ಜೂನ್ 21ರಂದು ನಡೆಯಲಿರುವ ನೀಟ್ ಮರು ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಯಾವುದೇ ಅಡೆತಡೆಗಳಿಲ್ಲದೆ ನಡೆಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ. ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಜತೆಗೆ ಭದ್ರತೆ ಮತ್ತು ಶಿಸ್ತು ಕಾಪಾಡಲು ವಿಶೇಷ ಗಮನ ಹರಿಸುವಂತೆ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ‘ನಗರದ ಸುಮಾರು 20 ಪರೀಕ್ಷಾ ಕೇಂದ್ರಗಳಲ್ಲಿ 9 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಹೀಗಾಗಿ ಪರೀಕ್ಷಾ ಕೇಂದ್ರಗಳಲ್ಲಿ ಮೂಲಸೌಕರ್ಯಗಳ ಕೊರತೆ ಉಂಟಾಗದಂತೆ ಮುಂಚಿತವಾಗಿ ಪರಿಶೀಲನೆ ನಡೆಸಬೇಕು’ ಎಂದು ತಿಳಿಸಿದರು.
‘ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ, ಕುಡಿಯುವ ನೀರು, ನಿರಂತರ ವಿದ್ಯುತ್ ಪೂರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಜವಾಬ್ದಾರಿಯನ್ನು ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಿಸಬೇಕು. ಪರೀಕ್ಷಾ ದಿನದಂದು ಯಾವುದೇ ಗೊಂದಲ ಅಥವಾ ತೊಂದರೆ ಉಂಟಾಗದಂತೆ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯ ಸಾಧಿಸಬೇಕು’ ಎಂದು ಸೂಚಿಸಿದರು.
‘ಪರೀಕ್ಷೆಯ ವಿಶ್ವಾಸಾರ್ಹತೆ ಕಾಪಾಡುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಅಲ್ಲದೆ, ಕೇಂದ್ರಗಳ ಬಳಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಸೂಕ್ತ ಭದ್ರತಾ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ’ ನೀಡಿದರು.
‘ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಫೋನ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳನ್ನು ಕೊಂಡೊಯ್ಯಲು ಅವಕಾಶವಿರುವುದಿಲ್ಲ. ಅಭ್ಯರ್ಥಿಗಳು ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ’ ಜಿಲ್ಲಾಧಿಕಾರಿ ಮನವಿ ಮಾಡಿದರು.
ಇದನ್ನು ಓದಿದ್ದೀರಾ? ಯಾದಗಿರಿ | 50ಕ್ಕೂ ಹೆಚ್ಚು ಜನ ಅಸ್ವಸ್ಥ, ಅಧಿಕಾರಿಗಳು ನಿದ್ರೆಯಲ್ಲಿ? ಅಮಾನತಿಗೆ ಶರಣರೆಡ್ಡಿ ಆಗ್ರಹ
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅತ್ತೂರು ಶ್ರೀನಿವಾಸುಲು, ಡಿಸಿಪಿ ಶಾಲೂ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಶಿಖರ್ ಮೋಘಾ, ಪರೀಕ್ಷೆಯ ನಗರ ಸಂಯೋಜಕ ಭೂಪೇಂದ್ರ, ವಿಟಿಯು ಪ್ರಾಧ್ಯಾಪಕ ಶಂಭುಲಿಂಗ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.





