲಿ ಅವರನ್ನು ಅಮಾನತುಗೊಳಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಆದೇಶ ಹೊರಡಿಸಿದೆ.
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕ ಶಿವಸ್ವಾಮಿ ಬಿ. (ಕೆಎಎಸ್) ಈ ಆದೇಶ ಹೊರಡಿಸಿದ್ದು, ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಸಂಬಂಧಿಸಿದ ಕರ್ತವ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂಬ ಪ್ರಾಥಮಿಕ ಪರಿಶೀಲನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳಿಗೆ ನೀಡುವ ಆಹಾರದ ಗುಣಮಟ್ಟವನ್ನು ಖಚಿತಪಡಿಸುವುದು ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು ಸಂಬಂಧಿತ ಅಧಿಕಾರಿಗಳ ಜವಾಬ್ದಾರಿಯಾಗಿತ್ತು. ಆದರೆ ಈ ಜವಾಬ್ದಾರಿಯಲ್ಲಿ ನಿರ್ಲಕ್ಷ್ಯ ತೋರಿದ ಪರಿಣಾಮ ಒಂದೇ ವೇಳೆ 55 ವಿದ್ಯಾರ್ಥಿಗಳು ಅಸ್ವಸ್ಥರಾಗುವಂತಹ ಗಂಭೀರ ಘಟನೆ ಸಂಭವಿಸಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಪ್ರಾಥಮಿಕ ತನಿಖೆಯಲ್ಲಿ ಕರ್ತವ್ಯಲೋಪದ ಲಕ್ಷಣಗಳು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಇಲಾಖಾ ಶಿಸ್ತು ವಿಚಾರಣೆ ಪೂರ್ಣಗೊಳ್ಳುವವರೆಗೆ ಇಬ್ಬರನ್ನೂ ಸೇವೆಯಿಂದ ಅಮಾನತುಗೊಳಿಸಲಾಗಿದೆ. ತನಿಖೆಯ ಅಂತಿಮ ವರದಿ ಆಧರಿಸಿ ಮುಂದಿನ ಆಡಳಿತಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.
ಇದನ್ನು ಓದಿದ್ದೀರಾ? ಕಲಬುರಗಿ | ಐರಾವತ, ಕೆಎಸ್ಆರ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಇಬ್ಬರು ಚಾಲಕರು ಸ್ಥಳದಲ್ಲಿಯೇ ಸಾವು!
ಈ ಆದೇಶವನ್ನು ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿ–1957ರ ನಿಯಮ 10(1)(ಡಿ) ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ತಿದ್ದುಪಡಿ ವಿನಿಯಮಗಳು–2025ರ ಅನ್ವಯ ಜಾರಿಗೊಳಿಸಲಾಗಿದೆ.





