ರಾಜ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದನ್ನು ವಿರೋಧಿಸಿ ಎಐಡಿಎಸ್ಒ ರಾಜ್ಯ ಸಮಿತಿ ಕರೆ ನೀಡಿರುವ 50 ಲಕ್ಷ ಸಹಿ ಸಂಗ್ರಹ ಅಭಿಯಾನ ಹಿನ್ನೆಲೆಯಲ್ಲಿ ಶನಿವಾರ ಕಲಬುರಗಿ ನಗರದ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಯಿತು.
ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ತುಳಜರಾಮ ಎನ್.ಕೆ ಮಾತನಾಡಿ, ʼರಾಜ್ಯದಲ್ಲಿ ಒಟ್ಟು 23,436 ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ದಾಖಲಾತಿ ಇರುವ 6 ಸಾವಿರ ಶಾಲೆಗಳಿವೆ, 7,821 ಏಕೋಪಾಧ್ಯಾಯ ಶಾಲೆಗಳಿವೆ. 3,500ಕ್ಕೂ ಹೆಚ್ಚು ಶಾಲೆಗಳಲ್ಲಿ ಬಳಕೆಗೆ ಯೋಗ್ಯ ಶೌಚಾಲಯ ವ್ಯವಸ್ಥೆ ಇಲ್ಲ. ಹಲವು ಶಾಲೆಗಳ ಕಟ್ಟಡಗಳು ವರ್ಷಗಳಿಂದ ದುರಸ್ತಿ ಕಾಣದೇ ಛಾವಣಿಗಳು ಸೋರುತ್ತಿವೆ. ಎಲ್ಲದಕ್ಕಿಂತ ಮುಖ್ಯವಾಗಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 59 ಸಾವಿರಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆʼ ಎಂದರು.
ʼಆರಂಭದಲ್ಲಿ ವಿಲೀನಕ್ಕೆ 10ಕ್ಕಿಂತ ಕಡಿಮೆ ದಾಖಲಾತಿ ಇರುವ 3,457 ಸರ್ಕಾರಿ ಪ್ರಾಥಮಿಕ ಶಾಲೆ ಗುರುತಾಗಿದ್ದವು. ಇತ್ತೀಚೆಗೆ ಬಿಡುಗಡೆಯಾದ ವರದಿ ಪ್ರಕಾರ ರಾಜ್ಯದಲ್ಲಿ ಕಡಿಮೆ ದಾಖಲಾತಿ ಇರುವ ಪ್ರಾಥಮಿಕ ಶಾಲೆಗಳ ಸಂಖ್ಯೆ ಪ್ರಸ್ತುತ 6,000 ಕ್ಕೆ ದಾಟಿದೆ. ಎಲ್ಲವೂ ವಿಲೀನವಾದರೆ, ರಾಜ್ಯದಲ್ಲಿ ಶೇ25ರಷ್ಟು ಸರ್ಕಾರಿ ಶಾಲೆಗಳಿಗೆ ಬೀಗ ಬೀಳಲಿದೆ. ಇದರಿಂದ 50 ಸಾವಿರಕ್ಕೂ ಅಧಿಕ ಮಕ್ಕಳ ಭವಿಷ್ಯ ಆತಂಕಕ್ಕೆ ಒಳಪಡಲಿದೆ. ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ಎದುರಿಸುತ್ತಿರುವ ಯಾವ ಗಂಭೀರ ಸಮಸ್ಯೆಗಳನ್ನು ಪರಿಹರಿಸದೇ, ಕಡಿಮೆ ದಾಖಲಾತಿ ಹೆಸರಲ್ಲಿ ಶಾಲೆಗಳನ್ನು ಮುಚ್ಚುತ್ತಿರುವುದು ಬಡವರ ಮಕ್ಕಳಿಂದ ಶಾಶ್ವತವಾಗಿ ಶಿಕ್ಷಣವನ್ನು ಕಿತ್ತುಕೊಳ್ಳುವ ಹುನ್ನಾರವಾಗಿದೆʼ ಎಂದರು.

ಸರ್ಕಾರಿ ಶಾಲೆಗಳನ್ನು ಉಳಿಸಲು ಎಐಡಿಎಸ್ಒ ಕರೆ ನೀಡಿರುವ 50 ಲಕ್ಷ ಸಹಿಸಂಗ್ರಹ ಅಭಿಯಾನದಲ್ಲಿ ಎಲ್ಲರೂ ಭಾಗವಹಿಸಿ. ಅವೈಜ್ಞಾನಿಕ ಮತ್ತು ಅಪ್ರಜಾತಾಂತ್ರಿಕ ಜನ ವಿರೋಧಿ ನಿರ್ಧಾರವನ್ನು ಕೈಬಿಡಬೇಕು. ಈ ಕೂಡಲೇ ಹಾಜರಾತಿ ಕಡಿಮೆಯಿರುವ ಶಾಲೆಗಳನ್ನು ಮುಚ್ಚುವ ಬದಲು ಅವಶ್ಯಕ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಹೋರಾಟಕ್ಕೆ ಮುಂದಾಗಬೇಕುʼ ಎಂದು ಕರೆನೀಡಿದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಎಸ್ಸೆಸ್ಸೆಲ್ಸಿ ಫಲಿತಾಂಶ ಕುಸಿತಕ್ಕೆ ಜಿಲ್ಲಾಡಳಿತ ಕಾರಣ : ಗೋಪಾಲ ನಾಟೇಕಾರ
ಅಭಿಯಾನದಲ್ಲಿ ಎಐಡಿಎಸ್ಓ ಜಿಲ್ಲಾ ಖಜಾಂಚಿ ವೆಂಕಟೇಶ ದೇವದುರ್ಗ, ಉಪಾಧ್ಯಕ್ಷರಾದ ಪ್ರೀತಿ ದೋಡ್ಡಮನಿ, ಗೋವಿಂದ ಯಳವರ ಹಾಗೂ ಸದಸ್ಯರಾದ ಯುವರಾಜ್, ಅಜಯ, ಬಾಬು, ಚೆನ್ನಮ್ಮ, ಯಲ್ಲಾಲಿಂಗ ಮತ್ತಿತರರಿದ್ದರು.